ಅತಿವೃಷ್ಟಿಯಿಂದ ಹಾನಿಗೀಡಾದ ಪ್ರತಿ ಎಕರೆಗೆ ₹25,000 ಬೆಳೆ ಹಾನಿ ಪರಿಹಾರ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಔರಾದ್ ಪಟ್ಟಣದಲ್ಲಿ ಶನಿವಾರ ಶಾಸಕ ಪ್ರಭು ಚವ್ಹಾಣ ನೇತ್ರತ್ವದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.
ಪಟ್ಟಣದ ಎಪಿಎಂಸಿ ವೃತ್ತದಿಂದ ಆರಂಭವಾದ ಮೆರವಣಿಗೆ ಮುಖ್ಯರಸ್ತೆ ಮುಖಾಂತರ ಬಸವೇಶ್ವರ ವೃತ್ತದಲ್ಲಿ ಸಮಾವೇಶಗೊಂಡಿತು.
ಪ್ರತಿಭಟನಾಕಾರರು ʼʼರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರʼ, ʼಸಂತಸ್ತರನ್ನು ನಡು ನೀರಿನಲ್ಲಿ ಬಿಟ್ಟ ಸರ್ಕಾರಕ್ಕೆ ಧಿಕ್ಕಾರʼ, ʼಬೆಳೆ ಹಾನಿ ಪರಿಹಾರ ನೀಡದ ಕಾಂಗ್ರೆಸ್ ಸರ್ಕಾರʼ, ʼಕಲ್ಯಾಣ ಕರ್ನಾಟಕದ ರೈತರು ಬೀದಿಗೆ, ಸಿದ್ದರಾಮಯ್ಯ ನಿದ್ದೆಗೆʼ, ʼನೆರೆಯಿಂದ ನೊಂದ ರೈತರಿಗೆ ಪರಿಹಾರ ಯಾವಾಗ?ʼ ಎಂಬ ಭಿತ್ತಿಪತ್ರಗಳನ್ನು ಕೈಯಲ್ಲಿ ಹಿಡಿದು ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಪ್ರಭು ಚವ್ಹಾಣ ಅವರು ಕೊರಳಲ್ಲಿ ಹಸಿರು ಶಾಲು, ತಲೆಗೆ ಕಪ್ಪು ಬಣ್ಣದ ಟವೆಲ್ ಕಟ್ಟಿಕೊಂಡು ಎತ್ತಿನ ಬಂಡಿಯಲ್ಲಿ ನಿಂತು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್ ಮಹೇಶ ಪಾಟೀಲ್ ಅವರಿಗೆ ಸಲ್ಲಿಸಿದರು.

ಶಾಸಕ ಪ್ರಭು ಚವ್ಹಾಣ ಮಾತನಾಡಿ, ʼಮುಂಗಾರು ಹಂಗಾಮಿನಲ್ಲಿ ಸುರಿದ ಧಾರಾಕಾರ ಮಳೆಗೆ ಔರಾದ್ ಕ್ಷೇತ್ರದಲ್ಲಿ ಬೆಳೆದಿದ್ದ ಸೋಯಾಬಿನ್, ತೊಗರಿ, ಹೆಸರು, ಉದ್ದು ಮತ್ತಿತರರ ಬೆಳೆಗಳು ಸಂಪೂರ್ಣ ಹಾಳಾಗಿವೆ. ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿ ಹೋಗಿದೆ. ಆದರೆ, ಸರ್ಕಾರದ ಕೃಷಿ, ಕಂದಾಯ ಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಲು ಬಂದಿಲ್ಲ. ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲದಂತಾಗಿದ್ದು, ಅವರು ತಮ್ಮ ಕುರ್ಚಿ ಗುದ್ದಾಟದಲ್ಲಿ ನಿರತರಾಗಿದ್ದಾರೆ. ಮಳೆ, ಪ್ರವಾಹದಿಂದ ಆರ್ಥಿಕ ಸಂಕಷ್ಟಕ್ಕೀಡಾದ ರೈತರು ಕಂಗಾಲಾಗಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.
ʼಬರುವ ದೀಪಾವಳಿ ಮುಂಚೆ ರೈತರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಪಾವತಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದ್ದರು. ಆದರೆ, ಇಲ್ಲಿಯವರೆಗೆ ರೈತರ ಖಾತೆಗೆ ಹಣ ಜಮೆ ಆಗಿಲ್ಲ. ಮುಂದಿನ ಹತ್ತು ದಿನಗಳಲ್ಲಿ ಜಿಲ್ಲೆಯ ರೈತರ ಖಾತೆಗೆ ಬೆಳೆ ಪರಿಹಾರ ಪಾವತಿಸಬೇಕು. ಪ್ರತಿ ಎಕರೆಗೆ ₹25,000 ಪರಿಹಾರ ಹಾಗೂ ಹಿಂಗಾರು ಬೀಜ ಉಚಿತವಾಗಿ ವಿತರಿಸಬೇಕು. ಇಲ್ಲದಿದ್ದರೆ ಉಸ್ತುವಾರಿ ಸಚಿವರ ಭಾಲ್ಕಿಯ ಮನೆ ಎದುರು ಧರಣಿ ನಡೆಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ : ಬೀದರ್ | ಅಂತರ-ರಾಜ್ಯ ವಲಸೆ ಕಾರ್ಮಿಕರಿಗೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶಿವರಾಜ ಅಲ್ಮಾಜೆ ಸೇರಿದಂತೆ ಮುಖಂಡರಾದ ಪೀರಪ್ಪಾ ಔರಾದೆ, ರಾಜಶೇಖರ ನಾಗಮೂರ್ತಿ, ರಾಮಶೆಟ್ಟಿ ಪನ್ನಾಳೆ, ಮಹೇಶ್ವರ ಸ್ವಾಮಿ, ಬಸವರಾಜ ಹಳ್ಳೆ, ನಾಗಶೆಟ್ಟಿ ಗಾದಗೆ, ಅಶೋಕ ಅಲ್ಮಾಜೆ, ಅಶೋಕ ಶೆಂಬೆಳ್ಳಿ ಹಾಗೂ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.





