ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು.
ಮೈದಾನದಲ್ಲಿ ತೆರದ ಜೀಪಿನಲ್ಲಿ ಸಂಚರಿಸಿದ ಸಚಿವರು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಸೇರಿ ವಿವಿಧ ಶಾಲಾ ಹಾಗೂ ಕಾಲೇಜಿನ ತುಕಡಿಗಳು ಅಕರ್ಷಕ ಪಥಸಂಚಲನ ನಡೆಸಿದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಸಚಿವ ಈಶ್ವರ ಖಂಡ್ರೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ʼಸಮಾನತೆ, ನ್ಯಾಯ ಮತ್ತು ಬಾಂಧವ್ಯದ ಮೌಲ್ಯಗಳ ಮೇಲೆ ನಿಂತಿರುವ ನಮ್ಮ ಪ್ರಜಾಪ್ರಭುತ್ವವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವದ ಸೌಂದರ್ಯ ನಮ್ಮ ಒಗ್ಗಟ್ಟಿನಲ್ಲಿ ಅಡಗಿದೆ. ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶದ ಏಕತೆ ಮತ್ತು ಸಮಗ್ರತೆಯನ್ನು ಬಲಪಡಿಸೋಣʼ ಎಂದು ತಿಳಿಸಿದರು.
ʼರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಹಾಗೂ ಯುವನಿಧಿ ಜನರ ಬದುಕಿನಲ್ಲಿ ಸ್ಪಷ್ಟವಾದ ಬದಲಾವಣೆ ತಂದಿವೆ. ಈ ಯೋಜನೆಗಳು ಜನಸಾಮಾನ್ಯರಿಗೆ ನೆಮ್ಮದಿ, ಭದ್ರತೆ ಮತ್ತು ಆತ್ಮವಿಶ್ವಾಸವನ್ನು ನೀಡಿವೆ. ಕಳೆದ 30 ತಿಂಗಳಲ್ಲಿ ಬೀದರ್ ಜಿಲ್ಲೆಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಜನಜೀವನವನ್ನು ಸುಧಾರಿಸುವ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿವೆ. ರಸ್ತೆ ಸುಧಾರಣೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ವೃದ್ಧಿ, ಮೂಲಭೂತ ಸೌಕರ್ಯಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಹಸಿರುಕರಣ ಕಾರ್ಯಕ್ರಮಗಳು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರಣವಾಗಿವೆʼ ಎಂದರು.
ʼನೂತನ ಜಿಲ್ಲಾ ಸಂಕೀರ್ಣ ನಿರ್ಮಾಣ, ಐತಿಹಾಸಿಕ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ, ಭಾಲ್ಕಿಯಲ್ಲಿ ಕ್ರೀಡಾಂಗಣ, ಆಸ್ಪತ್ರೆ ನಿರ್ಮಾಣ, ಬಸವಕಲ್ಯಾಣ ಮತ್ತು ಔರಾದ್ ತಾಲೂಕುಗಳಲ್ಲಿ ನ್ಯಾಯಾಲಯ ಕಟ್ಟಡಗಳ ನಿರ್ಮಾಣ ಸೇರಿದಂತೆ ಹಲವು ಮಹತ್ವದ ಕಾಮಗಾರಿಗಳು ಪ್ರಗತಿಯಲ್ಲಿವೆ. ಅತಿವೃಷ್ಟಿಯಿಂದ ಸಂಕಷ್ಟಕ್ಕೊಳಗಾದ ಜಿಲ್ಲೆಯ ರೈತರ ನೆರವಿಗಾಗಿ ಹೆಚ್ಚುವರಿಯಾಗಿ ಸುಮಾರು ₹261.43 ಕೋಟಿ ಪರಿಹಾರ ಜಮಾ ಮಾಡಿಸಿದ್ದೇವೆ. ಈಗಾಗಲೇ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮಾ ಕಂಪನಿಗಳಿಂದ ‘ಮಿಡ್ ಸೀಸನ್ ಅಡ್ವರ್ಸಿಟಿ’ ಅಡಿಯಲ್ಲಿ ಸುಮಾರು ₹90 ಕೋಟಿ ಬೆಳೆ ವಿಮೆ ಪರಿಹಾರವೂ ಜಮಾ ಆಗಿದೆ. ರೈತರ ಸಂಕಷ್ಟದ ಸಮಯದಲ್ಲಿ ಸರ್ಕಾರ ಸದಾ ಬೆಂಬಲವಾಗಿ ನಿಂತಿದೆʼ ಎಂದು ಹೇಳಿದರು.
ಇದನ್ನೂ ಓದಿ : ಬೀದರ್ | ಕನ್ನಡ ಸಾಹಿತ್ಯ ಪ್ರತಿಪಾದಿಸುವುದು ಸಮಾನತೆ, ಸೌಹಾರ್ದತೆ : ಬರಗೂರು ರಾಮಚಂದ್ರಪ್ಪ
ಬೀದರ್ ಸಂಸದ ಸಾಗರ್ ಖಂಡ್ರೆ, ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಎಂ.ಜಿ.ಮೂಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಡಿಸಿಎಫ್ ಆಶಿಷ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಮಹಾನಗರ ಪಾಲಿಕೆ ಅಧ್ಯಕ್ಷ ಮುಹಮ್ಮದ್ ಗೌಸ್ ಸೇರಿದಂತೆ ಇದ್ದರು.
ಗಣರಾಜೋತ್ಸವ ದಿನಾಚರಣೆ ಚಿತ್ರಾವಳಿ :












