ಪ್ರಸ್ತುತ ಕೌಶಲಕ್ಕೆ ಎಲ್ಲೆಡೆ ಬಹು ಬೇಡಿಕೆ ಇದೆ ಎಂದು ಚಿತ್ತಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಂಗಪ್ಪ ಮಾಮನಶೆಟ್ಟಿ ಹೇಳಿದರು.
ಬೀದರ್ ನಗರದ ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಈಚೆಗೆ ಆಯೋಜಿಸಿದ್ದ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ರ್ಯಾಂಕ್ ವಿಜೇತರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ʼವಿದ್ಯಾರ್ಥಿಗಳು ಅಂಕ ಗಳಿಕೆ ಜತೆಗೆ ಕೌಶಲಕ್ಕೂ ಪ್ರಾಮುಖ್ಯ ಕೊಡಬೇಕು. ವಿದ್ಯಾರ್ಥಿಗಳು ಸಾಧನೆಗೆ ನಿರ್ದಿಷ್ಟ ಗುರಿ ಇಟ್ಟುಕೊಳ್ಳಬೇಕು. ಕಠಿಣ ಪರಿಶ್ರಮದಿಂದ ಅದನ್ನು ಸಾಕಾರ ಮಾಡಿಕೊಳ್ಳಬೇಕು. ಉನ್ನತ ಶಿಕ್ಷಣಕ್ಕೆ ಸರ್ಕಾರ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳು ಅದರ ಲಾಭ ಪಡೆಯಬೇಕುʼ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ.ಮನೋಜಕುಮಾರ ಮಾತನಾಡಿ, ʼವಿದ್ಯಾರ್ಥಿಗಳು ಪ್ರಚಲಿತ ಆರ್ಥಿಕ ವಿದ್ಯಮಾನಗಳ ಬಗ್ಗೆ ತಿಳಿದುಕೊಳ್ಳಬೇಕು. ಅವಕಾಶಗಳನ್ನು ಸದುಪಯೋಗ ಪಡೆಸಿಕೊಳ್ಳಬೇಕುʼ ಎಂದು ಹೇಳಿದರು.

ʼಕಳೆದ 50 ವರ್ಷಗಳ ಅವಧಿಯಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ ಹಾಗೂ ತೃತೀಯ ರ್ಯಾಂಕ್ ಗಳಿಸಿದ ಗೌರವಕ್ಕೆ ಭಾಜನರಾಗಿದ್ದಾರೆ ಎಂದು ಡಾ.ಸುಚಿತಾನಂದ ಕೆ. ಮಲ್ಕಾಪುರೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಸೂಕ್ಷ್ಮ ಅರ್ಥಶಾಸ್ತ್ರ ವಿಷಯದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಪ್ರಥಮ ರ್ಯಾಂಕ್ನೊಂದಿಗೆ ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿನಿ ಸಂಗೀತಾ ಅವರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ : ಬೀದರ್ | ʼಮನರೇಗಾʼ ದುರ್ಬಲಗೊಳಿಸಲು ‘ವಿಬಿ-ಜಿ ರಾಮ್ ಜಿ’ ಮಸೂದೆ ಜಾರಿ : ಸಚಿವ ಈಶ್ವರ ಖಂಡ್ರೆ
ಕಾರ್ಯಕ್ರಮದಲ್ಲಿ ಡಾ. ಜೈಭಾರತ ಮಂಗೇಶ್ಕರ್, ಡಾ.ಸುನೀಲಕುಮಾರ ಮೂಲಗೆ, ಪ್ರೊ.ಅರುಣಕುಮಾರ ಮತ್ತಿತರರು ಇದ್ದರು. ಅಜಯ್ ಹಾಗೂ ಸೋನಿಕಾ ನಿರೂಪಿಸಿದರು. ಡಾ.ಸಂತೋಷಕುಮಾರ ಹಂಗರಗಿ ವಂದಿಸಿದರು.





