ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತ್ ಅಧಿಕಾರಿಗಳು ಎಸ್ಎಸ್ಎಲ್ಸಿ ಫಲಿತಾಂಶವನ್ನು ಸುಧಾರಿಸುವ ದಿಸೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಮನೆ-ಮನೆಗೆ ಭೇಟಿ ನೀಡುವ ಮಹತ್ವದ ಕೆಲಸಕ್ಕೆ ಮುಂದಾಗಿದ್ದಾರೆ.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ ಹಾಗೂ ಆಡಳಿತಾಧಿಕಾರಿ ರತಿಕಾಂತ ನೇಳಗೆ ನೇತ್ರತ್ವದಲ್ಲಿ ಭಾನುವಾರ ಶೆಂಬೆಳ್ಳಿ ಗ್ರಾಮದ ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಸುಧಾರಣೆ ಹಾಗೂ ನಿರಂತರ ಅಧ್ಯಯನಕ್ಕೆ ಕ್ರಿಯಾಯೋಜನೆ ರೂಪಿಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.
ಬಳಿಕ ಶೆಂಬೆಳ್ಳಿ ಗ್ರಾಮದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ ಸಿದ್ಧವಾಗುತ್ತಿರುವ ಮಕ್ಕಳ ಮನೆಗೆ ಭೇಟಿ ನೀಡಿ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತೆ, ಕಲಿಕೆಯ ಬಗ್ಗೆ ವಿಚಾರಿಸಿ, ಭಯದಿಂದ ಪರೀಕ್ಷೆ ಬರೆಯದೆ ಆತ್ಮವಿಶ್ವಾಸದಿಂದ ಪರೀಕ್ಷೆಗೆ ಸಜ್ಜಾಗುವಂತೆ ತಿಳಿಸಿದರು.

ಪಿಡಿಒ ನಾಗೇಶ ಮುಕರಂಬೆ ಮಾತನಾಡಿ, ʼಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ವೈಯಕ್ತಿಕ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯ. ಉಳಿದಿರುವ ದಿನಗಳನ್ನು ಸೂಕ್ತ ಕ್ರಿಯಾ ಯೋಜನೆಯಂತೆ ಸಮರ್ಪಕವಾಗಿ ಬಳಸಿಕೊಂಡು ಅಭ್ಯಾಸ ನಡೆಸಬೇಕುʼ ಎಂದು ಸಲಹೆ ನೀಡಿದರು.
ಆಡಳಿತಾಧಿಕಾರಿ ರತಿಕಾಂತ ನೇಳಗೆ ಮಾತನಾಡಿ, ʼವಿದ್ಯಾರ್ಥಿಗಳು ಟಿವಿ ಮತ್ತು ಮೊಬೈಲ್ ಬಳಕೆಯನ್ನು ನಿಯಂತ್ರಿಸಿ, ಸಮಯ ವ್ಯರ್ಥವಾಗದಂತೆ ನಿಗದಿತ ವೇಳಾಪಟ್ಟಿಯಂತೆ ಓದಿಗೆ ಒತ್ತು ನೀಡಬೇಕು. ಮಕ್ಕಳ ಅಧ್ಯಯನ ಹಾಗೂ ಆರೋಗ್ಯದ ಬಗ್ಗೆ ಪೋಷಕರು ವಿಶೇಷ ಕಾಳಜಿವಹಿಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಳಕ್ಕೆ ಜಿಲ್ಲಾಡಳಿತ ವಿಶೇಷವಾಗಿ ಶ್ರಮಿಸುತ್ತಿದ್ದು, ಎಲ್ಲರೂ ಜೋಡಿಸಬೇಕುʼ ಎಂದರು.
ಫಲಿತಾಂಶ ಸುಧಾರಿಸಲು ಅಧಿಕಾರಿಗಳಿಗೆ ಹೊಸ ಟಾಸ್ಕ್ :
ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ ಬೀದರ್ ಜಿಲ್ಲಾ ಪಂಚಾಯತ್ ವತಿಯಿಂದ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳು, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳ ಸಹಯೋಗದಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಗುಣಮಟ್ಟ ಹೆಚ್ಚಿಸಲು ಮತ್ತು ಫಲಿತಾಂಶ ಉತ್ತಮಗೊಳಿಸಲು ಮಾರ್ಗದರ್ಶನ ಹಾಗೂ ಮೇಲ್ವಿಚಾರಣಾ ವ್ಯವಸ್ಥೆಗಳನ್ನು ಜಾರಿಗೆ ತರಲಾಗಿದೆ.
ಇದನ್ನೂ ಓದಿ : ಬೀದರ್ | ಮಾಧ್ಯಮಗಳಲ್ಲಿ ಮಹಿಳೆಯರು ಹೆಚ್ಚು ತೊಡಗಿಕೊಳ್ಳಲಿ : ಬಸವರಾಜ ಹೊರಟ್ಟಿ
ವಿದ್ಯಾರ್ಥಿಗಳ ಅಧ್ಯಯನ ಪ್ರಗತಿಯನ್ನು ಪರಿಶೀಲಿಸಲು, ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲು, ಶಿಕ್ಷಕರೊಂದಿಗೆ ಸಮನ್ವಯ ಸಭೆಗಳನ್ನು ನಡೆಸಲು, ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಪರೀಕ್ಷಾ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡುವಂತೆ ಜಿಲ್ಲಾ ಪಂಚಾಯತ್ ಸಿಇಒ ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದಾರೆ.





