ಔರಾದ್ ತಾಲೂಕಿನ ಜಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆದಿದೆ.
ಬಿಸಿಯೂಟ ಸೇವಿಸಿದ ಬಳಿಕ ಕೆಲ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಔರಾದ್ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತಪಾಸಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಔರಾದ್ ಬಿಇಒ ಬಿ.ಜೆ.ರಂಗೇಶ ಅವರು ʼಈದಿನʼ ಜೊತೆ ಮಾತನಾಡಿ, ʼಜಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಟ್ಟು ದಾಖಲಾತಿ 94 ಇದೆ. ಇಂದು 64 ಜನ ವಿದ್ಯಾರ್ಥಿಗಳು ಹಾಜರಿದ್ದರು. ಅವರಲ್ಲಿ 2-3 ಮಕ್ಕಳಿಗೆ ತಲೆ ನೋವು, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೊಂದಿಗೆ ಉಳಿದ 50ಕ್ಕೂ ಅಧಿಕ ಮಕ್ಕಳನ್ನು ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಎಲ್ಲರೂ ಆರೋಗ್ಯವಾಗಿದ್ದಾರೆʼ ಎಂದು ತಿಳಿಸಿದರು.
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ದೂರು :
ಬಿಸಿಯೂಟ ಸೇವಿಸಿದ 80 ಮಕ್ಕಳು ಅಸ್ವಸ್ಥಗೊಂಡ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಆಧರಿಸಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿದೆ.
ʼಆಯೋಗವು ಈ ಹಿಂದೆಯೂ ತಮ್ಮ ಕಛೇರಿಗೆ ಬಿಸಿ ಊಟದ ಅವ್ಯವಸ್ಥೆಯಲ್ಲಿ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುತ್ತಿರುವುದು ಮತ್ತು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಲ್ಲದೆ ಕೆಲವು ಮಕ್ಕಳು ತೀವ್ರ ರೀತಿಯ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿರುವುದು ದಿನ ಪತ್ರಿಕೆಗಳಲ್ಲಿ ವರದಿಯಾಗಿದ್ದರಿಂದ ತಮ್ಮ ಗಮನಕ್ಕೆ ತಂದು ಈ ಬಗ್ಗೆ ಕ್ರಮವಹಿಸುವಂತೆ ಕೋರಲಾಗಿತ್ತು. ಮುಂದುವರೆದು ಬಿಸಿ ಊಟದಲ್ಲಿ ಉಂಟಾಗುತ್ತಿರುವ ಸಮಸ್ಯೆಗಳಿಂದ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುತ್ತಿದ್ದು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವ ಬಗ್ಗೆಯೂ ಪದೇ ಪದೇ ವರದಿಯಾಗುತ್ತಿದ್ದು ಆಯೋಗವು ಬಿಸಿ ಊಟದ ತೊಂದರೆಯ ಬಗ್ಗೆ ಗಂಭೀರವಾಗಿ ಪರಿಗಣಿಸಿರುತ್ತದೆʼ ಎಂದು ದೂರಿನಲ್ಲಿ ತಿಳಿಸಲಾಗಿದೆ.
ʼಈ ಪತ್ರ ತಲುಪಿದ ಕೂಡಲೇ ಸಂಬಂಧಪಟ್ಟ ಎಲ್ಲಾ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಿಸಿಯೂಟದಲ್ಲಿ ಉಂಟಾಗುವ ತೊಂದರೆಯಿಂದ ಮಕ್ಕಳನ್ನು ರಕ್ಷಿಸುವಲ್ಲಿ ಸೂಕ್ತ ಕ್ರಮವಹಿಸುವಂತೆ ಸೂಚಿಸುವುದು ಹಾಗೂ ಇತರೆ ಅಗತ್ಯ ಕ್ರಮಗಳನ್ನು ವಹಿಸುವಂತೆ ಆಯೋಗವು ಮತ್ತೊಮ್ಮೆ ತಮ್ಮನ್ನು ಕೋರುತ್ತಾ ಇಲಾಖೆಯು ವಹಿಸಿದ ಕ್ರಮದ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ 5 ದಿನದ ಒಳಗಾಗಿ ಸಲ್ಲಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆಯ ಜಂಟಿ ನಿರ್ದೇಶಕರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.





