ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರನ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಸಮನ್ವಯ ಸಮಿತಿ ಒತ್ತಾಯಿಸಿದೆ.
ಈ ಕುರಿತು ಸಮಿತಿಯ ಪದಾಧಿಕಾರಿಗಳು ಬುಧವಾರ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್ ಮಹೇಶ ಪಾಟೀಲ್ ಅವರಿಗೆ ಸಲ್ಲಿಸಿದರು.
ಸಮಿತಿಯ ತಾಲ್ಲೂಕಾಧ್ಯಕ್ಷ ರಾಜಕುಮಾರ ಡೊಂಗರೆ ಮಾತನಾಡಿ, ʼಅಕ್ಟೋಬರ್ 6ರಂದು ಸರ್ವೋಚ್ಚ ನ್ಯಾಯಾಲಯದ ಆವರಣದಲ್ಲಿ ನಡೆದ ಈ ಘಟನೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಶೂ ಎಸೆದ ವಕೀಲ ರಾಕೇಶ್ ಕಿಶೋರನ ಕೃತ್ಯದಿಂದ ದೇಶ ಹಾಗೂ ದೇಶದ ಸಂವಿಧಾನಕ್ಕೆ ಅಪಮಾನಿಸಿದಂತಿದೆ. ಈ ಘಟನೆಯನ್ನು ತೀವ್ರ ತನಿಖೆ ನಡೆಸಿ ತಪ್ಪಿತಸ್ಥ ಪೂರ್ವಗ್ರಹ ಪೀಡಿತ ವಕೀಲನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.
ಇದನ್ನೂ ಓದಿ : ಇದು ಆಕಸ್ಮಿಕವಲ್ಲ, ಮಹಾ ಷಡ್ಯಂತ್ರದ ಭಾಗ
ಈ ಸಂದರ್ಭದಲ್ಲಿ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಂಡರಿ ಆಡೆ, ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಾಜಿ ಅಮರವಾಡಿ, ಗೊಂಡ್ ನೌಕರ ಸಂಘದ ಅಧ್ಯಕ್ಷ ಗಣಪತಿ ಮೇತ್ರೆ, ಕಲ್ಯಾಣ ಕರ್ನಾಟಕ ನೌಕರ ಸಂಘದ ಅಧ್ಯಕ್ಷ ರವಿ ಡೋಳೆ, ತಾಲೂಕು ಮಟ್ಟದ ಅಧಿಕಾರಿಗಳಾದ ಬಿ.ಜೆ.ರಂಗೇಶ, ಸಿಡಿಪಿಒ ಇಮಾಲಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅನೀಲಕುಮಾರ್, ಆರೋಗ್ಯ ಇಲಾಖೆಯ ಅನೀತಾ ಸೇರಿದಂತೆ ಮತ್ತಿತರರಿದ್ದರು.





