ಜಿಲ್ಲಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್ಗೆ ಹೆಚ್ಚುವರಿ ₹8,500 ಪರಿಹಾರ ಸೇರಿದಂತೆ ಒಟ್ಟಾರೆ ₹300 ಕೋಟಿ ಬೆಳೆ ಹಾನಿ ಪರಿಹಾರವನ್ನು ಅ.30ರೊಳಗೆ ರೈತರ ಖಾತೆಗಳಿಗೆ ಪಾವತಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.
ಬೀದರ್ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ʼನಾಳೆ ಸಂಜೆಯೊಳಗೆ ಮಳೆ ಹಾನಿ ಪ್ರದೇಶದ ತಹಶೀಲ್ದಾರರು ಪರಿಹಾರದ ಪೋರ್ಟಲ್ನಲ್ಲಿ ಹಾನಿಯ ಪ್ರಮಾಣವನ್ನು ಕಡ್ಡಾಯವಾಗಿ ದಾಖಲಿಸಿ, ಪರಿಹಾರ ನೀಡಿಕೆಗೆ ತುರ್ತು ಕ್ರಮವಹಿಸಬೇಕುʼ ಎಂದು ಸೂಚನೆ ನೀಡಿದರು.
ʼಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ನಿಯಮದಂತೆ ₹170 ಕೋಟಿ ರೂಪಾಯಿ ಪರಿಹಾರವನ್ನು ಈಗಾಗಲೇ ಪಾವತಿಸಲಾಗುತ್ತಿದೆ. ಅಕ್ಟೋಬರ್ 30ರೊಳಗೆ ₹300 ಕೋಟಿ ಪರಿಹಾರ ಮೊತ್ತ ಪಾವತಿಸಲಾಗುವುದು. ಅಕಾಲಿಕ ಮಳೆಯಿಂದ ಉಂಟಾಗಿರುವ ಜೀವಹಾನಿ, ಬೆಳೆಹಾನಿ, ಮನೆ ಹಾನಿ, ಜಾನುವಾರು ಹಾನಿಗೆ ದೀಪಾವಳಿಯೊಳಗೆ ಪರಿಹಾರ ನೀಡುವುದಾಗಿ ಪ್ರಕಟಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮಾನವೀಯ ನೆಲೆಗಟ್ಟಿನಲ್ಲಿ ಹಗಲಿರುಳು ಶ್ರಮಿಸಿ, ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದವರ ನೆರವಿಗೆ ಧಾವಿಸಬೇಕುʼ ಎಂದು ನಿರ್ದೇಶಿಸಿದರು.
ಬಸವಕಲ್ಯಾಣದಲ್ಲಿ 47, ಭಾಲ್ಕಿ 38 ಹಾಗೂ ಬೀದರ್ ತಾಲೂಕಿನಲ್ಲಿ ಮನೆ ಹಾನಿಗೊಳಗಾದವರಿಗೆ ಪರಿಹಾರ ನೀಡಿಕೆಯಲ್ಲಿ ವಿಳಂಬವಾಗಿರುವ ಕುರಿತಂತೆ ಆಯಾ ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡ ಈಶ್ವರ ಖಂಡ್ರೆ ಅವರು, ಇಂದು ಅಥವಾ ನಾಳೆಯೊಳಗೆ ಮನೆ ಹಾನಿಯ ಪರಿಹಾರ ಸಂತ್ರಸ್ತರಿಗೆ ದೊರಕುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ತಿಳಿಸಿ, ವಿಳಂಬ, ಕರ್ತವ್ಯಲೋಪ, ನಿರ್ಲಕ್ಷ್ಯ ತೋರಿರುವ ಅಧಿಕಾರಿ, ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದರು.
ʼಮಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಪೋರ್ಟಲ್ ನಲ್ಲಿ ದಾಖಲಿಸುವ ಪ್ರತಿಯೊಂದು ಮಾಹಿತಿಯನ್ನೂ ಗ್ರಾಮ ಪಂಚಾಯತಿ, ತಹಶೀಲ್ದಾರ್ ಕಚೇರಿ ಮತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಬಹಿರಂಗವಾಗಿ ಪ್ರಕಟಿಸಿ, ಡಂಗೂರ ಸಾರಿ, ಆಕ್ಷೇಪಣೆ ಆಹ್ವಾನಿಸಿ, ಯಾವುದೇ ಸಂತ್ರಸ್ತರ ಮಾಹಿತಿ ಕಣ್ತಪ್ಪಿನಿಂದ ಬಿಟ್ಟುಹೋಗಿದ್ದರೆ ಆಗ ಅವರ ಹೆಸರು ಸೇರ್ಪಡೆ ಮಾಡಲು ಸಹಕಾರಿ ಆಗುತ್ತದೆʼ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಬೆಳೆ ವಿಮೆಯಡಿ ಬೆಳೆ ಋತುವಿನ ಮಧ್ಯದಲ್ಲಿ ವಿಕೋಪ ಉಂಟಾದರೆ ಪರಿಹಾರದ ಅವಕಾಶ ಕಲ್ಪಿಸಿದರೆ (ಮಿಡ್ ಸೀಸನ್ ಅಡ್ವರ್ಸಿಟಿ ಇನ್ವೋಕ್) ರೈತರಿಗೆ ಸೂಕ್ತ ಪರಿಹಾರ ಸಿಗುತ್ತದೆ. ಇನ್ವೋಕ್ ಆಗದಿದ್ದರೆ ರೈತರಿಗೆ ಅನ್ಯಾಯ ಆಗುತ್ತಿದೆ. ಕೂಡಲೇ ಈ ಬಗ್ಗೆ ಕ್ರಮವಹಿಸಿ ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನೆಲದ ಮೇಲೆ ಬಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಪ್ರಸ್ತಾಪಿಸಿದಾಗ, ಅದಕ್ಕೆ ಆಘಾತ ವ್ಯಕ್ತಪಡಿಸಿದ ಈಶ್ವರ ಖಂಡ್ರೆ ಅವರು, ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಚಿಸಿ, ವಿದ್ಯುತ್ ತಂತಿಗಳು ಜಾಯಿಂಟ್ ಹಾಕಿರುವ ಕಡೆ ಕತ್ತರಿಸಿ ಬೀಳದಂತೆ ಕವರ್ ಕಂಡಕ್ಟರ್ಗಳನ್ನು ಅಳವಡಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಮಾನವ ಹಾನಿ, ಬೆಳೆ, ಮನೆ ಹಾನಿ ಹಾಗೂ ರಸ್ತೆ ಹಾನಿ ಆಗಿದ್ದು, ಕೈಗೊಂಡಿರುವ ಕ್ರಮಗಳೇನು ಎಂಬ ಸಂಪೂರ್ಣ ಮಾಹಿತಿಯನ್ನು ತತ್ ಕ್ಷಣವೇ ಆಯಾ ಕ್ಷೇತ್ರವ್ಯಾಪ್ತಿಯ ಶಾಸಕರಿಗೆ ಮಾಹಿತಿ ನೀಡುವಂತೆ ಎಲ್ಲಾ ತಹಶೀಲ್ದಾರರುಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ : ಸರ್ದಾರ್ ವಲ್ಲಭಬಾಯಿ ಪಟೇಲ್ ಆರ್ಎಸ್ಎಸ್ ಎರಡು ಬಾರಿ ಬ್ಯಾನ್ ಮಾಡಿದ್ರು : ಸಚಿವ ಸಂತೋಷ ಲಾಡ್
ಪೌರಾಡಳಿತ ಸಚಿವ ರಹೀಂ ಖಾನ್, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಶಾಸಕರಾದ ಭೀಮರಾವ್ ಪಾಟೀಲ್, ಚಂದ್ರಶೇಖರ ಪಾಟೀಲ್, ನಗರಸಭೆ ಅಧ್ಯಕ್ಷ ಮಹ್ಮದ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ದಿಲೀಪ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗಂಟಿ, ಬೀದರ ಮಹಾನಗರ ಪಾಲಿಕೆ ಆಯುಕ್ತೆ ರಮ್ಯಾ ರಂಗಸ್ವಾಮಿ, ವಿವಿಧ ಸ್ಥಳೀಯ ಸಂಸ್ಥೆಯ ಅಧ್ಯಕ್ಷರು ಹಾಗೂ ತಾಲ್ಲೂಕಿನ ಎಲ್ಲಾ ತಹಸೀಲ್ದಾರರು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.





