ಬೀದರ್ ನಗರದ ಐತಿಹಾಸಿಕ ಪಾಪನಾಶ ಶಿವಲಿಂಗ ದೇವಸ್ಥಾನದಲ್ಲಿ ಪೂಜೆ, ಅಭಿಷೇಕ ಮಾಡಲು ಅವಕಾಶ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಶನಿವಾರ ದೇಗುಲದ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಸಂಸದ ಸಾಗರ ಖಂಡ್ರೆ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪೂಜೆ ಮಾಡುವವರಿಗೆ ಸ್ಥಳದಿಂದ ತೊಲಗುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.
ಇಂದು ಬೆಳಿಗ್ಗೆ ಪಾಪನಾಶ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮ ನಿಗದಿಯಾಗಿದೆ. ಕಾಮಗಾರಿ ಮುಂಚೆ ಪಾಪನಾಶ ದೇವಸ್ಥಾನದಲ್ಲಿ ಪೂಜೆ ನಡೆಸುವುದಾಗಿ ಬಿಜೆಪಿ ಮುಖಂಡರು ಮೊದಲೇ ತಿಳಿಸಿದರು.
ಇಂದು ಬೆಳಿಗ್ಗೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳುವ ವೇಳೆ ಕಾರ್ಯಕರ್ತರನ್ನು ಪ್ರವೇಶ ದ್ವಾರದಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಪೊಲೀಸರು ತಡೆದಿದ್ದಕ್ಕೆ ಕಾರ್ಯಕರ್ತರು ರಸ್ತೆ ತಡೆದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕೆಲ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, ‘ಪಾಪನಾಶ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಬಿಡುತ್ತಿಲ್ಲ. ಜಿಲ್ಲೆಯಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಜಿಲ್ಲಾಡಳಿತ ಸಹ ಸಂಪೂರ್ಣ ಕಾಂಗ್ರೆಸ್ ಸರ್ಕಾರದೊಂದಿಗೆ ಕೈಜೋಡಿಸಿದೆ. ನಮಗೆ ಪೂಜೆ ಮಾಡಲು ಬಿಡದಿದ್ದರೆ ನಾವೂ ಅವರಿಗೆ ಕಾಮಗಾರಿ ಚಾಲನೆ ಮಾಡಲು ಬಿಡುವುದಿಲ್ಲ’ ಎಂದು ಹೇಳಿದರು.

ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಶಾಸಕರಾದ ಡಾ.ಶೈಲೇಂದ್ರ ಕೆ. ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ್, ಎಂ.ಜಿ. ಮುಳೆ ಮುಖಂಡರಾದ ಪ್ರಕಾಶ್ ಖಂಡ್ರೆ, ಶಶಿಧರ ಹೊಸಳ್ಳಿ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ಕೇಂದ್ರದ ‘ಪ್ರಸಾದ’ ಯೋಜನೆಯಡಿ ₹22.41 ಕೋಟಿ ಮೊತ್ತದ ಯೋಜನೆಗೆ 2024ರ ಮಾರ್ಚ್ 7ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ದೇವಸ್ಥಾನದ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಪುನಃ ಶಂಕುಸ್ಥಾಪನೆ ಮಾಡಬಾರದು ಎನ್ನುವುದು ಬಿಜೆಪಿ ವಿರೋಧಿಸುತ್ತಿದೆ.

ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಬೆಂಬಲಿಗರು ಈಶ್ವರ ಖಂಡ್ರೆ, ಸಾಗರ ಖಂಡ್ರೆ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗುತ್ತಾ ಪಾಪನಾಶ ದೇವಸ್ಥಾನ ಕಾಲ್ನಡಿಗೆ ಮೂಲಕ ಕಡೆಗೆ ಹೊರಟಿದ್ದಾರೆ





