ಹಾಸ್ಟೆಲ್ಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಮಾಸಿಕ ₹35 ಸಾವಿರ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಈ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಹೊರಗುತ್ತಿಗೆ ನೌಕರರು ಹಲವು ವರ್ಷಗಳಿಂದ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ. ಕೆಲ ವಸತಿ ನಿಲಯಗಳಲ್ಲಿ ವಾರ್ಡನ್, ಪ್ರಾಂಶುಪಾಲ ಕಿರುಕುಳಕ್ಕೆ ಒಳಗಾಗಿ ಅನಾರೋಗ್ಯದಿಂದ ಬಳಲುತ್ತಿದ್ದರೂ ರಜೆ ಪಡೆಯದೆ ಭಯದ ವಾತಾವರಣದಲ್ಲಿ ಕೆಲಸ ಮಾಡುತ್ತಿದ್ದಾರೆʼ ಎಂದು ಪ್ರತಿಭಟನಕಾರರು ಹೇಳಿದರು.
ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ₹35 ಸಾವಿರಕ್ಕೆ ಹೆಚ್ಚಿಸಬೇಕು. ನೌಕರರಿಗೆ ಸೇವಾ ಭದ್ರತೆ ಕೊಡಬೇಕು. ಖಾಯಂ ನೌಕರರ ಸ್ಥಳದಲ್ಲಿ ಮಾತ್ರ ಖಾಯಂ ನೌಕರರ ವರ್ಗಾವಣೆ ಮಾಡಬೇಕು. ಸಿಬ್ಬಂದಿ ಆದೇಶ ಹಿಂಪಡೆದು 100 ವಿದ್ಯಾರ್ಥಿಗಳಿಗೆ 5 ಜನ ಸಿಬ್ಬಂದಿಯನ್ನು ನೇಮಿಸಬೇಕು. ಈ ಹಿಂದೆ ಕೆಲಸ ಕಳೆದುಕೊಂಡ ನೌಕರರನ್ನು ಮರು ನೇಮಕ ಮಾಡಿಕೊಳ್ಳಬೇಕು. ಕಾರ್ಮಿಕ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ನೀಡಬೇಕು. ಕೆಲಸದ ಸಮಯವನ್ನು ನಿಗದಿ ಮಾಡಬೇಕುʼ ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷ ಸೈಯದ್ ಇಸಾಮೋದ್ದೀನ್, ಕಾರ್ಯದರ್ಶಿ ವಸಂತ ರಾಠೋಡ್ ಸೇರಿದಂತೆ ಪ್ರಮುಖರಾದ ಅಂಬುಬಾಯಿ ಮಾಳಗೆ, ಲಖನ್ ಮಹಾಜನ್, ಚಂದ್ರಮ್ಮ, ಸವಿತಾ, ಮಹೇಶ ಕಾಟೆ, ಸುಶೀಲಾ, ಮಹಿಮುದಾ ಬೇಗಂ ಸೇರಿದಂತೆ ಹೊರಗುತ್ತಿಗೆ ನೌಕರರು, ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.
ಇದನ್ನೂ ಓದಿ : ಬೀದರ್ | ಪ್ರವಾಹ ಹಾನಿ : ಜನತಾ ಬ್ಯಾಂಕ್ನಿಂದ ಜಿಲ್ಲಾಡಳಿತಕ್ಕೆ ₹5 ಲಕ್ಷ ದೇಣಿಗೆ





