ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಭಾಗದ ಜನರೊಂದಿಗೆ ನಿತ್ಯ ವ್ಯವಹರಿಸುವ ಇಲಾಖೆಯಾಗಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಜನರ ಸಮಸ್ಯೆಗಳಿಗೆ ಸ್ಪಂದಿಸಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಸಿಇಒ ಡಾ.ಗಿರೀಶ ಬದೋಲೆ ಹೇಳಿದರು.
ಔರಾದ್ ತಾಲೂಕಾ ಪಂಚಾಯತಿಯ ಸಭಾಂಗಣದಲ್ಲಿ ಗುರುವಾರ ಔರಾದ ಮತ್ತು ಕಮಲನಗರ ತಾಲೂಕುಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅನುಷ್ಠಾನ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ʼಗ್ರಾಮ ಪಂಚಾಯತಿಗಳು ಜನರ ಪಾಲ್ಗೊಳ್ಳುವಿಕೆಯ ಜನಾಡಳಿತದ ಕೇಂದ್ರಗಳಾಗಬೇಕು. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರೂ ಗ್ರಾಮ ಪಂಚಾಯತಿ ಬಗ್ಗೆ ʼನಮ್ಮ ಪಂಚಾಯತಿ-ನಮ್ಮ ಹೆಮ್ಮೆʼ ಎಂದು ಭಾವಿಸುವಂತೆ ಕರ್ತವ್ಯ ನಿರ್ವಹಿಸಬೇಕು. ತೆರಿಗೆ ವಸೂಲಾತಿಯ ಸಂದರ್ಭದಲ್ಲಿ ಜನರ ಸಂಕಷ್ಟಗಳು ಅರ್ಥಮಾಡಿಕೊಂಡು ತೆರಿಗೆ ವಸೂಲಿ ಮಾಡಬೇಕುʼ ಎಂದು ತಿಳಿಸಿದರು.

ʼಭಾರಿ ಮಳೆಯಿಂದ ಕೆಲಸ ಕಳೆದುಕೊಂಡ ಬಡ ಕುಟುಂಬಸ್ಥರು ತೆರಿಗೆ ಪಾವತಿಸಲು ಕಾಲಾವಕಾಶ ಕೇಳಿದರೆ ಸ್ಪಂದಿಸಬೇಕು. ಕಾರ್ಖಾನೆ, ಸಣ್ಣ ಉದ್ಯಮ, ಅಂಗಡಿ, ಹೊಟೆಲ್, ಮದ್ಯ ಅಂಗಡಿಗಳಂತಹ ವಾಣಿಜ್ಯ ಸಂಸ್ಥೆಗಳಿಂದ ತೆರಿಗೆ ವಸೂಲು ಮಾಡಬೇಕು. ವಸೂಲಾದ ತೆರಿಗೆಯಲ್ಲಿ ಗ್ರಂಥಾಲಯ ಸೆಸ್ ತುಂಬಬೇಕು. ಮನರೇಗಾ ಯೋಜನೆಯಡಿ ಕೂಲಿಕಾರರಿಗೆ ಕೆಲಸ ಕೊಡಬೇಕು. ಎನ್ಎಂಎಂಎಸ್ ಭಾವಚಿತ್ರಗಳು ದುರ್ಬಳಕೆ ಆಗದಂತೆ ಎಚ್ಚರವಹಿಸಿ, ಪೂರ್ಣಗೊಂಡ ಕಾಮಗಾರಿಗಳ ಸರ್ಟಿಫಿಕೇಟ್ ಹಾಕಬೇಕುʼ ಎಂದು ನಿರ್ದೇಶಿಸಿದರು.
ʼಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಾಕಿ ಫಲಾನುಭವಿಗಳ ಆಯ್ಕೆ ಮತ್ತು ಜಿಪಿಎಸ್ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸ್ವಚ್ಛ ಭಾರತ ಯೋಜನೆಯಡಿ ಪ್ರಗತಿಯಲ್ಲಿರುವ ವೈಯಕ್ತಿಕ ಶೌಚಾಲಯಗಳು ಶೀಘ್ರವಾಗಿ ಮುಕ್ತಾಯಗೊಳಿಸಬೇಕು. ಬೂದು ನೀರು ನಿರ್ವಹಣಾ ಘಟಕಗಳ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸಬೇಕು. ಪ್ಲಾಸ್ಟಿಕ್, ಮಲತ್ಯಾಜ್ಯ ವಿಲೆವಾರಿ ಘಟಕಗಳ ನಿರ್ಮಾಣ ಕಾರ್ಯ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಬೇಕು’ ಎಂದು ಸೂಚಿಸಿದರು.
ಇದನ್ನೂ ಓದಿ : ಬೀದರ್ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 6 ಮಂದಿ ವಿರುದ್ಧ ಎಫ್ಐಆರ್
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಯೋಜನಾ ನಿರ್ದೇಶಕ ಸೂರ್ಯಕಾಂತ ಬಿರಾದರ, ಸಹಾಯಕ ಕಾರ್ಯದರ್ಶಿ ಬೀರೇಂದ್ರಸಿಂಗ್ ಠಾಕೂರ್, ಆಡಳಿತ ವಿಭಾಗದ ಸಹಾಯಕ ನಿರ್ದೇಶಕ ಜಯಪ್ರಕಾಶ ಚೌಹಾಣ್, ಔರಾದ ತಾಲೂಕಾ ಪಂಚಾಯತಿ ಇಒ ಕಿರಣ ಪಾಟೀಲ್, ಕಮಲನಗರ ತಾಲೂಕಾ ಪಂಚಾಯತಿ ಇಒ ಹನುಮಂತರಾಯ ಕೌಟಗೆ, ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ನರೇಗಾ ಎಡಿಪಿಸಿ ದೀಪಕ್ ಕಡಿಮನಿ ಸೇರಿದಂತೆ ಅವಳಿ ತಾಲೂಕುಗಳ ಪಂಚಾಯತ್ ರಾಜ್ ಇಂಜನಿಯರಿಂಗ್ ಮತ್ತು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.





