ಪ್ರತಿ ಟನ್ ಕಬ್ಬಿಗೆ ₹3,300 ಬೆಲೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ರೈತರು, ವಿವಿಧ ಸಂಘಟನೆಗಳ ಮುಖಂಡರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧ್ಯಕ್ಷತೆಯಲ್ಲಿ ಈ ಹಿಂದೆ ಎರಡು ಸಭೆಗಳು ನಡೆಸಲಾಯಿತು. ಪ್ರತಿ ಟನ್ ಕಬ್ಬಿಗೆ ₹2,750 ನೀಡಲಾಗುವುದು. ಇದರೊಂದಿಗೆ ಈಗಾಗಲೇ ಮುಖ್ಯಮಂತ್ರಿಯವರು ಘೋಷಿಸಿದ ₹50 ಹೆಚ್ಚುವರಿಯೊಂದಿಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ ₹50 ಹೆಚ್ಚುವರಿ ಕೊಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಆದರೆ, ಕಬ್ಬು ಬೆಳೆಗಾರರು ಇದನ್ನು ಒಪ್ಪಲಿಲ್ಲ. ಹೀಗಾಗಿ ಸಭೆ ಯಾವುದೇ ತೀರ್ಮಾನಕ್ಕೆ ಬರದಿರುವ ಕಾರಣ ಬೀದಿಗಿಳಿದಿದ್ದಾರೆ.
ಹುಮನಾಬಾದ್ ಪಟ್ಟಣದಿಂದ ಹಾದು ಹೋಗಿರುವ ಹೈದರಾಬಾದ್–ಮುಂಬೈ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಹೋರಾಟ ನಡೆಸಲು ತೀರ್ಮಾನಿಸಿದರು. ಪಟ್ಟಣದ ಪ್ರವಾಸಿ ಮಂದಿರದಿಂದ ಹಳೆ ತಹಶೀಲ್ದಾರ್ ಕಚೇರಿವರೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿದರು.
ಪ್ರತಿಭಟನೆಯಲ್ಲಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್, ಮಾಜಿ ಸಚಿವ ರಾಜಶೇಖರ ಪಾಟೀಲ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಆದರೆ ಪೊಲೀಸರು ಹೆದ್ದಾರಿ ತಡೆಗೆ ಅವಕಾಶ ನೀಡದೆ ಪ್ರತಿಭಟನಾಕಾರರನ್ನು ಬಂಧಿಸಿದರು.

ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಹಳೆ ತಹಶೀಲ್ದಾರ್ ಕಚೇರಿ ಎದುರಿನ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ಮುಂದುವರೆಸಿದ್ದು, ಸಿಎಂ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟಿಸಿದರು. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು.
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ರೈತರು ಸಂಪೂರ್ಣ ಬೆಳೆ ಕಳೆದುಕೊಂಡಿದ್ದಾರೆ. ಹಿಂಗಾರು ಬಿತ್ತನೆ ತಕ್ಕಮಟ್ಟಿಗೆ ಆಗದಿರುವ ಕಾರಣ ರೈತರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ರೈತರಿಗೆ ತಕ್ಷಣ ಸರ್ಕಾರ ಬೆಳೆ ಪರಿಹಾರ ನೀಡಬೇಕು ಹಾಗೂ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರ ನಿಗದಿಪಡಿಸಿದ ಬೆಲೆ ನೀಡಬೇಕೆಂದು ರೈತರು ಒತ್ತಾಯಿಸಿದರು.





