ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಸರಕಾರಿ ಶಾಲಾ ಶಿಕ್ಷಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಹಾಲಹಿಪ್ಪರಗಾ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ.
ಭಾಲ್ಕಿ ತಾಲೂಕಿನ ಭಾತಾಂಬ್ರಾ ಗ್ರಾಮದ ನಿವಾಸಿ ಕಾಶಿನಾಥ ಪಾಂಚಾಳ ಮೃತ ಶಿಕ್ಷಕ ಎಂದು ಗುರುತಿಸಲಾಗಿದೆ. ಮೇತಿ ಮೆಳಕುಂದಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಭಾನುವಾರ ರಜೆಯ ಕಾರಣದಿಂದ ಬೀದರ್ಗೆ ತೆರಳಿ ವಾಪಸ್ ಊರಿಗೆ ಬರುವಾಗ ಭಾಲ್ಕಿ-ಬೀದರ್ ಹೆದ್ದಾರಿಯ ಹಾಲಹಿಪ್ಪರಗಾ ಕ್ರಾಸ್ ಬಳಿ ಅಪಘಾತ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಧನ್ನೂರಾ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





