ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ದಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಸುನೀಲ್ ಬೋಸ್, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದಿಂದ ನಿರ್ವಹಿಸಬೇಕು. ಅಪಘಾತಗಳಿಗೆ ಅವಕಾಶವಾಗದಂತೆ ಸಮರ್ಪಕವಾಗಿ ಎಲ್ಲಾ ಮುಂಜಾಗ್ರತಾ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಕಾಮಗಾರಿಗಳು ಕಳಪೆ ಎಂಬ ದೂರುಗಳು ಬರುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾಮಗಾರಿಗಳು ನಿರ್ವಹಣೆಯಾಗಬೇಕು. ರಸ್ತೆ ಸುರಕ್ಷತಾ ಕ್ರಮಗಳಿಗೆ ಆದ್ಯತೆ ನೀಡಬೇಕು. ಈ ಹಿಂದಿನ ಸಭೆಯಲ್ಲೂ ಹೆದ್ದಾರಿ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಕೈಗೊಂಡು ವಿದ್ಯುತ್ ದೀಪ ಅಳವಡಿಕೆ, ಗುಂಡಿ ಮುಚ್ಚುವುದು, ಎಲ್ಲಿ ಅಪಘಾತಕ್ಕೆ ಸಂಭವಿಸುತ್ತಿದ್ದೆಯೋ ಅಂತಹ ಸ್ಥಳಗಳಲ್ಲಿ ತುರ್ತಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕೆಲಸ ಕೈಗೊಳ್ಳಲು ಸೂಚಿಸಲಾಗಿತ್ತು. ನಾನೂ ಸಹ ಖುದ್ದಾಗಿ ಹಲವೆಡೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಆದರೆ, ಇನ್ನೂ ಸಹ ಜವಾಬ್ದಾರಿಯುತವಾಗಿ ಅಧಿಕಾರಿಗಳು ಕಾಮಗಾರಿ ನಿರ್ವಹಿಸಿಲ್ಲ. ಇನ್ನು ಮುಂದೆ ಇಂತಹ ಧೋರಣೆ ಸಹಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.
“ಗುಂಡ್ಲುಪೇಟೆ-ನಂಜನಗೂಡು ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗಿವೆ. ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಸೈನ್ ಬೋರ್ಡ್ ಮತ್ತು ಮಿರರ್ ನಂತಹ ಸುಗಮ ಸಂಚಾರಕ್ಕೆ ಮಾರ್ಗದರ್ಶನ ಮಾಡುವ ಫಲಕಗಳನ್ನು ಅಳವಡಿಸಬೇಕು. ಕಳೆದ ಎರಡು ಮೂರು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಹಾನಿ ಸಂಬಂಧ ಅಧಿಕಾರಿಗಳಿಂದ ವಿವರ ಪಡೆದು, ಕ್ಷೇತ್ರಗಳಿಗೆ ಭೇಟಿ ನೀಡಿ ಬೆಳೆ ನಷ್ಟ ಸಂಬಂಧ ವರದಿ ನೀಡಬೇಕು. ಅರಣ್ಯ ವಾಸಿಗಳಿಗೆ ಮನೆಗಳನ್ನು ಒದಗಿಸುವ ಪ್ರಕ್ರಿಯೆ ಜರೂರಾಗಿ ನಡೆಯಬೇಕು. ಎಲ್ಲ ವಿಧಾನಸಭಾ ಕ್ಷೇತ್ರಗಳಿಗು ಅಗತ್ಯಕ್ಕನುಗುಣವಾಗಿ ಸಮಾನವಾಗಿ ಮನೆಗಳ ಹಂಚಿಕೆಯಾಗಬೇಕು” ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, “ನಗರ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಯಲ್ಲಿ ಅಪಘಾತ ಸಂಭವಿಸುತ್ತಿವೆ. ಹೀಗಾಗಿ, ಬೈಪಾಸ್ಗಳನ್ನು ನಿರ್ಮಾಣ ಮಾಡುವಂತೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ತಿಳಿಸಲಾಗಿತ್ತು. ಆದರೂ ಸಹ ಇನ್ನೂ ಕ್ರಮ ಕೈಗೊಂಡಿಲ್ಲ. ಎಲ್ಲೆಲ್ಲಿ ಅಗತ್ಯವಿದೆಯೋ ಅಂತಹ ಕಡೆ ತುರ್ತಾಗಿ ಕಾಮಗಾರಿ ಕೈಗೊಂಡು, ಇನ್ನೂ ಸಂಭವಿಸಬಹುದಾದ ಅಪಘಾತಗಳನ್ನು ತಡೆಯಬೇಕು” ಎಂದು ಹೇಳಿದರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಬಹುತೇಕವಾಗಿ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಲಾಗಿಲ್ಲ. ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಯಲ್ಲಿ ಬೀದಿ ದೀಪಗಳು ಇಲ್ಲ. ಚರಂಡಿ ವ್ಯವಸ್ಥೆಯನ್ನು ಮಾಡಲಾಗಿಲ್ಲ. ಅಗರೆ, ಮಾಂಬಳ್ಳಿ ಇನ್ನಿತರ ಕಡೆ ಗುಣಮಟ್ಟದ ಕಾಮಗಾರಿ ಆಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವಿಶೇಷಚೇತನರಿಗೆ ಸಾಧನ-ಸಲಕರಣೆಗಳ ವಿತರಣೆ
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಸಭೆಯಲ್ಲಿ ಉಪಸ್ಥಿತರಿದ್ದರು.





