ಮೈಸೂರಿನಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಯಾವುದೇ ಹೊಸ ಭರವಸೆ ಹುಟ್ಟು ಹಾಕದ ಬಜೆಟ್ ಎಂದು ಲೇವಡಿ ಮಾಡಿದರು.
ದೂರ ದೃಷ್ಟಿಯಿರದ ಕೇಂದ್ರ ಸರ್ಕಾರ ಬಜೆಟ್ ಮಂಡಿಸುವಲ್ಲಿ ಹೊಸತನವಿರದೆ ರೈತರನ್ನು ಕಡೆಗಣಿಸಿದೆ. 9ನೇ ಬಾರಿಗೆ ದೇಶದ ಬಜೆಟ್ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೊಂದು ಠುಸ್ ಪಟಾಕಿ ಹಾರಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
2026-27ನೇ ಸಾಲಿನ ಬಜೆಟ್ ದೇಶದ ಅಭಿವೃದ್ಧಿಗೆ ಪೂರಕವಾಗಿಲ್ಲ. ಈ ಸಾಲಿನ ಬಜೆಟ್ ನಲ್ಲೂ ಕೃಷಿಯನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡಲಾಗಿದೆ. ಕಳೆದ ಸಾಲಿನ ಬಜೆಟ್ ನಲ್ಲಿ ಕೃಷಿಗೆ ₹1.70 ಲಕ್ಷ ಕೋಟಿ ನೀಡಲಾಗಿತ್ತು. ಆದರೆ, ಈ ಸಾಲಿನಲ್ಲಿ ಕೇವಲ ₹1.62 ಲಕ್ಷ ಕೋಟಿಗೆ ಇಳಿಸಿ ಕೃಷಿ ಕ್ಷೇತ್ರಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಕಿಡಿಕಾರಿದರು.
ಕಬ್ಬು ಬೆಳಗಾರರ ನಿರೀಕ್ಷೆ ಹುಸಿಯಾಗಿದೆ. ಗ್ರಾಮೀಣ ಮೂಲಭೂತ ಸೌಕರ್ಯಗಳಿಗೂ ಒತ್ತು ನೀಡದೆ, ಬಜೆಟ್ ನಲ್ಲಿ ಗ್ರಾಮೀಣ ಅಭಿವೃದ್ಧಿಗೆ ಯಾವುದೇ ಕಾರ್ಯಕ್ರಮಗಳೇ ಇಲ್ಲದಾಗಿದೆ. ರೈತರ ಹಿತ ಕಾಯುವಲ್ಲಿ ಕೇಂದ್ರ ಸರ್ಕಾರ ಮತ್ತೊಮ್ಮೆ ವಿಫಲವಾಗಿದ್ದು, ರೈತ ವಿರೋಧಿ ಸರ್ಕಾರ ಎನ್ನುವುದನ್ನು ಸಾಬೀತು ಮಾಡಿಕೊಂಡಿದೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಮನರೇಗಾ ಹೆಸರು ಬದಲಾವಣೆ; ಕೇಂದ್ರದ ವಿರುದ್ಧ ಅಹೋರಾತ್ರಿ ಧರಣಿ
ಎನ್.ಡಿ.ಎ ಅಂಗ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಹೆಚ್ಚು ಅನುದಾನ ನೀಡಿರುವ ಮೋದಿ, ಬಜೆಟ್ ನಲ್ಲಿ ಎಂದಿನಂತೆ ರಾಜ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ. ಅದಷ್ಟೇ ಅಲ್ಲದೇ, ದಕ್ಷಿಣ ಭಾರತವನ್ನು ಮರೆತಿದ್ದಾರೆ. ಈ ಬಜೆಟ್ ದೇಶದ ಸಾಲದ ಹೊರೆಯನ್ನು ಹೆಚ್ಚಿಸಿದೆ ಎಂದು ವಿಶ್ಲೇಸಿಸಿದರು.





