ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಯರಬಾಗ ಗ್ರಾಮ ಪಂಚಾಯಿತಿನಲ್ಲಿ 2023-24ನೇ ಸಾಲಿನ 15ನೇ ಹಣಕಾಸಿನ ಯೋಜನೆ ಅನುದಾನದಲ್ಲಿ ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ಭೀಮರೆಡ್ಡಿ ಸಿಂಧನಕೇರಾ ಆಗ್ರಹಿಸಿದ್ದಾರೆ.
ಈ ಕುರಿತು ವಿಡಿಯೊ ಮೂಲಕ ಗ್ರಾಮ ಪಂಚಾಯತಿನಲ್ಲಿ ನಡೆದಿರುವ ದಾಖಲೆಗಳನ್ನು ಪ್ರದರ್ಶಿಸಿ, ಗ್ರಾಮ ಪಂಚಾಯತ್ ಅವ್ಯವಹಾರದಲ್ಲಿ ತೊಡಗಿರುವ ಪಂಚಾಯತ್ ಪಿಡಿಒ ಹಾಗೂ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಇಲ್ಲಿಯವರೆಗೆ ಸೂಕ್ತ ತನಿಖೆ ನಡೆಸುತ್ತಿಲ್ಲ ಎಂದು ದೂರಿದ್ದಾರೆ.
ʼಈ ಅವ್ಯವಹಾರ ಬಗ್ಗೆ ಹುಮನಾಬಾದ್ನ ಆಶ್ರಯ ದೀಪ ಚಾರಿಟೇಬಲ್ ಟ್ರಸ್ಟ್ ದಿಂದ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಹಲವು ಬಾರಿ ದೂರು ನೀಡಲಾಗಿತ್ತು. ದೂರಿನ ಅನ್ವಯ ತನಿಖೆ ನಡೆಸಿ ವಾರದೊಳಗೆ ವರದಿ ಸಲ್ಲಿಸಲು ಸಿಇಒ ಆದೇಶಿಸಿದ್ದರು. ಆದರೆ, ಬಸವಕಲ್ಯಾಣ ತಾಲೂಕು ಪಂಚಾಯತ್ ಇಒ ರಮೇಶ ಅವರು ತನಿಖೆ ನಡೆಸದೆ ನಿರ್ಲಕ್ಷ್ಯ ವಹಿಸಿದ್ದಾರೆʼ ಎಂದರು.
ʼಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಬ್ಲಿಚಿಂಗ್ ಪೌಡರ್, ಚರಂಡಿ ಸ್ವಚ್ಛತೆ, ಅಂಗವಿಕಲರಿಗೆ ಶೇ 5ರಷ್ಟು ಹಣ ಬಳಕೆ, ಪಂಚಾಯತ್ ಕಟ್ಟಡ ಕಾಮಗಾರಿ ಸೇರಿ ವಿವಿಧ ಕಾಮಗಾರಿ ನಡೆಸಲಾಗಿದೆ ಎಂದು ಸುಳ್ಳು ದಾಖಲೆ ಸೃಷ್ಟಿಸಿ 15ನೇ ಹಣಕಾಸು ಯೋಜನೆಯ ಅಂದಾಜು ಹಣ ₹33.39 ಲಕ್ಷ ದುರ್ಬಳಕೆ ಮಾಡಿಕೊಂಡಿದ್ದಾರೆʼ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ : ಪ್ರಭುರಾವ ಕಂಬಳಿವಾಲೆ, ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನಲ್ಲಿ ಟ್ರಸ್ಟ್ಗಳು ರಚಿಸಿ ಸರ್ಕಾರ ಆದೇಶ
ಜಿಲ್ಲಾ ಪಂಚಾಯತ್ ಸಿಇಒ ಅವರು ಅವ್ಯವಹಾರ ಕುರಿತು ತನಿಖೆ ನಡೆಸುವಂತೆ ಆದೇಶಿಸಿದ್ದರೂ ಅಧಿಕಾರಿಗಳು ತನಿಖೆ ನಡೆಸುತ್ತಿಲ್ಲ. ಕೂಡಲೇ ಈ ಬಗ್ಗೆ ಶೀಘ್ರ ತನಿಖೆ ಕೈಗೊಂಡು ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡಿರುವ ಪಿಡಿಒ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಕ್ರಮ ಜರುಗಿಸಿ, ದುರ್ಬಳಕೆಯಾದ ಹಣ ಸರ್ಕಾರದ ಬೊಕ್ಕಸಕ್ಕೆ ಮರುಪಾವತಿ ಆಗುವಂತೆ ಮಾಡಬೇಕುʼ ಎಂದು ಭೀಮರೆಡ್ಡಿ ಸಿಂಧನಕೇರಾ ಆಗ್ರಹಿಸಿದ್ದಾರೆ.





