ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿ.13 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಬಿ.ರಹಮಾನ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ʼಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ, ಸಿವಿಲ್ ಪ್ರಕರಣ, ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್ ಪ್ರಕರಣ, ರಾಜಿ ಆಗಬಹುದಾದ ಅಪರಾಧಿಕ ಪ್ರಕರಣ, ಕೌಟುಂಬಿಕ, ಕಂದಾಯ ಪ್ರಕರಣಗಳಲ್ಲಿ ರಾಜಿ ಪ್ರಕರಣ, ಕಾರ್ಮಿಕರ, ಬ್ಯಾಂಕ್ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆʼ ಎಂದರು.
ʼಈ ಹಿಂದೆ ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಲೋಕ ಅದಾಲತ್ನಲ್ಲಿ ಜಿಲ್ಲೆಯಾದ್ಯಂತ ಒಟ್ಟು 38,038 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಅವುಗಳಲ್ಲಿ ಬಾಕಿ ಉಳಿದ 9,899 ಪ್ರಕರಣಗಳನ್ನು ಹಾಗೂ 28,139 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆʼ ಎಂದರು.
ʼಈ ಬಾರಿ ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹೆಚ್ಚು ಇತ್ಯರ್ಥಗೊಳಿಸಲು ಯೋಜನೆ ರೂಪಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 29,124 ಪ್ರಕರಣಗಳು ಪೆಂಡಿಂಗ್ ಇದ್ದು ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಿದ್ದು, ಎಲ್ಲಾ ಪೂರ್ವ ತಯಾರಿ ಮಾಡಿಕೊಂಡಿದ್ದೇವೆ. ಜಿಲ್ಲೆಯಲ್ಲಿ ಒಟ್ಟು 17 ಲೋಕ ಅದಾಲತ್ ಬೆಂಚ್ಗಳನ್ನು ರಚಿಸಲಾಗಿದೆ. ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯ ಶುಲ್ಕ ವಾಪಸ್ ಸಿಗಲಿದೆ. ಮೇಲ್ಮನವಿ ಮಾಡಲು ಅವಕಾಶ ಇರುವುದಿಲ್ಲ ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಅವಕಾಶ ಇರುತ್ತದೆ. ಯಾವುದೇ ಖರ್ಚು ವೆಚ್ಚ ಇಲ್ಲದೆ ಶೀಘ್ರವಾಗಿ ಪ್ರಕರಣಗಳು ಇತ್ಯರ್ಥವಾಗುತ್ತವೆʼ ಎಂದು ತಿಳಿಸಿದರು.
ʼಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೋಡೆ ಮಾತನಾಡಿ, ʼನ.3ರಂದು ವಿವಿಧ ಇಲಾಖೆಗಳ ಸಭೆ ಸೇರಿ ಹಲವು ಪ್ರಕರಣಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಡಿ.13 ರಂದು ನಡೆಯುವ ರಾಷ್ಟ್ರೀಯ ಬೃಹತ್ ಲೋಕ ಆದಾಲತ್ನಲ್ಲಿ ರಾಜಿ ಸಂಧಾನದಿಂದ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಉತ್ತಮ ಅವಕಾಶವಿದ್ದು, ಕಕ್ಷಿದಾರರಿಗೆ ಯಾವುದೇ ಖರ್ಚು ವೆಚ್ಚ ಇರುವುದಿಲ್ಲ. ಬೃಹತ್ ಲೋಕ ಆದಾಲತ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಕ್ಷಿದಾರರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕುʼ ಎಂದರು.
ಇದನ್ನೂ ಓದಿ : ಬೀದರ್ | ಕಬ್ಬಿಗೆ ಎಫ್ಆರ್ಪಿ ದರ ನಿಗದಿಗೆ ಕಿಸಾನ್ ಸಭಾ ಆಗ್ರಹ
ಪ್ರಾಧಿಕಾರದ ಸಿಬ್ಬಂದಿ ಜಗದೀಶ್ವರ ದೊರೆ, ಆಕಾಶ ಸಜ್ಜನಶೆಟ್ಟಿ ಸೇರಿದಂತೆ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.





