ಬೀದರ್ ನಗರದ ಪಾಪನಾಶ ದೇವಸ್ಥಾನ ಅಭಿವೃದ್ಧಿಯಾಗಬೇಕು ಎನ್ನುವುದು ಬೀದರ ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿತ್ತು, ಅದು ಸಂಸದ ಸಾಗರ ಖಂಡ್ರೆ ಅವರ ಸತತ ಪ್ರಯತ್ನದಿಂದ ಈಡೇರಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಭಾರತ ಸರ್ಕಾರ, ಪ್ರವಾಸೋದ್ಯಮ ಇಲಾಖೆ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಬೀದರ, ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಪ್ರಸಾದ ಯೋಜನೆ ಅಡಿಯಲ್ಲಿ 22.41 ಕೋಟಿ ರೂ. ವೆಚ್ಚದಲ್ಲಿ ಪಾಪನಾಶ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ʼ2024ರ ಮಾರ್ಚ್ ತಿಂಗಳಲ್ಲಿ ಈ ಕಾಮಗಾರಿ ಘೋಷಣೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಆದರೆ, ಯಾವುದೇ ಪ್ರಗತಿಯಾಗಿರಲಿಲ್ಲ. ಸಂಸದ ಸಾಗರ ಖಂಡ್ರೆ ಸಂಸದರಾದ ಮೇಲೆ ಕೇಂದ್ರ ಪ್ರವಾಸೋದ್ಯಮ ಸಚಿವರಿಗೆ ನಿರಂತರ ಭೇಟಿ ಮಾಡಿ ಹಣ ಮಂಜೂರಾತಿ ಮಾಡಿಸಿದ್ದಾರೆ. ನಂತರ ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆಯಿಂದ ಟೆಂಡರ್ ಆಗಿ ಈಗ ಕಾಮಗಾರಿ ಪ್ರಾರಂಭವಾಗುತ್ತಿದೆ. ಕಾಮಗಾರಿಯೂ ನಾಲ್ಕು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆʼ ಎಂದರು.
ʼದೇವಸ್ಥಾನಗಳ ಮೇಲೆ ಜನರ ಸಾಕಷ್ಟು ನಂಬಿಕೆ ಇದೆ. ಶಿವರಾತ್ರಿ ಸಮಯದಲ್ಲಿ ಪಾಪನಾಶ ದೇವಾಲಯಕ್ಕೆ ಸಹಸ್ರಾರು ಭಕ್ತರು ಭೇಟಿ ನೀಡುತ್ತಾರೆ. ದೇವಸ್ಥಾನದ ಜೀರ್ಣೋದ್ಧಾರದಿಂದ ಬರುವ ಭಕ್ತರಿಗೆ ಅನುಕೂಲವಾಗಲಿದೆ. ಇದರ ಜೊತೆಗೆ 10 ಎಕರೆ ಪ್ರದೇಶದಲ್ಲಿ ಅಂಬೇಡ್ಕರ್ ಸಂಶೋಧನಾ ಸಂಸ್ಥೆ, ವಿಮಾನಯಾನಕ್ಕೆ ಮರುಚಾಲನೆ ಸೇರಿದಂತೆಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಲಾಗುತ್ತಿದೆʼ ಎಂದರು.

ಪೌರಾಡಳಿ ಹಾಗೂ ಹಜ್ ಸಚಿವ ರಹೀಂ ಖಾನ್ ಮಾತನಾಡಿ, ʼಯಾರೇ ಅಭಿವೃದ್ಧಿ ಮಾಡಲಿ ಒಟ್ಟಿನಲ್ಲಿ ಬೀದರ ಅಭಿವೃದ್ಧಿಯಾಗಬೇಕು. ನಮ್ಮ ಇಲಾಖೆಯಿಂದ ಪಾಪನಾಶ ಅಭಿವೃದ್ಧಿಗಾಗಿ 5 ಕೋಟಿ ರೂಪಾಯಿ ನೀಡಿದ್ದೇನೆ. ಬೀದರ ಕೋಟೆ ಅಭಿವೃದ್ಧಿಗಾಗಿ 10 ಕೋಟಿ ಹಾಗೂ ಕೆರೆ ಅಭಿವೃದ್ಧಿಗಾಗಿ 50 ಕೋಟಿ ಮಿಸಲೀಟ್ಟಿದ್ದೇನೆ. ಈಗಾಗಲೇ 100 ಕೋಟಿ ರೂಪಾಯಿ ವೆಚ್ಚದಲ್ಲಿ ಜಿಲ್ಲೆಯಲ್ಲಿ ರಸ್ತೆ ಚರಂಡಿ ಕಾಮಗಾರಿ ನಡೆಯಲಿವೆʼ ಎಂದರು.
