ವಿಧಾನ ಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸಹಿತ ಆರು ಮಂದಿಗೆ 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲು ಬೆಂಗಳೂರಿನ ಎಸಿಎಂಎಂ ಕೋರ್ಟ್ ಆದೇಶಿಸಿದೆ.
ಹಿಂದುತ್ವದ ಕುರಿತು ಉಗ್ರ ಭಾಷಣದ ಮೂಲಕ ಸಾಮಾಜಿಕ ಸಾಮರಸ್ಯ ಹಾಳು ಮಾಡುತ್ತಿದ್ದ ಚೈತ್ರಾ ಉದ್ಯಮಿಯೊಬ್ಬರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದರು. ಇಬ್ಬರು ಆರೋಪಿಗಳನ್ನು ಸೆ.23ರವರೆಗೂ ಸಿಸಿಬಿ ಕಸ್ಟಡಿಗೆ ನೀಡಲು ಕೋರ್ಟ್ ಆದೇಶ ನೀಡಿದೆ.
ಪೊಲೀಸರು ಕಳೆದ ರಾತ್ರಿ ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮಿಂಚಿನ ಕಾರ್ಯಾಚರಣೆಯಲ್ಲಿ ಚೈತ್ರಾ ಅವರನ್ನು ಬಂಧಿಸಿದ್ದರು. ಅಲ್ಲದೇ ಈಕೆಯ ಗೆಳೆಯ ಶ್ರೀಕಾಂತ್ ನಾಯಕ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಚೈತ್ರಾ ಕುಂದಾಪುರ ಪ್ರಕರಣ | ನಾನು ಆಶ್ರಯ ನೀಡಿಲ್ಲ, ನೋಟಿಸ್ ಬಂದಿಲ್ಲ: ಕಾಂಗ್ರೆಸ್ನ ಸುರಯ್ಯಾ ಅಂಜುಮ್
ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ 2023 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಚೈತ್ರಾ 5 ಕೋಟಿ ರೂ. ವಂಚಿಸಿದ್ದರು.
ಚೆಫ್ ಟಾಕ್ ಸಂಸ್ಥೆ ಮುಖ್ಯಸ್ಥನಾಗಿರುವ ಗೋವಿಂದ ಬಾಬು ಪೂಜಾರಿ ಬೈಂದೂರು ವಿಧಾನಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಟಿಕೆಟ್ ಸಿಗದೆ ವಂಚನೆಗೆ ಒಳಗಾದ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲಿಸಿದ್ದರು.





