ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರತಿಕಾಂತ ಸ್ವಾಮಿ ಹೇಳಿದರು.
ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಡಿಸೆಂಬರ್ 30ರಂದು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ʼಬೀದರ್ ಜಿಲ್ಲೆಯಲ್ಲಿ ಪ್ರತಿ ದಿನಕ್ಕೆ ಅಂದಾಜು 50 ರಿಂದ 70 ಯುನಿಟ್ಗಳಷ್ಟು ರಕ್ತದ ಬೇಡಿಕೆ ಇದೆ. ಆದರೆ, ಶೇ45ರಷ್ಟು ಮಾತ್ರ ರಕ್ತ ಪೂರೈಕೆಯಾಗುತ್ತಿದೆ. ಹೀಗಾಗಿ ತರ್ತು ಸಂದರ್ಭಗಳಲ್ಲಿ ಜನರ ಜೀವ ಉಳಿಸಲು ರಕ್ತದಾನಕ್ಕೆ ಮುಂದಾಗಬೇಕು. ಒಮ್ಮೆ ದಾನಿಗಳಿಂದ ಶೇಖರಿಸಿದ ರಕ್ತ 35 ದಿನಗಳವರೆಗೆ ಮಾತ್ರ ತನ್ನ ಶಕ್ತಿ ಉಳಿಸಿಕೊಂಡಿರುತ್ತದೆ. 35 ದಿನಗಳ ನಂತರ, ಅದು ಉಪಯೋಗಕ್ಕೆ ಬರುವುದಿಲ್ಲ. ಜನತೆ ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ನಿರಂತರವಾಗಿ ಅವಶ್ಯಕತೆ ಇರುವವರಿಗೆ ರಕ್ತ ನೀಡಿ ಜೀವ ಉಳಿಸಲು ಸಾಧ್ಯವಾಗುತ್ತದೆʼ ಎಂದು ತಿಳಿಸಿದರು.
ʼಜಗತ್ತಿನ ಅತಿ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬರಿಗೆ ಜೀವ ಉಳಿಸಲು ಉಪಯೋಗಿಸುವುದು. ಇದರಿಂದ ಹಲವಾರು ಜನರು ಸಾವಿನಿಂದ ಪಾರಾಗಿದ್ದಾರೆ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ನೀಡಬೇಕು. ರಕ್ತಕ್ಕೆ ವರ್ಷವಿಡೀ ನಿರಂತರವಾಗಿ ಬೇಡಿಕೆ ಇರುತ್ತದೆ. ಅಪಘಾತ, ತರ್ತು ಶಸ್ತ್ರಚಿಕಿತ್ಸೆ, ಕ್ಯಾನ್ಸರ್ ರೋಗಿ, ಗರ್ಭಿಣಿ ಸ್ತ್ರೀಯರು, ಹಿಮೋಫಿಲಿಯಾ ಮುಂತಾದ ರೋಗಿಗಳು ರಕ್ತದಾನಿಗಳನ್ನು ಅವಲಂಭಿಸಿರುತ್ತಾರೆʼ ಎಂದರು.

ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಅದು ಮಾನವನ ದಾನದಿಂದ ಮಾತ್ರ ಪಡೆಯಬಹುದು. ರಕ್ತದಾನ ಮಾಡುವುದು ಪ್ರತಿ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ ಎಂದು ಭಾವಿಸಿ, ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ರೋಗಗ್ರಸ್ಥರು, ಗಾಯಗೊಂಡವನ್ನು ಬದುಕಿಸಲು ಸಾಧ್ಯ. ರಕ್ತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ದಾನಿಯ ದೇಹದಲ್ಲಿ ರಕ್ತದ ಉತ್ಪತ್ತಿ ಪ್ರಾರಂಭವಾಗಿ 24 ಗಂಟೆ ಒಳಗಾಗಿ ದಾನಗೈದ ಪ್ರಮಾಣದ ರಕ್ತ ದೇಹದಲ್ಲಿ ಪುನರುತ್ಪತ್ತಿಯಾಗುತ್ತದೆ.
ಯಾರು ರಕ್ತದಾನ ಮಾಡಬಹುದು?
ಹೆಣ್ಣು ಗಂಡು ಎಂಬ ಭೇದವಿಲ್ಲದೆ 18 ರಿಂದ 60 ವರ್ಷದ ಒಳಗಿನ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಪುರುಷರು 3 ತಿಂಗಳಿಗೊಮ್ಮೆ ಮತ್ತು ಮಹಿಳೆಯರು 4 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ದಾನಿಯ ದೇಹದ ತೂಕ 45 ಕೆ.ಜಿ.ಗಿಂತ ಅಧಿಕವಾಗಿರಬೇಕು. ರಕ್ತದಲ್ಲಿ ಹಿಮೋಗ್ಲೋಜಿನ್ ಅಂಶ 125 ಗ್ರಾಂ.ಗಳಿಗಿಂತ ಹೆಚ್ಚಿರಬೇಕು. ಸಿಸ್ಟೋಲಿಕ್ ರಕ್ತದೊತ್ತಡವು 100 ರಿಂದ 140 ಇದ್ದು, ಡಯಸ್ಟೋಲಿಕ್ ಒತ್ತಡವು 70 ರಿಂದ 100 ಇರುವವರು ರಕ್ತದಾನ ಮಾಡಬಹುದು.
ರಕ್ತದಾನದಿಂದ ಪ್ರಯೋಜನೆ :
ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆ ಆಗುತ್ತದೆ. ದೇಹದಲ್ಲಿ ಹೊಸ ರಕ್ತ ಚಾಲನೆಯಿಂದ ಕಾರ್ಯ ತತ್ವರತೆ, ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ. ರಕ್ತದಲ್ಲಿ ಕೊಬ್ಬಿನಾಂಶ ಕಡಿಮೆ ಮಾಡಲು ಸಹಕಾರಿಯಾಗುತ್ತದೆ. ಹೃದಯಾಘಾತವನ್ನು ಶೇ 80ಕ್ಕಿಂತಲು ಜಾಸ್ತಿ ತಡೆಯಲು ಸಹಾಯಕವಾಗುತ್ತದೆ. ರಕ್ತದ ಒತ್ತಡ ಇತರೆ ಕೆಲವು ರೋಗಗಳನ್ನು ತಡೆಗಟ್ಟಲು ಸಹಾಯವಾಗುತ್ತದೆ.
ಇದನ್ನೂ ಓದಿ : ಬೀದರ್ | ಗಡಿ ತಾಲೂಕಿನಲ್ಲಿ ಸಂಭ್ರಮದ ʼನುಡಿ ಜಾತ್ರೆʼ ನಡೆಸಲು ತೀರ್ಮಾನ: ಹೇಗಿದೆ ತಯ್ಯಾರಿ?
ರಕ್ತದಾನ ಮಾಡಲು ಬಯಸುವವರು ರಕ್ತದಾನ ಶಿಬಿರದ ಆಯೋಜಕರಾದ ಡಾ.ರತಿಕಾಂತ ಸ್ವಾಮಿ-9448469744, ಡಾ.ಸಿದ್ದರಡ್ಡಿ-9663859062 ಅವರನ್ನು ಸಂಪರ್ಕಿಸಿ, ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿ, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತೆ ಕೋರಿದ್ದಾರೆ.





