ಡಾ.ಬಿ.ಆರ್.ಅಂಬೇಡ್ಕರ ಅವರ ʼಭಾರತದ ಪ್ರಸ್ತುತ ಸವಾಲುಗಳು, ಚಿಂತನೆಗಳು ಮತ್ತು ಸಮಕಾಲೀನ ಪರಿಹಾರಗಳುʼ ವಿಷಯದ ಕುರಿತು ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ʼಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಸವ ಭೂಮಿಯಾದ ಬೀದರದಲ್ಲಿ ಅಂಬೇಡ್ಕರ ಚಿಂತನೆಗಳ ಕುರಿತ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ನಡೆಯುತ್ತಿರುವುದು ಹೆಮ್ಮೆಯ ವಿಷಯ. ಬುದ್ಧ, ಬಸವ ಮತ್ತು ಅಂಬೇಡ್ಕರ ಅವರ ಆದರ್ಶಗಳು ಸಮಸಮಾಜ ನಿರ್ಮಾಣಕ್ಕೆ ದಾರಿ ತೋರಲಿವೆʼ ಎಂದು ಹೇಳಿದರು.
ʼಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರಿಂದ ಅಂಬೇಡ್ಕರ ಕುರಿತ ನಾಟಕಗಳು, ಸಾಹಿತಿ ಮತ್ತು ಹೋರಾಟಗಾರರಿಂದ ವಿವಿಧ ವಿಷಯಗಳ ವಿಚಾರಗೋಷ್ಠಿಗಳು ನಡೆಯಲಿವೆ. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಗಣ್ಯರನ್ನು ಆಹ್ವಾನಿಸಲಾಗುವುದುʼ ಎಂದು ಸಚಿವರು ತಿಳಿಸಿದರು.
ʼಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರಗಳು ಎಲ್ಲ ಸಮುದಾಯಗಳಿಗೆ ಅಗತ್ಯವಾಗಿವೆ. ಜಿಲ್ಲೆಯ ಎಲ್ಲಾ ವರ್ಗದ ಜನರು, ಮುಖಂಡರು ಹಾಗೂ ಯುವ ಸಮುದಾಯಗಳನ್ನು ಒಳಗೊಳ್ಳುವಂತೆ ವಿಚಾರ ಸಂಕಿರಣವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗುವುದುʼ ಎಂದು ತಿಳಿಸಿದರು.
ʼವಿಚಾರ ಸಂಕಿರಣದಲ್ಲಿ ಅಂಬೇಡ್ಕರ ಚಿಂತನೆಗಳು, ಲಿಂಗ ಸಮಾನತೆ, ಅಸ್ಪೃಶ್ಯತೆಯ ಸಬಲೀಕರಣ, ಭಾರತೀಯ ಸಂವಿಧಾನದ ಮೌಲ್ಯಗಳು, ಸಾಮಾಜಿಕ ನ್ಯಾಯ, ಜಾತಿ ವ್ಯವಸ್ಥೆ ಸೇರಿದಂತೆ ಆರು ಪ್ರಮುಖ ವಿಷಯಗಳ ಕುರಿತು ಗೋಷ್ಠಿಗಳು ನಡೆಯಲಿವೆʼ ಎಂದು ವಿವರಿಸಿದರು.
ಸಭೆಯಲ್ಲಿ ಸಮಾಜದ ಹಿರಿಯ ಮುಖಂಡರುಗಳು ವಿಚಾರ ಸಂಕಿರಣದ ಯಶಸ್ವಿಗಾಗಿ ವಿವಿಧ ಸಲಹೆಗಳನ್ನು ನೀಡಿದರು. ಎಲ್ಲರ ಸಲಹೆಗಳನ್ನು ಪರಿಶೀಲಿಸಿ ಜಿಲ್ಲಾಡಳಿತ ಹಾಗೂ ಸಮಾಜದ ಎಲ್ಲ ಮುಖಂಡರುಗಳ ಸಹಕಾರದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಇದನ್ನೂ ಓದಿ : AI ಸೃಷ್ಟಿಸುವ ತಪ್ಪು ಮಾಹಿತಿ ಪ್ರಜಾಪ್ರಭುತ್ವದ ದಿಕ್ಕು ತಪ್ಪಿಸಬಹುದು: ಕೇಂದ್ರ ಸಚಿವ ಜಿತಿನ್ ಪ್ರಸಾದ ಎಚ್ಚರಿಕೆ
ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಸಮಾಜದ ಮುಖಂಡರು ಉಪಸ್ಥಿತರಿದ್ದರು.





