ʼಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಶಿಕ್ಷಣ, ಪರಿಸರ ಸಂರಕ್ಷಣೆ, ಸೌರಶಕ್ತಿ ಯೋಜನೆಗಳು, ಜಲ ಸಂಪನ್ಮೂಲ ನಿರ್ವಹಣೆ ಮತ್ತು ನಗರ ಯೋಜನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆʼ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಶಿವಾನಂದ ಎಸ್. ಗೊರನಾಳೆ ಹೇಳಿದರು.
ಬೀದರ್ ನಗರದ ಕರ್ನಾಟಕ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ʼಸುಸ್ಥಿರ ಅಭಿವೃದ್ಧಿ ಮತ್ತು ಆಂತರಿಕ ಭವಿಷ್ಯಕ್ಕಾಗಿ ಎಐ ತಂತ್ರಜ್ಞಾನʼ ವಿಷಯದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ʼಭವಿಷ್ಯದಲ್ಲಿ ಕಡಿಮೆ ಸಂಪನ್ಮೂಲ ಬಳಕೆಯೊಂದಿಗೆ ತ್ವರಿತ ಮತ್ತು ಪರಿಣಾಮಕಾರಿ ನಿರ್ಧಾರಗಳನ್ನು ಕೈಗೊಳ್ಳಲು ಎಐ ತಂತ್ರಜ್ಞಾನ ನೆರವಾಗಲಿದೆ. ವಿಶ್ವ ಸಂಸ್ಥೆಯು ಸುಸ್ಥಿರ ಅಭಿವೃದ್ಧಿಗೆ 17 ಗುರಿಗಳನ್ನು ನಿಗದಿಪಡಿಸಿದ್ದು, ಅದರಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಪ್ರಮುಖ ಗುರಿಯಾಗಿದೆ. ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಈ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆʼ ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಾತನಾಡಿ, ʼಗುಣಮಟ್ಟದ ಶಿಕ್ಷಣ ನೀಡುವುದು ಸುಸ್ಥಿರ ಅಭಿವೃದ್ಧಿಯ ಪ್ರಮುಖ ಅಂಗವಾಗಿದೆ ಎಂದು ಹೇಳಿದರು. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಂಸ್ಥೆಯು ಸಹಾಯ ನೀಡುತ್ತಿದೆʼ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಮಲ್ಲಿಕಾರ್ಜುನ ಹಂಗರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಪರೀಕ್ಷಾ ನಿಯಂತ್ರಕ ಡಾ.ಶ್ರೀದೇವಿ ಸೋಮ, ಕೆಆರ್ಇ ಸೊಸೈಟಿಯ ಉಪಾಧ್ಯಕ್ಷ ಬಿ.ಜಿ.ಶೆಟಕಾರ್, ಕಾರ್ಯದರ್ಶಿ ಸತೀಶ್ ಪಾಟೀಲ್, ಜಂಟಿ ಕಾರ್ಯದರ್ಶಿ ಶಿವಾನಂದ ಗದ್ಗೆ ಹಾಗೂ ವಿವಿಧ ಕಾಲೇಜುಗಳ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





