ಕನ್ನಡಿಗರೆಲ್ಲರಲ್ಲಿ ನಾಡು-ನುಡಿ, ಭಾಷೆ, ಸಂಸ್ಕೃತಿಯ ಬಗ್ಗೆ ಅಭಿಮಾನ ಇರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಹೇಳಿದರು.
ಬೀದರ್ ನಗರದ ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ʼಕನ್ನಡ ನಾಡಿನ ಇತಿಹಾಸವನ್ನು ಅರಿಯಬೇಕು. ಆಂಗ್ಲ ಭಾಷೆ ವ್ಯಾಮೋಹದಿಂದ ಹೊರ ಬಂದು, ಹೆಚ್ಚು ಹೆಚ್ಚು ಕನ್ನಡ ಬಳಸಬೇಕುʼ ಎಂದು ತಿಳಿಸಿದರು.
ಉಪನ್ಯಾಸಕ ಡಾ.ಈಶ್ವರಯ್ಯ ಕೊಡಂಬಲ್ ಮಾತನಾಡಿ, ʼಮಾತೃ ಭಾಷೆ ಕನ್ನಡವನ್ನು ಉಳಿಸಿ, ಬೆಳೆಸಲು ಎಲ್ಲರೂ ಮುಂದಾಗಬೇಕು. ಆಗ ಮಾತ್ರ ಕನ್ನಡ ಬೆಳವಣಿಗೆ ಕಾಣಲು ಸಾಧ್ಯವಿದೆʼ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ.ಶಂಕರ ಕೆ.ಗಣಗೊಂಡ ಮಾತನಾಡಿ, ʼಕರುನಾಡು ಶ್ರೀಮಂತ ಸಂಸ್ಕೃತಿಯನ್ನು ಹೊಂದಿದೆ. ನಾಡು ಹಾಗೂ ನುಡಿಗೆ ತನ್ನದೇ ಆದ ಇತಿಹಾಸ ಇದೆʼ ಎಂದು ತಿಳಿಸಿದರು.
ವಿದ್ಯಾರ್ಥಿ ಸೋಪಾನ್ ಮಾತನಾಡಿದರು. ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಇದನ್ನೂ ಓದಿ : ಬೀದರ್ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಮುಕುಲ್ ಜೈನ್ ನೇಮಕ
ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ನಿವೃತ್ತ ಅಧಿಕಾರಿ ವೀರಭದ್ರಪ್ಪ ಉಪ್ಪಿನ್, ಡಾ.ಚೆನ್ನಕೇಶವ ಮೂರ್ತಿ, ಡಾ. ರಾಜಕುಮಾರ ಅಲ್ಲೂರೆ, ಡಾ. ಸಂಗಶೆಟ್ಟಿ ಶೆಟಕಾರ್, ಮತ್ತಿತರರು ಇದ್ದರು. ಕಾಲೇಜಿನ ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ.ಎಲಿಶಾ ದೇವದಾಸ ಸ್ವಾಗತಿಸಿದರು. ಶಿವಾನಿ ನಿರೂಪಿಸಿದರು. ಸುಜಾತಾ ವಂದಿಸಿದರು.





