ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಗೊಲ್ಡನ್ ಸ್ಕಾಲರ್ಶಿಪ್ ಪ್ರವೇಶ ಪರೀಕ್ಷೆ ಯೋಜನೆ ಮುಂದುವರಿಸಿದ್ದು, ಜನವರಿ ತಿಂಗಳಲ್ಲಿ ಐದು ದಿವಸ ಪ್ರವೇಶ ಪರೀಕ್ಷೆ ನಡೆಯಲಿವೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ʼಶಿಕ್ಷಣ ಸಂಸ್ಥೆಯ 25ನೆಯ ವರ್ಷ ಆಚರಣೆ ಹಿನ್ನಲೆಯಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಗುರುಕುಲ ಗೊಲ್ಡನ್ ಸ್ಕಾಲರ್ಶಿಪ್ ಯೋಜನೆ ಪರಿಚಯಿಸಲಾಗಿತ್ತು. ಮಕ್ಕಳು, ಪಾಲಕರು ಹೆಚ್ಚಿನ ಆಸಕ್ತಿ ತೋರುತ್ತಿರುವುದರಿಂದ ಗೊಲ್ಡನ್ ಸ್ಕಾಲರ್ಶಿಪ್ ಯೋಜನೆ ಹಾಗೇ ಮುಂದುವರಿಸಲು ನಿರ್ಣಯ ಕೈಗೊಳ್ಳಲಾಗಿದೆ. ಈ ಯೋಜನೆ ಬಡವರು, ರೈತರು, ಕೂಲಿ ಕಾರ್ಮಿಕರ ಮಕ್ಕಳಿಗೆ ವರದಾನವಾಗಿದೆ. ಪ್ರತಿ ವರ್ಷ ನೂರು ಮಕ್ಕಳು ಉಚಿತ ಶಿಕ್ಷಣದ ಸೌಲಭ್ಯ ಪಡೆದು ನೀಟ್-ಐಐಟಿಯಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆʼ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ʼಗುರುಕುಲ ಗೊಲ್ಡನ್ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆದ 25 ವಿದ್ಯಾರ್ಥಿಗಳಿಗೆ ಎರಡು ವರ್ಷ ಉಚಿತ ಪಿಯುಸಿ ಶಿಕ್ಷಣ, ವಸತಿ, ಕೋಚಿಂಗ್ ನೀಡಲಾಗುವುದು. ನಂತರದ 75 ವಿದ್ಯಾರ್ಥಿಗಳಿಗೆ ಫೀ ನಲ್ಲಿ ಶೇ.50ರಷ್ಟು ರಿಯಾಯಿತಿ ಸಿಗಲಿದೆʼ ಎಂದು ತಿಳಿಸಿದರು.
ಜನವರಿಯಲ್ಲಿ 5 ದಿನ ಪ್ರವೇಶ ಪರೀಕ್ಷೆ :
ʼಗಡಿಭಾಗದ ಬಡ ಪ್ರತಿಭಾವಂತ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಬಸವಲಿಂಗ ಪಟ್ಟದ್ದೇವರ ಮಾರ್ಗದರ್ಶನದಲ್ಲಿ ಗುರುಕುಲ ಸ್ಕಾಲರ್ ಶಿಪ್ ಯೋಜನೆ ಜಾರಿಗೆ ತಂದಿದ್ದೇವೆ. ಈ ಬಾರಿಯು ಚನ್ನಬಸವೇಶ್ವರ ಗುರುಕುಲದಲ್ಲಿ 2026-27ನೇ ಸಾಲಿನ ಪ್ರವೇಶಕ್ಕಾಗಿ ಜ.4, 10, 11, 18 ಮತ್ತು 25 ರಂದು ಪ್ರವೇಶ ಪರೀಕ್ಷೆ ಏರ್ಪಡಿಸಿದ್ದೇವೆ. ಪ್ರಸ್ತುತ ಎಸ್ಸೆಸ್ಸೆಲ್ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕನ್ನಡ, ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆʼ ಎಂದು ಭಾಲ್ಕಿ ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದರು.
ʼಚನ್ನಬಸವೇಶ್ವರ ಗುರುಕುಲ ಪ್ರಕೃತಿ ಮಡಿಲಿನಲ್ಲಿ ಈ ಭಾಗದ ಮಕ್ಕಳ ಗುಣಾತ್ಮಕ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರಕ್ಕೆ ಆದ್ಯತೆ ನೀಡುತ್ತಿದ್ದೇವೆ. ಹಾಗಾಗಿ ಕಳೆದ ಸಾಲಿನಲ್ಲಿ ನೀಟ್-ಐಐಟಿಯಲ್ಲಿ ವಿದ್ಯಾರ್ಥಿಗಳು ಉತ್ತಮ ರ್ಯಾಂಕ್ ಪಡೆದು ಸಿಎಂ ಸಿದ್ದರಾಮಯ್ಯ ಅವರಿಂದ ಗೌರವಕ್ಕೆ ಪಾತ್ರರಾಗಿದ್ದರುʼ ಎಂದು ಸ್ಮರಿಸಿದರು.
8 ಸಾವಿರ ಮಕ್ಕಳು ನೋಂದಣಿ
2026-27ನೇ ಸಾಲಿನ ಪಿಯುಸಿ ವಿಜ್ಞಾನ ಪ್ರವೇಶ ಪಡೆಯಲು ಸ್ಕಾಲರ್ಶಿಪ್ಗಾಗಿ ಈಗಾಗಲೇ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಎಂಟು ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ. 2004ರಲ್ಲಿ ಪಿಯುಸಿ ವಿಭಾಗ ಆರಂಭಗೊಂಡಿದ್ದು, ಕಳೆದ 10 ವರ್ಷಗಳಿಂದ ಸ್ಕಾಲರ್ಶಿಪ್ ಯೋಜನೆ ನಡೆಸಿಕೊಂಡು ಬರಲಾಗುತ್ತಿದ್ದು, ಇದುವರೆಗೂ 1 ಸಾವಿರ ಮಕ್ಕಳು ಉಚಿತ ಶಿಕ್ಷಣ, ವಸತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಸೌಲಭ್ಯ ಪಡೆದು ಕೊಂಡಿದ್ದಾರೆʼ ಎಂದು ಕಾಲೇಜಿನ ಪ್ರಾಚಾರ್ಯ ಬಸವರಾಜ ಮೊಳಕೀರೆ ಮಾಹಿತಿ ನೀಡಿದರು.
ಇದನ್ನೂ ಓದಿ : ಬೀದರ್ | ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ
ಸುದ್ದಿಗೋಷ್ಠಿಯಲ್ಲಿ ಮಹಾಲಿಂಗ ಸ್ವಾಮೀಜಿ, ಸಂಸ್ಥೆಯ ಆಡಳಿತಾಧಿಕಾರಿ ಮೋಹನ ರೆಡ್ಡಿ ಇದ್ದರು.





