ಮುಂಬರುವ ದಿನಗಳಲ್ಲಿ ಬೀದರ್ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಹಾಗೂ ಕ್ರಿಯಾಯೋಜನೆ ಸಿದ್ದಪಡಿಸಿ ಒಂದು ವಾರದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಆಯಾ ತಾಲೂಕಿನ ತಹಸೀಲ್ದಾರ್, ತಾಲ್ಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಕ್ರೀಯಾಶೀಲರಾಗಿ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕುʼ ಎಂದು ತಿಳಿಸಿದರು.
ʼಈ ವರ್ಷ ಮುಂಬರುವ ದಿನಗಳಲ್ಲಿ ತಾಪಮಾನವು ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ವರದಿಯಿದೆ. ಕಳೆದ ಮೂರ್ನಾಲ್ಕು ವರ್ಷಗಳ ಅನುಭವದ ಹಿನ್ನೆಲೆಯಲ್ಲಿ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಸಿದ್ದಗೊಳಿಸಿ ಕುಡಿಯುವ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕು. ನಗರ ಹಾಗೂ ಗ್ರಾಮೀಣ ಜನತೆಗೆ ಸ್ಥಳೀಯ ಸಂಸ್ಥೆ ತಮ್ಮ ಅನುದಾನದಲ್ಲಿ ನೀರಿನ ಸಮಸ್ಯೆ ಬಗೆಹರಿಸಬೇಕುʼ ಎಂದರು.
ʼಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. 15 ದಿನಕ್ಕೊಮ್ಮೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆ ಸೇರಿ ಸಮಸ್ಯೆಗಳನ್ನು ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಕಳೆದ ಬಾರಿ ಕಂಡುಬಂದ ಸಮಸ್ಯೆಗಳ ಆಧಾರದ ಮೇಲೆ ಈಗಾಗಲೇ ಸಿದ್ಧಗೊಳ್ಳಬೇಕು. ಬರ ಘೋಷಣೆಯಾದಲ್ಲಿ ತಾಲ್ಲೂಕಾ ಟಾಸ್ಕ್ ಫೋರ್ಸ್ ಅನುದಾನದಲ್ಲಿ ಕೊಳವೆ ಬಾವಿ ಪುನಶ್ಚೇತನ, ಪೈಪಲೈನ್, ಮೋಟಾರ್ ರಿಪೇರಿ, ಖಾಸಗಿ ಕೊಳವೆಬಾವಿ ಬಾಡಿಗೆ, ಕಾಮಗಾರಿ ಹಾಗೂ ಟ್ಯಾಂಕರ್ ಮೂಲಕ ನೀರು ಸರಬರಾಜು ಕೈಗೊಳ್ಳಬಹುದುʼ ಎಂದರು.
ಔರಾದ್, ಕಮಲನಗರ ಅಧಿಕಾರಿಗಳು ಹೆಚ್ಚು ನಿಗಾ ವಹಿಸಬೇಕು. ಔರಾದ್ ತಾಲೂಕಿನಲ್ಲಿ ಕಳೆದ ಬಾರಿ 48 ಗ್ರಾಮ, 29 ತಾಂಡಾಗಳಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿತು ಎಂದು ತಾಲ್ಲೂಕು ಪಂಚಾಯತ ಅಧಿಕಾರಿಗಳು ಸಭೆಗೆ ತಿಳಿಸಿದರು. ಕಮಲನಗರ ತಾಲೂಕಿನ ಚಿಕ್ಲಿ(ಯು) ಸುತ್ತಲಿನ 28 ತಾಂಡಾ ಹಾಗೂ ಭಾಲ್ಕಿ ತಾಲ್ಲೂಕಿನ 15 ಗ್ರಾಮಗಳಲ್ಲಿ ಸಮಸ್ಯೆ ಎದುರಾಗಿತು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಖಾಸಗಿ ಕೊಳವೆ ಬಾವಿ ಬಾಡಿಗೆಗೆ ಈಗಾಗಲೇ ಗುರುತಿಸಿಕೊಳ್ಳಬೇಕು. ತೆರೆದ ಬಾವಿ ಹಾಗೂ ಸಣ್ಣ ನೀರಾವರಿ ಇಲಾಖೆಯ ಕೆರೆಗಳನ್ನು ಸಹ ಕುಡಿಯುವ ನೀರಿಗೆ ಬಳಸಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.
ಕ್ರಿಯಾಯೋಜನೆ ಸಿದ್ದಪಡಿಸಿಕೊಂಡು ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಈಗಿರುವ ಮೇವು ಆದ್ಯತೆ, ದಾಸ್ತಾನು ಗಮನಿಸಬೇಕು. ಜಿಲ್ಲೆಯ ಹೊರಗೆ ಮೇವು ಸಾಗಾಟ ಆಗದಂತೆ ತಹಸೀಲ್ದಾರರು ಎಚ್ಚರಿಕೆ ವಹಿಸಬೇಕುʼ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಇದನ್ನೂ ಓದಿ : ಅಗ್ನಿಪಥ ನೇಮಕಾತಿಗಾಗಿ ಆನ್ಲೈನ್ ನೋಂದಣಿ ಆರಂಭ
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ಆಯಾ ತಾಲ್ಲೂಕಿನ ತಹಸೀಲ್ದಾರರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ವ್ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
–ನಿಮ್ಮ ಊರು, ನಗರ, ಪಟ್ಟಣದ ಕುಂದು-ಕೊರತೆಗಳ ಬಗ್ಗೆ ಪೋಟೋ, ವಿಡಿಯೋ ಮಾಹಿತಿಯನ್ನು
ʼಈದಿನʼ ನ್ಯೂಸ್ ಬೀದರ್ ಸಹಾಯವಾಣಿ 9035053805 ವಾಟ್ಸಪ್ ಸಂಖ್ಯೆಗೆ ಕಳುಹಿಸಿ.





