ಕಲ್ಯಾಣ ಕರ್ನಾಟಕ ಅನುದಾನರಹಿತ ಖಾಸಗಿ ಶಾಲಾ–ಕಾಲೇಜುಗಳ ಸಂಸ್ಥೆಯ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾರ್ಚ್ 12ರಂದು ಬೆಳಿಗ್ಗೆ ಖಾಸಗಿ ಶಾಲಾ-ಕಾಲೇಜು ಬಂದ್ ಮಾಡಿ ಬೀದರದಿಂದ ಚಾಮರಾಜನಗರವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.
ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ʼಮಾರ್ಚ್ 6ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿದ ಬಜೆಟ್ನಲ್ಲಿ ಖಾಸಗಿ ಅನುದಾನರಹಿತ ಕನ್ನಡ ಶಾಲೆಗಳಿಗೆ ಅನುದಾನ ನೀಡುವ ಭರವಸೆ ಇತ್ತು. ಈ ಕುರಿತು ಹಲವು ಬಾರಿ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರಿಗೆ ಮನವಿಯನ್ನೂ ಸಲ್ಲಿಸಲಾಗಿತ್ತು. ಆದರೆ ಕನ್ನಡ ಭಾಷೆ ಮತ್ತು ಕನ್ನಡ ಶಾಲೆಗಳನ್ನು ಉಳಿಸುವ ಕಾರ್ಯ ಮಾಡುತ್ತಿರುವ ಖಾಸಗಿ ಅನುದಾನರಹಿತ ಶಾಲೆಗಳಿಗೆ ಅನುದಾನ ನೀಡದೆ ಸರ್ಕಾರ ಕನ್ನಡ ವಿರೋಧಿ ನಿಲುವು ತಾಳಿದೆ. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಈ ಹೋರಾಟ ಮಾಡಲಾಗುತ್ತಿದೆʼ ಎಂದರು.
ʼರಾಜ್ಯ ಸರ್ಕಾರಕ್ಕೆ ಕನ್ನಡ ಶಾಲೆ ಉಳಿಸುವ ಮನೋಭಾವ ಇಲ್ಲದಂತೆ ಕಾಣುತ್ತಿದೆ. ಪ್ರತೀ ಗ್ರಾ.ಪಂ.ವ್ಯಾಪ್ತಿಗೊಂದು ಇಂಗ್ಲೀಷ್ ಮಾಧ್ಯಮದ 800 ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ಘೋಷಿಸಿದೆ. ಇದರಿಂದ ಒಂದೊಂದು ಗ್ರಾಮಗಳಲ್ಲಿ ಮೂರರಿಂದ ನಾಲ್ಕು ಕನ್ನಡ ಶಾಲೆಗಳು ಬಂದ್ ಆಗುವ ನಿರೀಕ್ಷೆಯಿದೆ. ಆದ್ದರಿಂದ ಖಾಸಗಿ ಕನ್ನಡ ಶಾಲೆಗಳಿಗೆ ಈಗಲೂ ಅನುದಾನ ಒದಗಿಸಬೇಕೆಂದು ಪ್ರತಿಭಟನೆ ನಡೆಸಲಾಗುತ್ತಿದ್ದು, ಖಾಸಗಿ ಶಾಲಾ-ಕಾಲೇಜಿನ ಶಿಕ್ಷಕರು, ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕುʼ ಎಂದರು.
