ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಸಹಯೋಗದೊಂದಿಗೆ ಬೀದರ್ ನಗರದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್.ಮರೀಗೌಡರ 109ನೇ ಜಯಂತಿ ಆಚರಿಸಲಾಯಿತು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ದಿ. ಡಾ.ಎಂ.ಎಚ್.ಮರೀಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ತೋಟಗಾರಿಕೆ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ʼಬೆಂಗಳೂರಿನ ಲಾಲ್ಬಾಗ್ ಸ್ಥಾಪನೆ, ಹಲವು ತೋಟಗಾರಿಕೆ ಕ್ಷೇತ್ರಗಳ, ನರ್ಸರಿಗಳ ಸ್ಥಾಪನೆ ಹಾಪ್ಕಾಮ್ಸ್ ಅಭಿವೃದ್ಧಿಗಳ ಮೂಲಕ ಕರ್ನಾಟಕದಲ್ಲಿ ತೋಟಗಾರಿಕೆ ಕ್ಷೇತ್ರವು ವಿಜೃಂಭಿಸುವಲ್ಲಿ ಡಾ.ಎಂ.ಎಚ್.ಮರೀಗೌಡರ ಅವರ ಕೊಡುಗೆ ಅಪಾರವಾಗಿದೆʼ ಎಂದು ಸ್ಮರಿಸಿದರು.
ರಾಯಚೂರ ಕೃಷಿ ವಿಶ್ವವಿದ್ಯಾಲಯದ ನಿವೃತ ಶಿಕ್ಷಣ ನಿರ್ದೇಶಕ ಡಾ.ಎಂ.ಜಿ.ಪಾಟೀಲ ಮಾತನಾಡಿ, ‘ಕರ್ನಾಟಕದಲ್ಲಿ ತೋಟಗಾರಿಕೆ ಕ್ಷೇತ್ರ ಮುಂಚೂಣಿಗೆ ಬರಲು ಮರೀಗೌಡರ ದೂರ ದೃಷ್ಟಿ ವ್ಯಕ್ತಿತ್ವವೇ ಮುಖ್ಯ ಕಾರಣ. ವಿದ್ಯಾರ್ಥಿಗಳು ನೌಕರಿಗಾಗಿ ಮಾತ್ರ ಅಧ್ಯಯನ ನಡೆಸದೆ ಸ್ವಯಂ ಉದ್ಯಮಿಗಳಾಗಲು ವ್ಯಾಸಂಗ ಮಾಡಬೇಕುʼ ಎಂದು ಕರೆ ನೀಡಿದರು.
ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ ಮಾತನಾಡಿ, ʼಕೃಷಿ ಆಹಾರ ಭದ್ರತೆಗಾಗಿದ್ದರೆ ತೋಟಗಾರಿಕೆ ಪೌಷ್ಟಿಕಾಂಶ ಹಾಗೂ ಆರ್ಥಿಕ ಭದ್ರತೆಗಾಗಿದೆ. ತೋಟಗಾರಿಕೆ ಮಹಾವಿದ್ಯಾಲ ಬೀದರ ಪ್ರತಿ ವರ್ಷ ಸುಮಾರು 15 ಲಕ್ಷ ಮೌಲ್ಯದ ತೋಟಗಾರಿಕೆ ಸಸಿಗಳನ್ನು ರೈತರಿಗೆ ತಲುಪಿಸುವ ಮುಖಾಂತರ ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆʼ ಎಂದು ಹೇಳಿದರು.
ಬೀದರ ಜಿಲ್ಲಾ ಪಂಚಾಯತ ತೋಟಗಾರಿಕೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಬಾವುಗೆ ಮಾತನಾಡಿ, ʼತೋಟಗಾರಿಕೆ ಇಲಾಖೆಯಿಂದ ಲಭ್ಯವಿರುವ ವಿವಿಧ ಯೋಜನೆಗಳನ್ನು ರೈತರು ಸದುಪಯೋಗ ಪಡೆದುಕೊಳ್ಳಬೇಕುʼ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ರೈತರಿಗೆ ಉಚಿತವಾಗಿ ಪೌಷ್ಟಿಕ ಕೈತೋಟ ಕಿಟ್ ಹಾಗೂ ಸಂಪದ್ಭರಿತ ಎರೆ ಗೊಬ್ಬರ ನೀಡಲಾಯಿತು.
ಈ ಸುದ್ದಿ ಓದಿದ್ದೀರಾ? ಜೀವಂತ ತಂದೆಗೆ ಶ್ರದ್ಧಾಂಜಲಿ ಏರ್ಪಡಿಸಿದ್ದ ಪುತ್ರ; ಸುದ್ದಿ ತಿಳಿದು ಗ್ರಾಮಕ್ಕೆ ಓಡಿಬಂದ ತಂದೆ
ಕಲಬುರಗಿ ಕೃಷಿ ಮಹಾವಿದ್ಯಾಲಯದ ನಿವೃತ್ತ ಡೀನ್ ಡಾ.ಸುರೇಶ ಪಾಟೀಲ, ಪ್ರಗತಿಪರ ರೈತರು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ತೋಟಗಾರಿಕೆ ಮಹಾವಿದ್ಯಾಲಯ ಸಿಬ್ಬಂದಿಗಳು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





