ಸರ್ಕಾರ ಘೋಷಿಸಿರುವ ಪ್ರತಿ ಟನ್ ಕಬ್ಬಿಗೆ ₹3,100 ಬೆಲೆ ಕೊಡಲೇಬೇಕೆಂದು ಪಟ್ಟು ಹಿಡಿದ ಕಬ್ಬು ಬೆಳೆಗಾರರು ರೈತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ಮತ್ತೆ ಪುನಾರಂಭಿಸಿದ್ದಾರೆ.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ನೇತೃತ್ವದಲ್ಲಿ ಈ ಹಿಂದೆ ಎರಡು ಸಭೆ ನಡೆಸಲಾಗಿತ್ತು. ಜಿಲ್ಲಾಧಿಕಾರಿಗಳು ₹2,850 ನೀಡುವುದಾಗಿ ತಿಳಿಸಿದರು. ಅದಕ್ಕೆ ಒಪ್ಪದ ರೈತರು ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ಬುಧವಾರ ಹುಮನಾಬಾದ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದರು. ಪ್ರತಿಭಟನೆಗೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಸಾಥ್ ನೀಡಿದರು.
ಬುಧವಾರ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿ ಗುರುವಾರ ಮತ್ತೊಂದು ಸಭೆ ಮಾಡುವುದಾಗಿ ರೈತರಿಗೆ ಭರವಸೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರು, ಕಬ್ಬು ಬೆಳೆಗಾರರು ಹಾಗೂ ರೈತರ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.
‘ಈ ವರ್ಷ ಅತಿವೃಷ್ಟಿಯಿಂದಾಗಿ ಬಹುತೇಕ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,100 ದರ ನಿಗದಿಪಡಿಸಬೇಕು’ ಎಂದು ಸಭೆಯಲ್ಲಿ ರೈತ ಮುಖಂಡರು ಆಗ್ರಹಿಸಿದರು
ಅದಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರತಿಕ್ರಿಯಿಸಿ, ‘ರೈತರು ಹಾಗೂ ಕಾರ್ಖಾನೆಗಳು ಇಬ್ಬರೂ ಉಳಿಯಬೇಕು. ಬೀದರ್ ಜಿಲ್ಲೆಯಲ್ಲಿ ಕಬ್ಬಿಗೆ 9.6ರಷ್ಟು ರಿಕವರಿ ಇದೆ. ಹಾವೇರಿಯಲ್ಲಿಯೂ ಸಹ ಇಷ್ಟೇ ಇದೆ. ಅಲ್ಲಿಯ ರೈತರು ₹2,900 ದರಕ್ಕೆ ಒಪ್ಪಿಕೊಂಡಿದ್ದಾರೆ. ನಿಮಗೂ ಅದೇ ದರ ನೀಡುತ್ತೇವೆ’ ಎಂದು ಹೇಳಿದರು.

ಬೀದರ್ ಜಿಲ್ಲೆಯಲ್ಲಿ ಪ್ರತಿ ಟನ್ ಕಬ್ಬಿಗೆ ₹2,900 ದರ ನಿಗದಿಪಡಿಸುವುದಾಗಿ ಎಂದ ಅವರು, ಕಳೆದ ವರ್ಷಕ್ಕಿಂತ ₹250 ಹೆಚ್ಚಿನ ದರ ರೈತರಿಗೆ ಲಭಿಸಲಿದೆ. ಅಲ್ಲದೇ ₹2,900 ದರದಂತೆ ಕಾರ್ಖಾನೆಗಳು ತಪ್ಪದೇ ಜಮೆ ಮಾಡುವಂತೆ ತಾವು ಜವಾಬ್ದಾರಿ ತೆಗೆದುಕೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಬ್ಬಿಗೆ ₹2,900 ಬೆಲೆ ನಿಗದಿಗೆ ಒಮ್ಮತ ಸೂಚಿಸದ ರೈತ ಮುಖಂಡರು ತಮ್ಮ ಹೋರಾಟ ಮುಂದುವರೆಸುವುದಾಗಿ ತಿಳಿಸಿ ಹೊರ ಬಂದರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಕಾರ್ಯಾಲಯ ಎದುರು ಧರಣಿ ಆರಂಭಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನ್ಯಾಯಯುತ ಬೆಲೆ ನಿಗದಿಗೆ ಆಗ್ರಹಿಸಿದರು.
