ಮತದಾನವು ಪ್ರಜಾಪ್ರಭುತ್ವದ ಪ್ರಮುಖ ಅಸ್ತ್ರ. ಪ್ರತಿಯೊಬ್ಬ ನಾಗರಿಕ ಮತದಾನ ಮಾಡುವ ಹಕ್ಕು ಹೊಂದಿದ್ದಾನೆ. ಜಾಗೃತ ಮತದಾರರೇ ಬಲಿಷ್ಠ ರಾಷ್ಟ್ರದ ಆಧಾರವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭಾರತೀಯ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ ರಾಷ್ಟ್ರೀಯ ಮತದಾರರ ದಿನ-2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಾತಿ, ಹಣ, ಧರ್ಮ, ಯಾವುದೇ ಆಮಿಷಕ್ಕೆ ಒಳಗಾಗದೆ ಯುವಕರು ನೈತಿಕವಾಗಿ ಮತದಾನ ಮಾಡಬೇಕು. ರಾಷ್ಟ್ರೀಯ ಮತದಾನದ ದಿನವನ್ನು ಪ್ರತಿ ವರ್ಷ ಒಂದೊಂದು ಧ್ಯೇಯವಾಕ್ಯದೊಂದಿಗೆ ದೇಶಾದ್ಯಂತ ಆಚರಿಸಲಾಗುತ್ತದೆ. ಈ ಬಾರಿ ʼನನ್ನ ಭಾರತ-ನನ್ನ ಮತʼ ಎಂಬ ಧ್ಯೇಯದೊಂದಿಗೆ ಆಚರಿಸಲಾಗುತ್ತಿದೆʼ ಎಂದು ತಿಳಿಸಿದರು.

ʼಮತದಾನವು ಹಕ್ಕಿನ ಜೊತೆಗೆ ಕರ್ತವ್ಯವೂ ಆಗಿದೆ. ಪ್ರತಿಯೊಬ್ಬರೂ ನಿರ್ಭಯವಾಗಿ ಮತ ಚಲಾಯಿಸಬೇಕು. ಯುವಕರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಜವಾಬ್ದಾರಿಯುತ ಮತದಾನದಿಂದ ದೇಶದ ಅಭಿವೃದ್ಧಿ ಸಾಧ್ಯ. 18 ವರ್ಷ ತುಂಬಿದ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕುʼ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಮಾತನಾಡಿ, ʼಭಾರತದಲ್ಲಿ ಬಲಿಷ್ಟವಾದ ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದರಿಂದಾಗಿ ನಮಗೆಲ್ಲ ಮಾತನಾಡುವ ಸ್ವಾತಂತ್ಯ ಹಕ್ಕು ಇದೆ. ಬಲಿಷ್ಠ ಪ್ರಜಾಪ್ರಭುತ್ವಕ್ಕೆ ನಾವೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲೇಬೇಕು. ಮತದಾನದ ಹಕ್ಕು ಸಂವಿಧಾನ ನಮಗೆ ನೀಡಿರುವ ಅತ್ಯಂತ ಶ್ರೇಷ್ಠ ಅಧಿಕಾರ. ಮತ ಮಾರಾಟದ ವಸ್ತುವಲ್ಲ, ಬದಲಾಗಿ ದೇಶದ ಭವಿಷ್ಯ ರೂಪಿಸುವ ಜವಾಬ್ದಾರಿಯಾಗಿದೆʼ ಎಂದು ಹೇಳಿದರು.
ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ್ ಬದೋಲೆ ಮಾತನಾಡಿ, ʼಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವುದು ನಮ್ಮ ಹಕ್ಕು, ಹೊಣೆ ಮತ್ತು ದೇಶದ ಶಕ್ತಿಯಾಗಿದೆ. ಮತದಾನ ಮಾಡಿದರೆ ನಮ್ಮ ಅಭಿಪ್ರಾಯ ಸರ್ಕಾರಕ್ಕೆ ತಲುಪುತ್ತದೆ. ಚುನಾವಣೆಯಲ್ಲಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಅವಕಾಶ ಸಿಗುತ್ತದೆ. ದೇಶದ ಭವಿಷ್ಯದ ಅಭಿವೃದ್ಧಿಗೆ ನಾವು ಸಹ ಪಾಲುಗಾರರಾಗುತ್ತೇವೆ. ಒಂದು ವರ್ಷದಲ್ಲಿ ನಾಲ್ಕು ಬಾರಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಮತದಾರರ ಪಟ್ಟಿಯಲ್ಲಿ 18 ವರ್ಷಗಳ ಮೇಲ್ಪಟ್ಟ ಯುವಕ-ಯುವತಿಯರು ನೋಂದಣಿ ಮಾಡಿಕೊಳ್ಳಬೇಕುʼ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಕರಾಳೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಮತ್ತು ಯಾವುದೇ ಪ್ರಭಾವಕ್ಕೆ ಒಳಗಾಗದೆ ಮತ ಚಲಾಯಿಸುತ್ತೇವೆ ಎಂದು ಎಲ್ಲರೂ ಪ್ರತಿಜ್ಞೆ ಸ್ವೀಕರಿಸಿದರು.

ಕಾರ್ಯಕ್ರಮಕ್ಕೂ ಮುಂಚಿತವಾಗಿ ವಿವಿಧ ಶಾಲಾ-ಕಾಲೇಜಿನ ಮಕ್ಕಳಿಂದ ಶಿವಾಜಿ ವೃತ್ತದಿಂದ ಪೂಜ್ಯ ಡಾ.ಚನ್ನಬಸವ ಪಟ್ಟದೇವರು ರಂಗ ಮಂದಿರದವರೆಗೆ ಜಾಥಾ ಕಾರ್ಯಕ್ರಮ ನಡೆಯಿತು.
2026ರ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ, ದ್ವೀತಿಯ ಹಾಗೂ ತೃತೀಯ ಬಹುಮಾನ ವಿತರಿಸಲಾಯಿತು.
ಇದನ್ನೂ ಓದಿ : ಕಮಲನಗರದಲ್ಲಿ ಸಂಚಾರಿ ನ್ಯಾಯಾಲಯ ಕಚೇರಿ ಉದ್ಘಾಟಿಸಿದ ಸಚಿವ ಈಶ್ವರ ಖಂಡ್ರೆ
ಬೀದರ ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ, ಬೀದರ ಸಹಾಯಕ ಆಯುಕ್ತ ಮೊಹ್ಮದ್ ಶಕೀಲ್, ಗೌತಮ್ ಅರಳಿ ಸೇರಿದಂತೆ ಇತರೆ ಅಧಿಕಾರಿಗಳು, ಜಿಲ್ಲೆಯ ನಾಗರಿಕರು ಹಾಗೂ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.





