ಬೀದರ್ ತಾಲ್ಲೂಕಿನ ಅಲಿಯಂಬರ್ ಗ್ರಾಮದ ಮುಖ್ಯರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ಗ್ರಾಮದ ಭವಾನಿ ಮಂದಿರ ಹತ್ತಿರದ ಮುಖ್ಯರಸ್ತೆಯಲ್ಲಿ ಹೊಸ ಸೇತುವೆ ನಿರ್ಮಿಸಬೇಕು ಎಂದು ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿ ಒತ್ತಾಯಿಸಿದೆ.
ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಈ ಕುರಿತು ಜಿಲ್ಲಾಧಿಕಾರಿ ಅವರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ʼಅಲಿಯಂಬರ್ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆವರೆಗಿನ ರಸ್ತೆ ಎರಡು ವರ್ಷವಾದರೂ ಪೂರ್ಣಗೊಂಡಿಲ್ಲ. ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರು ಹಾಗೂ ಕಿರಿಯ ಎಂಜಿನಿಯರ್ ವಿರುದ್ಧ ಕ್ರಮ ಜರುಗಿಸಬೇಕುʼ ಎಂದು ಆಗ್ರಹಿಸಿದರು.
ʼಗ್ರಾಮದ ಭವಾನಿ ಮಂದಿರ ಹತ್ತಿರದ ಮುಖ್ಯರಸ್ತೆಯಲ್ಲಿನ ಸೇತುವೆ ಮಳೆಗಾಲದಲ್ಲಿ ಸ್ವಲ್ಪ ಮಳೆಯಾದರೂ ಮುಳುಗಡೆಯಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜಿಗೆ ತೆರಳಲು, ರೋಗಿಗಳಿಗೆ ಆಸ್ಪತ್ರೆಗೆ ಒಯ್ಯಲು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ಸಂಚಾರಕ್ಕೆ ತೊಂದರೆಯಾಗುತ್ತಿದೆʼ ಎಂದು ಹೇಳಿದರು.
ʼಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಅವರು ಕಳೆದ ವರ್ಷ ಸೇತುವೆ ವೀಕ್ಷಿಸಿ ₹5 ಕೋಟಿ ಅಥವಾ ₹6 ಕೋಟಿ ಅನುದಾನ ಒದಗಿಸುವ ಭರವಸೆ ನೀಡಿದ್ದರು. ಆರು ತಿಂಗಳಾದರೂ ಈ ದಿಸೆಯಲ್ಲಿ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲʼ ಎಂದು ತಿಳಿಸಿದರು.
ಇದನ್ನೂ ಓದಿ : ಬೀದರ್ | ಬೈಕ್ಗೆ ಟಿಪ್ಪರ್ ಡಿಕ್ಕಿ : ಸ್ಥಳದಲ್ಲೇ ದಂಪತಿ ಸಾವು
ಸಮಿತಿಯ ಕಲಬುರಗಿ ವಿಭಾಗೀಯ ಅಧ್ಯಕ್ಷ ಸಂಗಮೇಶ ಬಾವಿದೊಡ್ಡಿ ನಿಯೋಗದ ನೇತೃತ್ವ ವಹಿಸಿದ್ದರು. ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ವಿಶಾಲ್ ದೊಡ್ಡಿ, ಗ್ರಾಮದ ರಮೇಶ್ ಆರ್.ಬಾವಿದೊಡ್ಡಿ, ರೇವಣಸಿದ್ದ ಹಡಪದ, ಶಾಮರಾವ್ ಗಂಜೆ, ಜಗನ್ನಾಥ ಶಿಂಧೆ, ಸಂಗಮೇಶ ಧನ್ನೂರೆ, ದೇವೇಂದ್ರ ರಾಜನಾಳ ಹಾಗೂ ಬೀರಗೊಂಡ ಘೋಡಂಪಳ್ಳಿ ಇದ್ದರು.





