ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.6) 17ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ.
ಬಜೆಟ್ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಅದರಲ್ಲೂ ಬಿದರಿ ನಾಡು ಜಿಲ್ಲೆಯ ಜನ ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಭಾರೀ ನಿರೀಕ್ಷೆಗಳನ್ನು ಹೊಂದಿದ್ದರು. ನಿರೀಕ್ಷೆಯಂತೆ ಒಂದಷ್ಟು ಖುಷಿ ವಿಚಾರಗಳಿವೆ ಎನ್ನಬಹುದು.
ಬೀದರ್ ಜಿಲ್ಲೆಗೆ ಹೊಸದೇನಿದೆ:
ಬೀದರ್ ಜಿಲ್ಲೆಯ ಶರಣ ಭೂಮಿ ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು 25 ಎಕರೆ ಒದಗಿಸಲಾಗುವುದು ಎಂದು ಘೋಷಿಸಲಾಗಿದೆ.
ಹೊಸದಾಗಿ ಮೇಲ್ದರ್ಜೆಗೇರಿಸಲಾದ ಬೀದರ್ ಮಹಾನಗರ ಪಾಲಿಕೆಗಳಿಗೆ ಮಹಾತ್ಮಾಗಾಂಧಿ ನಗರ ವಿಕಾಸ್ ಯೋಜನೆ 2.0ರಡಿ 2026–27ನೇ ಸಾಲಿನಲ್ಲಿ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ತಿಳಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಹಾಗೂ ಬೀದರ್ ಒಳಗೊಂಡು ಒಟ್ಟು 11 ಜಿಲ್ಲೆಗಳಲ್ಲಿ ತಾರಾಲಯಗಳನ್ನು ಸ್ಥಾಪಿಸಲಾಗುತ್ತಿದ್ದು ಪ್ರಸ್ತುತ ಸಾಲಿನಲ್ಲಿ ಬೀದರ್ ಜಿಲ್ಲೆಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಹೊಸ ತಾರಾಲಯಗಳನ್ನು ಸ್ಥಾಪಿಸಲಾಗುತ್ತದೆ.
ಬಸವಕಲ್ಯಾಣ ಅಭಿವೃದ್ಧಿ ಮಂಡಳಿ (ಬಿಕೆಡಿಬಿ) ವತಿಯಿಂದ ನಿರ್ಮಿಸಲಾಗುತ್ತಿರುವ ‘ನೂತನ ಅನುಭವ ಮಂಟಪ’ ಕಾಮಗಾರಿಯು ಅಂತಿಮ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗರಿಷ್ಠ ಭದ್ರತಾ ಕೇಂದ್ರ ಕಾರಾಗೃಹ ಹಾಗೂ ವಿಜಯಪುರ ಮತ್ತು ಬೀದರ್ಗಳಲ್ಲಿ ತಲಾ 1,000 ಬಂದಿಗಳ ಸಾಮರ್ಥ್ಯದ ಜಿಲ್ಲಾ ಕೇಂದ್ರ ಕಾರಾಗೃಹಗಳನ್ನು ಒಟ್ಟಾರೆ 471 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುತ್ತದೆ ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಬೀದರ್ | ಧರಿನಾಡಿನ ಅಭಿವೃದ್ಧಿಗೆ ಏನೇನು ಬೇಕು? ಬಜೆಟ್ ನಿರೀಕ್ಷೆಗಳೇನು?





