ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಎರಡು ಎಕರೆ ಜಾಗ ಕೊಡಲೇಬೇಕೆಂದು ಪಟ್ಟು ಹಿಡಿದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಔರಾದ್ ಪಟ್ಟಣದ ತಹಸೀಲ್ ಕಚೇರಿ ಮುಂಭಾಗ ಕಳೆದ 11 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಗುರುವಾರ ರಾತ್ರಿ ಅಂತ್ಯಗೊಂಡಿದೆ.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಗುರುವಾರ ರಾತ್ರಿ 8.30 ಗಂಟೆ ಸುಮಾರಿಗೆ ಧರಣಿ ಸ್ಥಳಕ್ಕೆ ತೆರಳಿ ಅಧಿಕೃತವಾಗಿ ಎರಡು ಎಕರೆ ಜಾಗ ಮಂಜೂರು ಮಾಡಲಾಗಿದೆ. ಮುಂದಿನ ಆರು ತಿಂಗಳಲ್ಲಿ ಜಿ ಪ್ಲಸ್ -3 ಯೋಜನೆಯಡಿ ಮನೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿ, ಹಿಂಬರಹ ಪತ್ರ ನೀಡಿದ ಬಳಿಕ ಪ್ರತಿಭಟನಾ ನಿರತ ಅಲೆಮಾರಿ ಜನಾಂಗ ಶಾಂತಿಯುತವಾಗಿ ತಮ್ಮ ಹೋರಾಟವನ್ನು ಹಿಂಪಡೆದಿದ್ದಾರೆ.
ಈ ಸಂದರ್ಭದಲ್ಲಿ ಬೀದರ್ ಸಹಾಯಕ ಆಯುಕ್ತ ಮುಹಮ್ಮದ್ ಶಕೀಲ್, ತಹಸೀಲ್ದಾರ್ ಮಹೇಶ್ ಪಾಟೀಲ್ ಸೇರಿದಂತೆ ಅಧಿಕಾರಿಗಳು ಸೇರಿದಂತೆ ಪ್ರತಿಭಟನೆ ನೇತೃತ್ವ ವಹಿಸಿದ ರಾಹುಲ್ ಖಂದಾರೆ, ಸುಭಾಷ್ ಲಾಧಾ, ಪ್ರವೀಣ ಕಾರಂಜೆ, ಸಂತೋಷ ಸಿಂಧೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದನ್ನೂ ಓದಿ : ಬೀದರ್ | ಫೆ.3ಕ್ಕೆ ಎಸ್ಐಆರ್ ವಿರೋಧಿ ಸಮಾವೇಶ : ಕರಪತ್ರ ಬಿಡುಗಡೆ





