ಬೀದರ ನಗರದ ಶಹಾಪುರ ಗ್ರಾಮದಿಂದ ಎರಡು ಮೋಟಾರ್ ಸೈಕಲ್ಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ, ಮೂವರನ್ನು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ ಅವರ ಮಾರ್ಗದರ್ಶನದಲ್ಲಿ, ಸೆನ್ ಠಾಣೆಯ ಡಿಎಸ್ಪಿ ಎಸ್.ಎನ್.ಸನದಿ, ಬೀದರ್ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ದೂದಪೀರ್ ಹುಸೇನ್ ಸಾಬ್ ಮುಲ್ಲಾ ಅವರ ನೇತೃತ್ವದಲ್ಲಿ ಮಾರ್ಕೆಟ್ ಪೊಲೀಸ್ ಠಾಣೆ ಪಿಎಸ್ಐ ಸಿದ್ದಣ್ಣ ಗಿರಿಗೌಡರ್ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಿದರು.
ಮಾ.2ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೀದರ ನಗರದ ಶಹಾಪುರ ಕಡೆಯಿಂದ ಆರೋಪಿತರು ಎರಡು ಮೋಟಾರ್ ಸೈಕಲ್ಗಳಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಮಾರ್ಕೆಟ್ ಠಾಣೆಯ ಪೊಲೀಸರು ದಾಳಿ ನಡೆಸಿದರು.
ಆರೋಪಿಗಳ ಬಳಿ ಪರಿಶೀಲನೆ ನಡೆಸಿದಾಗ ಎರಡು ಪ್ಲಾಸ್ಟಿಕ್ ಚೀಲಗಳಲ್ಲಿ ಕಫ್ ಸಿರಾಫ್ ಹಾಗೂ ನಶೆ ಗುಳಿಗೆಗಳು ಪತ್ತೆಯಾಗಿವೆ. ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಬೀದರ್ ನಗರದಲ್ಲಿ ಅನಧಿಕೃತವಾಗಿ ಮಾರಾಟಕ್ಕೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದರು. ಆರೋಪಿತರಿಂದ ₹59.51 ಸಾವಿರ ಮೌಲ್ಯದ 100 ಕಫ್ ಸಿರಪ್ ಬಾಟಲಿ, ಎರಡು ಬಾಕ್ಸ್ನಲ್ಲಿ 2,160 ನಶೆ ಗುಳಿಗೆಗಳು ಹಾಗೂ ₹75 ಸಾವಿರ ಮೌಲ್ಯದ 2 ದ್ವಿಚಕ್ರ ವಾಹನ ಸೇರಿ ಒಟ್ಟು ₹1,34,511 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಈ ಕುರಿತು ಬೀದರ್ನ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆ ಕಲಂ 21, 22(ಬಿ) ಅಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಎಸ್ಪಿ ಪ್ರದೀಪ ಗುಂಟಿ ಅವರು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಗ್ರಾಪಂ ಮಾಜಿ ಅಧ್ಯಕ್ಷೆಗೆ ಇಲ್ಲ ಸ್ವಂತ ಸೂರು : ಅನ್ನ-ಆಸರೆಗೆ ವೃದ್ಧ ದಂಪತಿ ಪರದಾಟ!
ಈ ಯಶಸ್ವಿ ಕಾರ್ಯಾಚರಣೆಗೆ ಪೊಲೀಸ್ ತಂಡವನ್ನು ಎಸ್ಪಿ ಪ್ರದೀಪ ಗುಂಟಿ ಅವರು ಶ್ಲಾಘಿಸಿದ್ದಾರೆ. ಪದೇ ಪದೇ ಇಂತಹ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದವರ ವಿರುದ್ಧ ಗುಂಡಾ ಕಾಯ್ದೆ ತೆರೆದು ಕಟ್ಟುನಿಟ್ಟಿನ ಕ್ರಮಕೈಗೊಂಡು ಗಡಿಪಾರು ಮಾಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.