ʼಆರ್ಟಿಇ ಯೋಜನೆಯನ್ನು ಮರುಜಾರಿ ಮಾಡಬೇಕು, ಖಾಸಗಿ ಶಾಲೆಗಳಿಗೂ ಬಿಸಿಯೂಟ ಯೋಜನೆಯನ್ನು ವಿಸ್ತರಿಸಬೇಕು, ಖಾಲಿ ಇರುವ ಬೋಧಕರ ಹುದ್ದೆಗಳಿಗೆ ನೇಮಕಾತಿ ಮಾಡಬೇಕು ಹಾಗೂ ಶಾಲೆಗಳ ನವೀಕರಣ ನೀತಿಯನ್ನು ಸರಳಗೊಳಿಸಬೇಕು ಎಂದು ಒತ್ತಾಯಿಸಲಾಗುವುದು. ಇದೇ ವೇಳೆ, ಜೂನ್ 1ರಂದು ಶಾಲೆಗೆ ಸೇರುವ ಮಕ್ಕಳಿಗೆ ಕಡ್ಡಾಯವಾಗಿ ಆರು ವರ್ಷ ತುಂಬಿರಬೇಕು ಎಂಬ ಸರ್ಕಾರದ ನಿಯಮವನ್ನು ಪರಿಷ್ಕರಿಸಿ ಪೋಷಕರಿಗೆ ಹಾಗೂ ಮಕ್ಕಳಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುವುದು ಸೇರಿ ವಿವಿಧ ಬೇಡಿಕೆಗಳ ಹಕ್ಕೊತ್ತಾಯವನ್ನು ಮಾ.12ರಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರಿಗೆ ಸಲ್ಲಿಸಲಾಗುತ್ತದೆʼ ಎಂದು ಜಲಾದೆ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಅನುದಾನರಹಿತ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ಮಣಗೆರೆ ಮಾತನಾಡಿ, ʼಖಾಸಗಿ ಶಾಲೆಗಳ ಸಮಸ್ಯೆಗಳ ಕುರಿತು ಹಲವು ಬಾರಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಸಹಕಾರದೊಂದಿಗೆ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದೆ’ ಎಂದು ದೂರಿದರು.
ʼ2005ರ ವರೆಗೆ ಸ್ಥಾಪಿತವಾದ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕೆಂಬ ಬೇಡಿಕೆಗೆ ಸರ್ಕಾರ ಸ್ಪಂದಿಸದೆ ಗಡಿಭಾಗದ ಕನ್ನಡ ಶಾಲೆಗಳ ವಿನಾಶಕ್ಕೆ ನಾಂದಿ ಹಾಡಿದಂತಾಗಿದೆ. ಗಡಿಜಿಲ್ಲೆ ಬೀದರದಲ್ಲಿ ಅನ್ಯಭಾಷೆಗಳ ಪ್ರಭಾವ ಹೆಚ್ಚುತ್ತಿರುವುದರಿಂದ ಕನ್ನಡ ಶಾಲೆಗಳು ಮುಚ್ಚುತ್ತಿವೆ. ಅನುದಾನದ ಕೊರತೆಯಿಂದ ಹಲವಾರು ಕನ್ನಡ ಶಾಲೆಗಳು ಆಂಗ್ಲ ಮಾಧ್ಯಮಕ್ಕೆ ಪರಿವರ್ತನೆಗೊಳ್ಳುತ್ತಿವೆ ಎಂದರು.
ʼಇಂತಹ ಪರಿಸ್ಥಿತಿಯಲ್ಲಿ ಸರ್ಕಾರವೇ ನಿರ್ಲಕ್ಷ್ಯ ಧೋರಣೆ ತಾಳಿದರೆ ಕನ್ನಡ ಭಾಷೆಯ ಭವಿಷ್ಯ ಏನಾಗುತ್ತದೆ ಎಂದು ಪ್ರಶ್ನಿಸಿದ ಅವರು, ಕನ್ನಡವನ್ನು ಉಳಿಸಬೇಕಾದ ಸರ್ಕಾರವೇ ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಮೂಲಕ ಕನ್ನಡ ಶಿಕ್ಷಣವನ್ನು ದುರ್ಬಲಗೊಳಿಸುತ್ತಿದೆ. ಮಾ.12ರ ಒಳಗಾಗಿ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಬೀದರ್ ನಗರದ ಮಡಿವಾಳ ಮಾಚಿದೇವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದುʼ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ : ಭಾಲ್ಕಿ | ಟ್ರ್ಯಾಕ್ಟರ್ ಪಲ್ಟಿ : 13 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಕಲ್ಯಾಣ ಕರ್ನಾಟಕ ಅನುದಾನರಹಿತ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯ ಕಾರ್ಯದರ್ಶಿ ಗುರುನಾಥ ರೆಡ್ಡಿ ಚಿಂತಾಕಿ ಸೇರಿದಂತೆ ಪ್ರಮುಖರಾದ ಗಣಪತಿ ಸೋಲಪುರೆ, ಗುಂಡಯ್ಯ ತೀರ್ಥ, ದೇವಿದಾಸ, ಸಂದೀಪ ಶೆಟಕಾರ, ವಿಜಯಕುಮಾರ ಮತ್ತಿತರರಿದ್ದರು.





