ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಕೈಗಾರಿಕಾ ಕ್ಷೇತ್ರ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ನೀಡಿರುವ ಕೊಡುಗೆಗಳು ಅಮೂಲ್ಯವಾಗಿವೆʼ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಬೀದರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ʼಸ್ವಾತಂತ್ರ್ಯೋತ್ತರ ಭಾರತದಲ್ಲಿ ಸಂವಿಧಾನ ರಚನೆ, ಪ್ರಜಾಸತ್ತಾತ್ಮಕ ವ್ಯವಸ್ಥೆಯ ಸ್ಥಾಪನೆ, ಜಾತ್ಯತೀತತೆ, ಸಾಮಾಜಿಕ ನ್ಯಾಯ, ಬಡವರು–ದುರ್ಬಲರ ಸಬಲೀಕರಣಕ್ಕೆ ಕಾಂಗ್ರೆಸ್ ಶ್ರಮಿಸಿದೆʼ ಎಂದರು.
ಕಾಂಗ್ರೆಸ್ ಪಕ್ಷ ಕೇವಲ ರಾಜಕೀಯ ಪಕ್ಷವಲ್ಲ. ಅದು ದೇಶದ ಏಕತೆ, ಸಮಾನತೆ, ಸೌಹಾರ್ದತೆ ಮತ್ತು ಸರ್ವಜನ ಕಲ್ಯಾಣದ ಚಳವಳಿ. ಈ ಮಹಾನ್ ಪರಂಪರೆ ಮತ್ತು ಮೌಲ್ಯಗಳನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆʼ ಎಂದು ತಿಳಿಸಿದರು.

ʼಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಐತಿಹಾಸಿಕ ಪಾತ್ರ ವಹಿಸಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಅನೇಕ ಮಹಾತ್ಮರು ಅಮೂಲ್ಯ ಕೊಡುಗೆ ನೀಡಿದ್ದಾರೆʼ ಎಂದರು.
ಇದನ್ನೂ ಓದಿ : ಬೀದರ್ | ಮೌಢ್ಯ, ಅಂಧಶ್ರದ್ಧೆ ನಿರ್ಮೂಲನೆಗೆ ಕ್ರಮ ವಹಿಸಿ : ದಲಿತ ಯುನಿಟಿ ಮೂವ್ಮೆಂಟ್
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪೂಜಾ ಜಾರ್ಜ್, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೊಡೆ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.





