ತನ್ನ ತಂದೆ-ತಾಯಿ ಕೃಷಿ ಮಾಡಲು ನೀರಿಲ್ಲದೆ ಪರದಾಡುತ್ತಿರುವುದನ್ನು ಕಂಡ 5ನೇ ತರಗತಿಯ ಬಾಲಕಿಯೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ನಡೆದಿದೆ. ಬಾಲಕಿ ಪತ್ರ ಬರೆಯುತ್ತಿದ್ದಂತೆಯೇ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದಾರೆ. ಸಮಸ್ಯೆ ಪರಿಹರಿಸಲು ಕ್ರಮ ತಗೆದುಕೊಳ್ಳುತ್ತಿದ್ದಾರೆ.
ಕೆಂಪಯ್ಯನಹಟ್ಟಿ ಗ್ರಾಮದ ವಿದ್ಯಾರ್ಥಿನಿ ವರ್ಣಿಕಾ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. “ಗ್ರಾಮದಲ್ಲಿ ಮಳೆ ಕೊರತೆಯಿಂದಾಗಿ ಇತ್ತೀಚಿನ ದಿನಗಳಲ್ಲಿ ಅಂತರ್ಜಲ ಕುಸಿದಿದೆ. ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ನೀರಿಲ್ಲದೆ ಕೃಷಿ ಚಟುವಟಿಕೆಗಳು ನಿಂತುಹೋಗಿವೆ. ಬೇಸಾಯ ಮಾಡುತ್ತಿದ್ದ ರೈತರು, ಕೃಷಿ ಮಾಡಲಾಗದೆ, ಉದ್ಯೋಗಕ್ಕಾಗಿ ವಲಸೆ ಹೋಗುತ್ತಿದ್ದಾರೆ. ದೂರದ ಊರುಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಈ ಸ್ಥಿತಿಯು ನಮ್ಮನ್ನು ತೀವ್ರವಾಗಿ ಕಾಡುತ್ತಿದೆ” ಎಂದು ಬಾಲಕಿ ಹೇಳಿಕೊಂಡಿದ್ದಾರೆ.
“ನಮ್ಮ ಸಮಸ್ಯೆ ಬಗೆಹರಿಯಬೇಕಾದರೆ, ಹನೂರು ತಾಲೂಕಿನ ರಾಮಾಪುರ ಹೋಬಳಿಯ ಎಲ್ಲ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು. ಯೋಜನೆಯನ್ನು ರೂಪಿಸಬೇಕು. ಕೆರೆಗಳಿಗೆ ನೀರು ತುಂಬಿಸಿ, ಭೂಮಿಯ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ, ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು” ಎಂದು ಬಾಲಕಿ ಮನವಿ ಮಾಡಿದ್ದಾರೆ.
ಬಾಲಕಿ ಪತ್ರ ಬರೆದಿರುವುದು ತಿಳಿದ ಬೆನ್ನಲ್ಲೇ, ಚಾಮರಾಜನಗರ ಜಿಲ್ಲಾ ಪಂಚಾಯತಿ ಸಿಇಒ ಮೋನಾರೋತ್ ಮತ್ತು ಗ್ರಾಮ ಪಂಚಾಯತಿ ಪಿಡಿಒ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಜನರ ಸಮಸ್ಯೆ ಆಲಿಸಿದ ಸಿಇಒ ಮೋನಾರೋತ್, “ಕುಡಿಯುವ ನೀರು ಪೂರೈಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ. ನದಿಯಿಂದ ನೀರು ತುಂಬಿಸುವ ಬಗ್ಗೆ ಸರ್ಕಾರದ ಜೊತೆಗೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.




