ಬೀದರ್ ನಗರದ ಅಕ್ಕ ಮಹಾದೇವಿ ಮಹಿಳಾ ಕಾಲೇಜಿನಲ್ಲಿ ನಡೆದ 2 ದಿನಗಳ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ಸೇರಿ 300 ಜನರ ತಪಾಸಣೆ ಮಾಡಲಾಯಿತು.
ಅನೇಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.
ಆರೋಗ್ಯ ಸಂಪತ್ತು ಎಲ್ಲಕ್ಕಿಂತಲೂ ಶ್ರೇಷ್ಠವಾದದ್ದು. ಹೀಗಾಗಿ ಎಲ್ಲರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ವಿಜಯಶ್ರೀ ಹೆಲ್ತ್ ಕೇರ್ ಸೆಂಟರ್ ಡಾ.ಸಚಿನ್ ಪಾಟೀಲ ಸಲಹೆ ಮಾಡಿದರು.
ವಿದ್ಯಾರ್ಥಿಗಳು ಸದೃಢ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಯ್ದುಕೊಳ್ಳಬೇಕು. ನಿತ್ಯ ಪೌಷ್ಟಿಕ ಆಹಾರ ಸೇವಿಸಬೇಕು. ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯೆ ಡಾ.ರಂಜನಾ ಪಾಟೀಲ ಕಿವಿಮಾತು ಹೇಳಿದರು.
ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಡಾ.ಮೀನಾ ಗಾಯಕವಾಡ್, ನ್ಯಾಕ್ ಅಧ್ಯಕ್ಷ ಡಾ.ಪ್ರವೀಣಕುಮಾರ, ಡಾ.ಗಂಗಾಂಬಿಕೆ ಪಾಟೀಲ, ಶಿಬಿರದ ಸಂಯೋಜಕ ವಿಶಾಲ್ ಅಪ್ಪೆ ಉಪಸ್ಥಿತರಿದ್ದರು.
ಇದನ್ನೂ ಓದಿ : ಬೀದರ್ | ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡದ ಆರೋಪ : ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿ ಅಮಾನತು
ಕಾಲೇಜಿನ ಐ.ಕ್ಯೂ.ಎ.ಸಿ, ಎನ್.ಎಸ್.ಎಸ್. ‘ಎ’, ‘ಬಿ’ ಘಟಕ ಹಾಗೂ ವಿಜಯಶ್ರೀ ಹೆಲ್ತ್ ಕೇರ್ ಸೆಂಟರ್ ಸಹಯೋಗದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.