‘ಬೀದರ್ ಜಿಲ್ಲೆಯಲ್ಲಿ ಸುಮಾರು 50 ಸಾವಿರ ಎಕರೆಯಲ್ಲಿ ಕಬ್ಬು ಬೆಳೆಯಲಾಗಿದ್ದು, 15 ಲಕ್ಷ ಟನ್ಗಳಿಗಿಂತ ಅಧಿಕ ಉತ್ಪಾದನೆ ನಿರೀಕ್ಷೆಯಿದೆ. ಈ ಪರಿಸ್ಥಿತಿಯಲ್ಲಿ ರೈತರಿಗೆ ನ್ಯಾಯಯುತ ಬೆಲೆ ನೀಡಬೇಕು. ಕನಿಷ್ಠ ₹3,100 ಬೆಲೆ ಕೊಡದಿದ್ದರೆ ಜಿಲ್ಲಾದ್ಯಂತ ಹೋರಾಟ ಚುರುಕುಗೊಳಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
‘ಜಿಲ್ಲಾಧಿಕಾರಿಗಳು ಈ ಹಿಂದೆ ನಡೆಸಿದ ಎರಡು ಸಭೆಗಳು ವಿಫಲವಾಗಿದವು. ಮೂರನೇ ಸಭೆಯಲ್ಲಿ ಕಬ್ಬಿಗೆ ಸೂಕ್ತ ಬೆಲೆ ನಿಗದಿ ಆಗುವ ನಿರೀಕ್ಷೆಯಿತ್ತು. ಈಗ ಅದೂ ಹುಸಿಯಾಗಿದೆ. ಕಾರ್ಖಾನೆಗಳು ರೈತರನ್ನು ಶೋಷಣೆಗೆ ಒಳಪಡಿಸುತ್ತಿವೆ. ಕಬ್ಬಿಗೆ ಕನಿಷ್ಠ ₹3,100 ಬೆಲೆ ನೀಡಲೇಬೇಕು. ಇಲ್ಲದಿದ್ದರೆ ಹೋರಾಟ ಮುಂದುವರೆಯಲಿದೆ’ ಎಂದು ಹೇಳಿದರು.
ಇದನ್ನೂ ಓದಿ : ಬೀದರ್ | ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡದ ಆರೋಪ : ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿ ಅಮಾನತು
ಧರಣಿಯಲ್ಲಿ ಸಿದ್ರಾಮಪ್ಪಾ ಆಣದೂರೆ, ದಯಾನಂದ ಸ್ವಾಮಿ, ಶಂಕರೆಪ್ಪಾ ಮರ್ಕಲ್, ಕೊಂಡಿಬಾ ಪಾಂಡ್ರೆ, ಶಿವರಾಜ ಪಾಟೀಲ್, ಬಾಬುರಾವ್ ಹೊನ್ನಾ, ನಜೀರ್ ಅಹ್ಮದ್ ಚೊಂಡಿ, ಪ್ರಕಾಶ ಬಾವಗೆ, ಶಾಂತಮ್ಮ ಮೂಲಗೆ, ಶಿವಲೀಲಾ ಹೋಳಸಮುದ್ರ, ಬಸವರಾಜ ಅಷ್ಟೂರೆ, ವಿಜಯಕುಮಾರ ಬಾವಗೆ, ವೀರಾರೆಡ್ಡಿ, ವಿಠಲರಾವ, ನಾಗಶೆಟ್ಟಿ, ಭೀಮರಾವ, ಖಮರ ಪಟೇಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





