ಬಡವರಿಗೆ, ಕೂಲಿ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್ ಅನುಕೂಲವಾಗಲಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು.
ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದ ಓಲ್ಡ್ ಸಿಟಿಯ ನೂರು ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ, ಉಪಹಾರ ಸೇವಿಸಿ ಮಾತನಾಡಿದರು.
ʼಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಆಶಯದಂತೆ ಹಾಗೂ ಯಾರು ಹಸುವಿನಿಂದ ಇರಬಾರದೆಂಬ ಕಾರಣಕ್ಕೆ ನಗರ ಪ್ರದೇಶದ ಜನರಿಗೆ ರಿಯಾಯಿತಿ ದರದಲ್ಲಿ ಆಹಾರ ನೀಡುವ ಉದ್ದೇಶದಿಂದ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದೆ. ನಗರದ ಓಲ್ಡ್ ಸಿಟಿಯ ಜನರಿಗೆ, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಬರುವ ಜನರಿಗೆ ಈ ಕ್ಯಾಂಟಿನ್ ಉಪಯುಕ್ತವಾಗಲಿದೆʼ ಎಂದರು.
‘ಬೀದರ ನಗರದಲ್ಲಿ 3 ಹೊಸ ಇಂದಿರಾ ಕ್ಯಾಂಟಿನ್ ಆರಂಭವಾಗಲಿವೆ. ನಗರದ ಸಮಸ್ಯೆಗಳನ್ನು ಗುರುತಿಸಿ, ಅದಕ್ಕೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕೈಗೊಳ್ಳಲಾಗುವುದು. ರಸ್ತೆ, ಚರಂಡಿ ದುರಸ್ತಿಗೆ ₹150 ಕೋಟಿ ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ನಗರೋತ್ಥಾನ ಯೋಜನೆಯಡಿ ₹50 ಕೋಟಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಬಿ-ಖಾತಾದ ಉಪಯೋಗ ಜನರು ಪಡೆದುಕೊಳ್ಳಬೇಕು’ ಎಂದರು.
ಇದನ್ನೂ ಓದಿ : ಬೀದರ್ | ದಲಿತ ಸಂಘರ್ಷ ಸಮಿತಿಯಿಂದ ʼಮನುಸ್ಮೃತಿ ದಹನ ದಿನʼ ಆಚರಣೆ
ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶಿವರಾಜ್ ರಾಥೋಡ್ ಸೇರಿದಂತೆ ನಗರಸಭೆಯ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.





