ಬೀದರ ತಾಲೂಕಿನ ಬೆನಕನಳ್ಳಿ–ಮರಖಲ್ ರಸ್ತೆಯಲ್ಲಿ ಮೋಟಾರ್ ಸೈಕಲ್ಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕ ದೂದಪೀರ್ ಹುಸೇನ್ ಸಾಬ್ ಮುಲ್ಲಾ ಮತ್ತು ಸಿಪಿಐ ಜಿ.ಎಸ್.ಬಿರಾದರ್ ಅವರ ನೇತೃತ್ವದಲ್ಲಿ ಜನವಾಡಾ ಪೊಲೀಸ್ ಠಾಣೆ ಸಿಬ್ಬಂದಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿದರು.
ಫೆ.16ರಂದು ಸಂಜೆ, ಬೀದರ ತಾಲೂಕಿನ ಬೆನಕನಳ್ಳಿ–ಮರಖಲ್ ರಸ್ತೆಯಲ್ಲಿ ಆರೋಪಿತರು ಮೋಟಾರ್ ಸೈಕಲ್ಗಳಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಜನವಾಡ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿತರಿಂದ ₹90.11 ಸಾವಿರ ಮೌಲ್ಯದ 200 ವಿವಿಧ ಮಾದಕ ಸಿರಪ್ ಬಾಟಲಿ, ಗುಳಿಗೆಗಳು, ₹2.05 ಲಕ್ಷ ಮೌಲ್ಯದ ನಾಲ್ಕು ದ್ವಿಚಕ್ರ ವಾಹನ, ನಗದು ₹10,100 ಸೇರಿ ಒಟ್ಟು ₹3,05,216 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ಜನವಾಡಾ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಕಲಂ 21, 22(ಬಿ) ಪ್ರಕಾರ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಎಸ್ಪಿ ಪ್ರದೀಪ ಗುಂಟಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಜನಪರ, ಜೀವಪರ ಸಾಹಿತ್ಯ ರಚನೆಯಾಗಲಿ : ಮಾಣಿಕ ನೇಳಗಿ
ಈ ಯಶಸ್ವಿ ಕಾರ್ಯಾಚರಣೆಗೆ ಪೊಲೀಸ್ ತಂಡವನ್ನು ಜಿಲ್ಲಾ ಎಸ್ಪಿ ಪ್ರಶಂಸಿಸಿದ್ದು, ಇಂತಹ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.




