ರಾಜ್ಯದಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಔರಾದ್ ಶಾಸಕ ಪ್ರಭು ಚವ್ಹಾಣ ಅವರ ನಿವಾಸಕ್ಕೆ ತೆರಳಿ ಮನವಿ ಪತ್ರ ಸಲ್ಲಿಸಲಾಯಿತು.
ಸಂಘಟನೆಯ ಪ್ರಮುಖರು ಮಾತನಾಡಿ, ʼಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಆರಂಭವಾಗಿ 50 ವರ್ಷಗಳು ಪೂರ್ಣಗೊಂಡಿದ್ದು, ಮಕ್ಕಳ ಪಾಲನೆ-ಪೋಷಣೆ ಹಾಗೂ ಪೂರ್ವ ಶಿಕ್ಷಣದಂತಹ ಸಂವಿಧಾನಬದ್ಧ ಕರ್ತವ್ಯಗಳನ್ನು ಅಂಗನವಾಡಿ ಕೇಂದ್ರಗಳ ಮೂಲಕ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಿರ್ವಹಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ಹಾಗೂ ಗುಜರಾತ್ ಹೈಕೋರ್ಟ್ ಆದೇಶದಂತೆ ಅಂಗನವಾಡಿ ನೌಕರರನ್ನು 3 ಮತ್ತು 4ನೇ ಗ್ರೇಡ್ ಸರ್ಕಾರಿ ನೌಕರರಂತೆ ಪರಿಗಣಿಸಿ ನಿಯಮ ರೂಪಿಸಬೇಕುʼ ಎಂದು ಆಗ್ರಹಿಸಿದ್ದಾರೆ.
ʼರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಪಡಿಸುವ ಬದಲು 4 ವರ್ಷ ಮೇಲ್ಪಟ್ಟ ಮಕ್ಕಳನ್ನು ಶಾಲೆಗಳ ಎಲ್ಕೆಜಿ-ಯುಕೆಜಿ ತರಗತಿಗಳಿಗೆ ಸ್ಥಳಾಂತರಿಸುವ ಪ್ರಯತ್ನಗಳಿಂದ ಯೋಜನೆ ದುರ್ಬಲವಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ನಿರ್ಧಾರ ಕೈಗೊಂಡಿದ್ದರೂ ಅಗತ್ಯ ಹಣಕಾಸು ಬಿಡುಗಡೆ ಆಗಿಲ್ಲʼ ಎಂದು ತಿಳಿಸಿದರು.
‘ಅಂಗನವಾಡಿ ನೌಕರರು ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದರೂ ಚುನಾವಣಾ ಸಂದರ್ಭದಲ್ಲಿ ನೀಡಿದ ವೇತನ ಹೆಚ್ಚಳ ಭರವಸೆ ಈಡೇರಿಸಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೇಡಿಕೆಗಳೇನು?
ಆರು ವರ್ಷದೊಳಗಿನ ಮಕ್ಕಳು ಐಸಿಡಿಎಸ್ ಅಡಿಯಲ್ಲಿರುವುದನ್ನು ಖಾತ್ರಿ ಪಡಿಸುವುದು. ಎಲ್ಲ ಅಂಗನವಾಡಿ ನೌಕರರನ್ನು ಕನಿಷ್ಠ ಕೂಲಿ ಕಾಯ್ದೆಯ ವ್ಯಾಪ್ತಿಗೆ ತಂದು ಇಎಸ್ಐ, ಪಿಎಫ್ ಕೊಡಬೇಕು. ಅಂಗನವಾಡಿ ಕೇಂದ್ರಕ್ಕೆ ಸರಬರಾಜು ಮಾಡುವ ಆಹಾರ ಪದಾರ್ಥಗಳು ಗುಣಮಟ್ಟ ಸರಿ ಇಲ್ಲದ ಕಾರಣ ಬಿಎಸ್ ಪರವಾನಿಗೆ ರದ್ದುಗೊಳಿಸಿ ಸ್ಥಳೀಯವಾಗಿ ಸಿಗುವ ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯ ಆಹಾರ ಸರಬರಾಜು ಮಾಡಬೇಕು. ಶಿಶು ಅಭಿವೃದ್ಧಿ ಯೋಜನೆಗಾಗಿ ದುಡಿದು ಬರಿಗೈಯಲ್ಲಿ 2011 ರಿಂದ 2023 ಮಾರ್ಚ್ ತನಕ ನಿವೃತ್ತರಾದ ಕಾರ್ಯಕರ್ತೆ-ಸಹಾಯಕಿಯರಿಗೂ 183 ಕೋಟಿ ಗ್ರಾಚ್ಯುಟಿ ಹಣ ಕೂಡಲೇ ಬಿಡುಗಡೆ ಮಾಡಬೇಕುʼ ಎಂದು ಆಗ್ರಹಿಸಿದರು.
ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-ಸಹಾಯಕಿ, ಮೇಲ್ವಿಚಾರಕಿ ಹಾಗೂ ಸಿಡಿಪಿಒ ಹುದ್ದೆಗಳನ್ನು ಭರ್ತಿ ಮಾಡುವುದು, ಬಿಎಲ್ಒ ಚುನಾವಣಾ ಕರ್ತವ್ಯಗಳಿಂದ ಅಂಗನವಾಡಿ ನೌಕರರನ್ನು ಬಿಡುಗಡೆ ಮಾಡುವುದು, ಸಾಮೂಹಿಕ ಆರೋಗ್ಯ ವಿಮೆ ಜಾರಿ, ಕನಿಷ್ಠ ವೇತನ ನೀಡುವುದು, ನಿವೃತ್ತರಿಗೆ ಮಾಸಿಕ 10 ಸಾವಿರ ಪಿಂಚಣಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ರಾಜ್ಯದ 1 ಲಕ್ಷಕ್ಕೂ ಅಧಿಕ ಮೃತ ಫಲಾನುಭವಿಗಳ ಖಾತೆಗೆ ʼಗೃಹಲಕ್ಷ್ಮಿʼ ಹಣ ಜಮೆ
ಈ ಸಂದರ್ಭದಲ್ಲಿ ಸಿಐಟಿಯು ತಾಲೂಕಾಧ್ಯಕ್ಷೆ ಪದ್ಮಾವತಿ ಸ್ವಾಮಿ, ಕಾರ್ಯದರ್ಶಿ ನರಸಮ್ಮ, ಖಜಾಂಚಿ ಸುದೇಶನಾ ಸೇರಿದಂತೆ ಔರಾದ್-ಕಮಲನಗರ ತಾಲೂಕಿನ ಸಂಘಟನೆಯ ಪ್ರಮುಖರಾದ ಉಮಾದೇವಿ, ಸತ್ಯವತಿ, ಸುಧಾರಾಣಿ, ಸುವರ್ಣ, ವಿಮಲ, ಲಕ್ಷ್ಮಿ, ರಂಜನಾ ರೂಪಾ, ಕಾವೇರಿ, ಸವಿತಾ, ಸುನಂದಾ, ಸುಲೋಚನಾ ಸೇರಿದಂತೆ ಅನೇಕರಿದ್ದರು.





