ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮಠ ಮಾನ್ಯಗಳಿಗೆ ನೀಡಿರುವ ಅನುದಾನಗಳ ಕಾಮಗಾರಿ ಪ್ರಗತಿ ಸೇರಿದಂತೆ ವಿವಿಧ ವಿಷಯಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಮಠ ಮಾನ್ಯಗಳಿಗೆ ನೀಡಿರುವ ಅನುದಾನಗಳ ಕಾಮಗಾರಿಗಳನ್ನು ವೇಗ ಗತಿಯನ್ನು ಹೆಚ್ಚಿಸಿ, ನಿರ್ದಿಷ್ಟ ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕು ಹಾಗೂ ಸಮಯ ವ್ಯರ್ಥಕ್ಕೆ ಅವಕಾಶ ಕಲ್ಪಿಸಬಾರದುʼ ಎಂದರು.
ʼಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ 2023-24ರಲ್ಲಿ ₹6 ಕೋಟಿಯಲ್ಲಿ 13 ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದ್ದು, ಮೊದಲ ಕಂತಾಗಿ ₹3 ಕೋಟಿ ಪಾವತಿಯಾಗಿದೆ. ಚೆಂಜ್ ಆಫ್ ಪ್ಲೇಸ್ ಮತ್ತು ಚೆಂಜ್ ಆಫ್ ವರ್ಕ್ ಬಗ್ಗೆ ಪ್ರಸ್ತಾವನೆ ಕಳುಹಿಸಿ ಹಾಗೂ ಕಾಮಗಾರಿಗಳು ಫೆಬ್ರವರಿ ತಿಂಗಳಲ್ಲಿ ಪೂರ್ಣಗೊಳಿಸಬೇಕುʼ ಎಂದರು.
ʼಅತಿವೃಷ್ಟಿಯಿಂದಾಗಿ ಹಾನಿಯಾದ ಬೆಳೆಗೆ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ಮತ್ತು ರಾಜ್ಯ ಸರ್ಕಾರದಿಂದ ರೈತರಿಗೆ ಪರಿಹಾರ ನೀಡಲಾಗಿದೆ. ಕೆಲವರಿಗೆ ಪರಿಹಾರದ ಹಣ ಜಮಾ ಆಗಿಲ್ಲ ಎಂದು ದೂರುಗಳು ಬರುತ್ತಿವೆ. ಆದ್ದರಿಂದ ಏನು ಸಮಸ್ಯೆ ಎಂದು ತಿಳಿದು ತಕ್ಷಣ ಪರಿಹರಿಸಬೇಕು. ತೊಗರಿ ಖರೀದಿ ಕೇಂದ್ರಕ್ಕೆ ಸಂಬಂಧಿಸಿದಂತೆ ಈಗಾಗಲೇ ಕ್ಲಿಯರೆನ್ಸ್ ಸಿಕ್ಕಿದ್ದು, ರೈತರಿಗೆ ಅನುಕೂಲ ಆಗುವಂತೆ ತೊಗರಿ ಖರೀದಿ ಕೇಂದ್ರಗಳು ಸ್ಥಾಪಿಸಬೇಕುʼ ಎಂದರು.
ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸುಧಾರಣೆ ತರುವುದರ ಮೂಲಕ ಫಲಿತಾಂಶ ಪ್ರಮಾಣ ಹೆಚ್ಚಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ದುಸ್ಥಿತಿಯಲ್ಲಿರುವ ರಸ್ತೆಗಳನ್ನು ದುರಸ್ತಿ ಮಾಡಲು ಹಾಗೂ ವಿದ್ಯುತ್ ಕಂಬಗಳ ಸಮಸ್ಯೆಗಳನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ ಸಚಿವರು, ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಆಗದಂತೆ ಕ್ರಮ ವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ : ಕಲಬುರಗಿ | ಕೇಂದ್ರೀಯ ವಿವಿ ಸಾಹಿತ್ಯಿಕವಾಗಿ ಅದೆಷ್ಟು ದಿವಾಳಿಯಾಗಿದೆ: ಸಾಹಿತಿಗಳ ಆಕ್ರೋಶ
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಅರಣ್ಯ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.





