ಜಿಲ್ಲೆಯಲ್ಲಿ ಸುರಿದ ಮಳೆ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಶೀಘ್ರದಲ್ಲಿ ಪರಿಹಾರ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಕಳೆದ ಮೂರು ತಿಂಗಳಿನಿಂದ ನಿರಂತರ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ಬೆಳೆಗಳು ಹಾನಿಗೊಳಗಾಗಿವೆ. ಆದರೆ ಇಂದಿನವರೆಗೆ ರೈತರಿಗೆ ಸರ್ಕಾರದಿಂದ ಯಾವುದೇ ಪರಿಹಾರ ನೀಡಲಾಗಿಲ್ಲ. ಇದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಭಾನುವಾರ ತಿಳಿಸಿದ್ದಾರೆ.
ʼಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ದೀಪಾವಳಿ ಹಬ್ಬಕ್ಕೂ ಮೊದಲು ರೈತರ ಖಾತೆಗೆ ಪರಿಹಾರ ಹಣ ಜಮೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದರೂ, ಆದರೆ, ಇಲ್ಲಿಯವರೆಗೆ ಅದು ನಿಜವಾಗಿಲ್ಲ. ಇದೀಗ ಸಚಿವರು ಅಕ್ಟೋಬರ್ 30ರೊಳಗೆ ಹಣ ನೀಡುವುದಾಗಿ ಹೇಳಿಕೆ ನೀಡಿರುವುದನ್ನು ಸಂಘಟನೆ ಗಮನಿಸಿದೆʼ ಎಂದರು.
ಮಳೆಯಿಂದಾಗಿ ಕೈಗೆ ಬಂದ ಬೆಳೆ ಹಾನಿಯಾದಕ್ಕೆ ರೈತರು ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಹಿಂಗಾರು ಬಿತ್ತನೆಗೆ ಅಗತ್ಯವಾದ ಬೀಜ ಮತ್ತು ಗೊಬ್ಬರ ಖರೀದಿಸಲು ಸಹ ಕೈಯಲ್ಲಿ ಹಣವಿಲ್ಲದ ಸ್ಥಿತಿಯಲ್ಲಿದ್ದಾರೆ. ಸರ್ಕಾರದಿಂದ ನಿರಂತರವಾಗಿ ಕೇವಲ ಭರವಸೆಗಳು ಮಾತ್ರ ಸಿಗುತ್ತಿವೆ ಎಂದು ಸಂಘಟನೆಯ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಸಾವಿನಲ್ಲೂ ಒಂದಾದ ದಂಪತಿ
ʼಅಕ್ಟೋಬರ್ 30ರೊಳಗಾಗಿ ರೈತರ ಖಾತೆಗೆ ಪರಿಹಾರ ಹಣ ಜಮೆ ಆಗದಿದ್ದರೆ ರೈತರು ರಸ್ತೆ ಬಂದ್ ಮಾಡಿ ತೀವ್ರ ಹೋರಾಟ ಆರಂಭಿಸಬೇಕಾಗುತ್ತದೆ. ಅದರಿಂದ ಉಂಟಾಗುವ ಎಲ್ಲ ಪರಿಣಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರೇ ನೇರ ಜವಾಬ್ದಾರರು ಎಂದು ಜಿಲ್ಲಾ ಅಧ್ಯಕ್ಷರು ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ ಅವರು ಎಚ್ಚರಿಸಿದ್ದಾರೆ.





