ಚಾಮರಾಜನಗರದ ಪೇಟೆ ಪ್ರಾಥಮಿಕ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ರವರ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಸದ ಸುನಿಲ್ ಬೋಸ್ ‘ ದೇಶಕ್ಕೆ ಡಾ. ಬಾಬು ಜಗಜೀವನ ರಾಮ್ ಅವರ ಕೊಡುಗೆ ಅಪಾರ ‘ ಎಂದರು.
” ಹಸಿರುಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರು ಸುದೀರ್ಘ ಕಾಲ ಕೇಂದ್ರ ಸಚಿವರಾಗಿ ವಿವಿಧ ಖಾತೆಗಳನ್ನ ನಿರ್ವಹಣೆ ಮಾಡಿ ದೇಶಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಕಾರ್ಮಿಕ ಸಚಿವರಾಗಿದ್ದ ಸಂದರ್ಭದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಅಲ್ಲದೆ ಎಲ್ಲ ಕಾರ್ಮಿಕರಿಗು ಅನುಕೂಲವಾಗುವ ಸುಧಾರಣೆಗಳನ್ನು ಜಾರಿಗೆ ತಂದರು. ಕಾರ್ಮಿಕರಿಗೆ ವಿಮಾ ಸೌಲಭ್ಯವನ್ನು ಕಲ್ಪಿಸಿದ ಹೆಗ್ಗಳಿಕೆ ಸಲ್ಲುತ್ತದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗಾಗಿ ಆಯೋಗವನ್ನು ನೇಮಕ ಮಾಡಿದರು. ವಿಮಾನಯಾನ ಸಚಿವರಾಗಿದ್ದ ಅವಧಿಯಲ್ಲಿ ಖಾಸಗೀಕರಣಗೊಂಡಿದ್ದ ವಿಮಾನ ಸೇವೆ ರಾಷ್ಟ್ರೀಕರಣ ಗೊಳಿಸಿ, ಬ್ಯಾಂಕುಗಳ ರಾಷ್ಟ್ರೀಕರಣಕ್ಕೆ ಇಂದಿರಾ ಗಾಂಧಿಯವರಿಗೆ ಸಲಹೆ ನೀಡಿದ್ದರು. ರಕ್ಷಣಾ ಸಚಿವರಾಗಿದ್ದ ಸಂದರ್ಭದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು ” ಎಂದು ಹೇಳಿದರು.

ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕರಾದ ಸಿ. ಪುಟ್ಟರಂಗ ಶೆಟ್ಟಿ ಮಾತನಾಡಿ ” ಬಾಬು ಜಗಜೀವನ ರಾಮ್ ಅವರು ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಕಾರ್ಮಿಕರ ಹಿತರಕ್ಷಣೆಗಾಗಿ ಉತ್ತಮ ಯೋಜನೆಗಳನ್ನು ಜಾರಿಗೆ ತಂದರು. ಹಲವಾರು ಖಾತೆಗಳನ್ನು ಕೇಂದ್ರದಲ್ಲಿ ನಿರ್ವಹಿಸಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರ ಆದರ್ಶ, ಕೊಡುಗೆಗಳು ನಮಗೆ ಮಾರ್ಗದರ್ಶನವಾಗಿದೆ. ಅವರ ಕರ್ತವ್ಯ ನಡೆ,ನುಡಿಯನ್ನು ಎಲ್ಲರು ಅನುಸರಿಸಬೇಕಿದೆ. ಅವರು ಹಾಕಿಕೊಟ್ಟ ದಾರಿಯಲ್ಲಿ ಮುನ್ನಡೆಯಬೇಕಿದೆ. ಎಂತಹುದೇ ಕಷ್ಟ ಕಾಲದಲ್ಲೂ ಅವರು ನಂಬಿದ್ದ ಆದರ್ಶಗಳನ್ನು ಬಿಟ್ಟುಕೊಡಲಿಲ್ಲ. ಇದು ನಮ್ಮೆಲ್ಲರಿಗೆ ಮಾದರಿಯಾಗಬೇಕಿದೆ ” ಎಂದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ” ಸ್ವಾತಂತ್ರ್ಯ ಹೋರಾಟಗಾರರು ಆಗಿದ್ದ ಬಾಬು ಜಗಜೀವನ ರಾಮ್ ಅವರು ರಕ್ಷಣಾ ಸಚಿವರು ಹಾಗೂ ಕೃಷಿ ಸಚಿವರಾಗಿದ್ದ ಅವಧಿಯಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಕೃಷಿಯಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿಸಿದಲ್ಲದೇ, ಹಲವು ವಿನೂತನ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದು ಹಸಿರುಕ್ರಾಂತಿಯ ಹರಿಕಾರರೆಂದೇ ಕರೆಯಲ್ಪಟ್ಟರು ” ಎಂದರು.

ಭೋಗಾಪುರ ಸರ್ಕಾರಿ ಪ್ರಥಮ ದರ್ಜೆ ವಸತಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ. ದೇವರಾಜು ಮಾತನಾಡಿ ” ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದ ಬಾಬು ಜಗಜೀವನ್ ರಾಮ್ ಅವರು ಶೋಷಿತ ವರ್ಗಗಳ ಏಳಿಗೆಗಾಗಿ ಅಪಾರವಾಗಿ ಶ್ರಮಿಸಿದ್ದಾರೆ. 27ನೇ ವಯಸ್ಸಿಗೆ ಸಂಸದರಾಗಿದ್ದ ಬಾಬೂಜಿ ಸುಧೀರ್ಘ ಕಾಲ ರಾಜಕೀಯ ಅಧಿಕಾರ ಅನುಭವಿಸಿದ್ದರು. ರೈಲ್ವೆ, ಸಂಪರ್ಕ ಸಚಿವರಾಗಿದ್ದ ವೇಳೆ ಹೊಸ ಸಾಧನಾ ವ್ಯವಸ್ಥೆಗಳನ್ನು ಅಂದೇ ಪರಿಚಯಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದರು. ಬಾಬೂಜಿ ಅವರ ಜನ್ಮ ದಿನವನ್ನು ‘ ಸಮಾನತೆಯ ದಿನ ‘ವನ್ನಾಗಿಯೂ ಆಚರಿಸಲಾಗುತ್ತಿದೆ ” ಎಂದರು.
ಈ ಸುದ್ದಿ ಓದಿದ್ದೀರಾ? ಕೊಡಗು | ಪ್ರವಾಸೋಧ್ಯಮ ಇಲಾಖೆ ಯೋಜನೆಗಳ ಜಾರಿಗೆ ಕ್ರಮ : ಅನಿತಾ ಭಾಸ್ಕರ್
ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು,ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್, ನಗರಸಭಾ ಸದಸ್ಯರಾದ ನಾಗರಾಜು, ಸ್ವಾಮಿ, ಚೂಡಾ ಸದಸ್ಯ ಪುಟ್ಟಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೆಶಕ ಎನ್. ಮುನಿರಾಜು, ತಹಶೀಲ್ದಾರ್ ಗಿರಿಜಾ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕಿರಣ್ ಪಡ್ನೇಕರ್, ನಗರಸಭಾ ಆಯುಕ್ತ ಎಸ್.ವಿ. ರಾಮದಾಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.





