ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ತಕ್ಷಣ ಅನುದಾನ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು.
ಬೀದರ್ ನಗರದ ಮಡಿವಾಳ ಮಾಚಿದೇವರ ವೃತ್ತದಲ್ಲಿ ಜಮಾಯಿಸಿದ ನೂರಾರು ಖಾಸಗಿ ಶಾಲೆಗಳ ಮುಖ್ಯಸ್ಥರು, ಶಿಕ್ಷಕರು, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಸಲ್ಲಿಸಿದರು.
ಸಂಘದ ಮುಖಂಡರು ಮಾತನಾಡಿ, ‘ಕಳೆದ ಮೂರು ದಶಕಗಳಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳು ಶಿಕ್ಷಣ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣದ ಆಸರೆಯಾಗಿವೆ. ಆದರೆ ಈ ಶಾಲೆಗಳಿಗೆ ಸರ್ಕಾರದಿಂದ ಯಾವುದೇ ಅನುದಾನ ದೊರಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕಳೆದ ಒಂದು ವರ್ಷದಿಂದ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡುವ ಭರವಸೆ ನೀಡುತ್ತಲೇ ಬಂದಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಅನುದಾನ ನೀಡಲಾಗುವುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಬಜೆಟ್ನಲ್ಲಿ ಯಾವುದೇ ಅನುದಾನ ಘೋಷಿಸದಿರುವುದರಿಂದ ಖಾಸಗಿ ಶಾಲೆಗಳು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವಂತಾಗಿದೆ’ ಎಂದು ತಿಳಿಸಿದ್ದಾರೆ.
‘1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲೆಗಳಿಗೆ ತಕ್ಷಣ ಅನುದಾನ ಒದಗಿಸಬೇಕು. ಬಡಕುಟುಂಬದ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶ ಕಲ್ಪಿಸುವ ಆರ್.ಟಿ.ಇ. ಕಾಯ್ದೆಯನ್ನು ಮರು ಜಾರಿಗೊಳಿಸಬೇಕು. ಜೊತೆಗೆ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಸರಳೀಕರಿಸಿ ಶಾಲೆಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸರ್ಕಾರಕ್ಕೆ ಮನವಿ ಪತ್ರ ಮುಖಾಂತರ ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರಕುಮಾರ ಮಣಗೀರೆ, ಗೌರವಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ, ಕಾರ್ಯದರ್ಶಿ ಗುರುನಾಥರೆಡ್ಡಿ ಚಿಂತಾಕಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘದ ಪ್ರಮುಖರಾದ ಸಂಜು ಶೆಟಕಾರ, ಗುರುನಾಥ ದೇಶಮುಖ, ಮಾಣಿಕಪ್ಪ ಗೊರನಾಳೆ, ಸಂದೀಪ ಶೆಟಕಾರ್, ಗಣಪತಿ ಸೋಲಪುರೆ, ಸಂಜು ಕಂಠಾರ, ಸೈಯದ್ ಅಹ್ಮದ್ ಮುದ್ದೆ, ಸಂಜುಕುಮಾರ ಜಾಂತೆ ಸೇರಿದಂತೆ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಶಾಲಾ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