ಸಂಸದ ಸಾಗರ ಖಂಡ್ರೆ ಮಾತನಾಡಿ, ʼಐತಿಹಾಸಿಕ ಪಾಪನಾಶ ದೇವಸ್ಥಾನದ ಅಭಿವೃದ್ಧಿಗೆ ʼಪ್ರಸಾದʼ ಯೋಜನೆಯಡಿ ತಾವು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಅನುದಾನ ಬಿಡುಗಡೆಗಾಗಿ ವಿನಂತಿಸಿದ ನಂತರ ಸಚಿವರು ಅನುದಾನ ಬಿಡುಗಡೆ ಮಾಡಿದ್ದಾರೆ. ಈಗ ನನ್ನ ಕ್ಷೇತ್ರದ ಜನತೆಯ ಪರವಾಗಿ ಸಂಸದರಾಗಿ 22.41 ಕೋಟಿ ರೂ. ವೆಚ್ಚದಲ್ಲಿ ದೇವಾಲಯ ಅಭಿವೃದ್ಧಿಯ ವಿವಿಧ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಯಾರೂ ರಾಜಕೀಯ ತರಬಾರದು. ಪಾಪನಾಶ ದೇವಸ್ಥಾನ ಅಭಿವೃದ್ಧಿಗೆ ಅಲ್ಲದೇ ಜಿಲ್ಲೆಯ ಎಲ್ಲ ಧಾರ್ಮಿಕ ಕ್ಷೇತ್ರಗಳನ್ನು ಸಹ ಅಭಿವೃದ್ಧಿ ಮಾಡಲಾಗುವುದುʼ ಎಂದರು.
ʼಬಡ ಜನರಿಗಾಗಿ ಈಗಾಗಲೇ 50 ಸಾವಿರ ಮನೆಗಳನ್ನು ಮಂಜೂರು ಮಾಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 100 ಕೋಟಿ ರೈಲ್ವೆ ಕಾಮಗಾರಿ ನಡೆಯುತ್ತಿದೆ. ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ತಾವು ಬದ್ಧರಾಗಿದ್ದೇವೆ. ಪಾಪನಾಶ ಮಂದಿರದ ಪರಿಸರದಲ್ಲಿ ಜಾತ್ರಾ ಸಂಕೀರ್ಣ ನಿರ್ಮಾಣ, ಕೆರೆ ಮತ್ತು ಸುತ್ತಲಿನ ಪ್ರದೇಶ ಕಾಮಗಾರಿ, ಅನ್ನದಾಸೋಹ ಕಟ್ಟಡ, ಯಾತ್ರಿಕರ ವಿಶ್ರಾಂತಿ ತಾಣ, ಸಾಂಸ್ಕೃತಿಕ ಮತ್ತು ಮನೋರಂಜನಾ ಕೇಂದ್ರ, ಪಾರ್ಕಿಂಗ್ ಪ್ರದೇಶ ಅಭಿವೃದ್ಧಿ, ರಸ್ತೆ, ಪಾದಚಾರಿ ಮಾರ್ಗಗಳು, ಮುಖ್ಯ ಪ್ರವೇಶ ದ್ವಾರ ಹಾಗೂ ವಿವಿಧ ರೀತಿಯ ಕಾಮಗಾರಿಗಳನ್ನು ಕೈಗೊಳ್ಳಲಾಗುವುದುʼ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ್ ಮಾತನಾಡಿ, ʼಸಂಸದ ಸಾಗರ ಖಂಡ್ರೆ ಅವರು ಶ್ರಮದಿಂದ ಅನುದಾನ ತಂದು ತರುವಲ್ಲಿ ಸಫಲರಾಗಿದ್ದಾರೆ. ಈಗ ಟೆಂಡರ್ ಮಾಡಿಸಿ ಕಾಮಗಾರಿ ಪ್ರಾರಂಭಿಸಿದ್ದಾರೆ. ನಾವೆಲ್ಲರೂ ಸೇರಿ ಅವರಿಗೆ ಸಹಕಾರ ನೀಡಿದಾಗ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಲು ಶಕ್ತಿ ನೀಡಿದಂತಾಗುತ್ತದೆʼ ಎಂದರು.
ಇದನ್ನೂ ಓದಿ : ಬೀದರ್ | ವಸತಿ ಗೃಹದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆ
ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಲಾ ನಾರಾಯಣರಾವ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ ಚಿಮಕೋಡೆ, ಬೀದರ ನಗರಸಭೆ ಅಧ್ಯಕ್ಷ ಮಹ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ಬದೋಲೆ, ಬೀದರ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಎಎಸ್ಪಿ ಚಂದ್ರಕಾಂತ ಪೂಜಾರಿ, ಬೀದರ ಸಹಾಯಕ ಆಯುಕ್ತ ಮೊಹ್ಮದ್ ಶಕೀಲ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಸೇರಿದಂತೆ ಬಸವರಾಜ ಧನ್ನೂರ, ಹಣಮಂತ ಚವ್ಹಾಣ ಸೇರಿದಂತೆ ಇತರರು ಉಪಸ್ಥಿತರಿದ್ದರು.





