ಬೀದರ್ ತಾಲೂಕಿನ ಬಗದಲ್ ಗ್ರಾಮದಲ್ಲಿ ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿಗೆ ಗಾಯವಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ಗಾಯಾಳು ವಿದ್ಯಾರ್ಥಿ ಶೀಘ್ರ ಗುಣಮುಖನಾಗಲಿ ಎಂದು ಹಾರೈಸಿದ್ದು, ಚಿಕಿತ್ಸಾ ವೆಚ್ಛ ಭರಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ʼಶಿಥಿಲಾವಸ್ಥೆಯಲ್ಲಿರುವ ಹಾಗೂ ಅಪಾಯಕಾರಿ ಕೊಠಡಿಯಲ್ಲಿ ಪಾಠ ಪ್ರವಚನ ನಡೆಸದಂತೆ ಈ ಹಿಂದೆಯೇ ಸ್ಪಷ್ಟ ಸೂಚನೆ ನೀಡಿದ್ದರೂ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ತನಿಖೆ ನಡೆಸಿ, ಶಾಲೆಯ ಮುಖ್ಯಸ್ಥರ ವಿರುದ್ಧ ಕ್ರಮದ ಶಿಫಾರಸಿನೊಂದಿಗೆ ವರದಿ ಸಲ್ಲಿಸಲು ಸಚಿವರು ನಿರ್ದೇಶಿಸಿದ್ದಾರೆ.
ʼಶಾಲಾ ಕಟ್ಟಡಗಳ ದುಸ್ಥಿತಿಯ ಕುರಿತಂತೆ ಪರಿಶೀಲನೆ ನಡೆಸುವಂತೆ ಮತ್ತು ದುರಸ್ಥಿತಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಈ ಹಿಂದೆ ಅನೇಕ ಬಾರಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಕಳೆದ ಆಗಸ್ಟ್ 2ರಂದು ನಡೆದ ಕೆಡಿಪಿ ಸಭೆಯಲ್ಲಿ ಕೂಡ ಶಿಥಿಲಾವಸ್ಥೆಯಲ್ಲಿರುವ ಎಲ್ಲ ಶಾಲಾ ಕಟ್ಟಡಗಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಶಿಕ್ಷಣ ಇಲಾಖೆಗೂ ಸೂಚಿಸಲಾಗಿತ್ತು. ಆದರೂ ಈ ಘಟನೆ ನಡೆದಿದೆ ಎಂದು ಅಸಮಧಾನ ವ್ಯಕ್ತಪಡಿಸಿದ ಸಚಿವರು, ಅಧಿಕಾರಿಗಳು ವಿದ್ಯಾರ್ಥಿಗಳ ಸುರಕ್ಷತೆಗೆ ಗಮನ ಹರಿಸಬೇಕುʼ ಎಂದು ಸೂಚಿಸಿದ್ದಾರೆ.
ವಿದ್ಯಾರ್ಥಿಗಳು ಮತ್ತು ಬೋಧಕರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆ ಮತ್ತು ಕಾಲೇಜು ಕಟ್ಟಡಗಳ ಸ್ಥಿತಿ ಮತ್ತು ಯಾವ ಶಾಲೆಯ ಕೊಠಡಿ ಶಿಥಿಲವಾಗಿದೆ, ಅದನ್ನು ದುರಸ್ತಿ ಮಾಡಬಹುದೇ ಅಥವಾ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸಬೇಕೆ ಎಂಬ ಬಗ್ಗೆ 10 ದಿನಗಳ ಒಳಗಾಗಿ ಸ್ಪಷ್ಟ ಮಾಹಿತಿಯೊಂದಿಗೆ ಪ್ರಸ್ತಾವನೆಯನ್ನು ಕಡತದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಮನರೇಗಾ ಕಾಮಗಾರಿ ಸ್ಥಳದಲ್ಲಿ ʼರಕ್ಷಾ ಬಂಧನʼ ಆಚರಣೆ
ʼಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಯಾವ ವರ್ಷ ಕಟ್ಟಲಾಗಿದೆ, ಅದಕ್ಕೆ ಮಾಡಿರುವ ವೆಚ್ಚ ಎಷ್ಟು, ಇಷ್ಟು ಬೇಗ ಶಿಥಿಲಾವಸ್ಥೆಗೆ ಹೋಗಲು ಕಾರಣವೇನು ಎಂಬ ಬಗ್ಗೆ ಪರಿಶೀಲನಾ ವರದಿಯನ್ನು ಸಲ್ಲಿಸುವಂತೆʼ ಅವರು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





