ಇತ್ತೀಚೆಗೆ ಮಲೈ ಮಹದೆಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ಸಂಭವಿಸಿದ ಹುಲಿಗಳ ಅಸಹಜ ಸಾವು ಹಾಗೂ ಗುಂಡ್ಲುಪೇಟೆ ವಲಯದ ಕಂದೇಗಾಲ ಭಾಗದಲ್ಲಿ ಕೋತಿಗಳ ಮರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆ, ಹನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿಗಳು, ಅರಣ್ಯ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಹಾಗೂ ಪಶುಸಂಗೋಪನೆ, ರೇಷ್ಮೆ ಸಚಿವ ಕೆ. ವೆಂಕಟೇಶ್ ಸಭೆ ನಡೆಸಿ ವನ್ಯಜೀವಿ, ಜಾನುವಾರುಗಳ ಹತ್ಯೆ ತಡೆಗೆ ಮುಂಜಾಗೃತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಹುಲಿಗಳ ಸಾವಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಕೇಂದ್ರ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳ ತನಿಖಾ ತಂಡದ ಬಗ್ಗೆ ಪೂರ್ಣ ಮಾಹಿತಿ ಪಡೆದುಕೊಂಡು, ತನಿಖೆಯು ಯಾವ ಹಂತದಲ್ಲಿದೆ ಎಂಬ ಬಗ್ಗೆಯು ಅರಣ್ಯ ಅಧಿಕಾರಿಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ವಿವರ ಪಡೆದರು.
ಅರಣ್ಯದಂಚಿನ ಗ್ರಾಮಗಳಲ್ಲಿ ಜಾನುವಾರುಗಳ ಸಂರಕ್ಷಣೆಗೆ ಅರಣ್ಯ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ವನ್ಯಜೀವಿಗಳು ಆಹಾರ ಅರಸಿ ಗ್ರಾಮಗಳಿಗೆ ಬರದಂತೆ ಅರಣ್ಯದಲ್ಲೇ ಸೂಕ್ತ ಆಹಾರ, ನೀರು ಒದಗಿಸುವ ಕಾರ್ಯವನ್ನು ತುರ್ತಾಗಿ ಮಾಡಬೇಕು. ಜಾನುವಾರುಗಳಿಗೆ ಕಾಡು ಸಮೀಪದ ಗ್ರಾಮಗಳಲ್ಲೇ ನರೇಗಾ ಯೋಜನೆಯಡಿ ಮೇವು ಬೆಳೆಸಿ, ಕೆರೆಗಳನ್ನು ನಿರ್ಮಿಸಿ ಅನುಕೂಲ ಮಾಡಿಕೊಡಬೇಕು. ಸ್ಥಳೀಯ ಭಾಗದ ಜಾನುವಾರುಗಳಿಗೆ ಮೇವು ನೀರು ಕೊರತೆಯಾಗಬಾರದು ಎಂದು ನಿರ್ದೇಶನ ನೀಡಿದರು.
ಅರಣ್ಯ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಿಸಬೇಕು. ರಾತ್ರಿಯ ವೇಳೆಯಲ್ಲೂ ವಿಶೇಷ ಗಸ್ತು ವ್ಯವಸ್ಥೆ ಇರಬೇಕು. ವಾಚರ್ ಗಳು ಇನ್ನಿತರ ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಿ, ಅರಣ್ಯ ಅಧಿಕಾರಿಗಳು ಮೇಲುಸ್ತುವಾರಿ ಮಾಡಿದರೆ ಪ್ರಾಣಿಗಳ ಉಪಟಳ ತಪ್ಪಿಸಬಹುದಾಗಿದೆ. ವನ್ಯಜೀವಿಗಳು ಜಾನುವಾರು ಮೇಲೆ ದಾಳಿ ಮಾಡಿದಾಗ ರೈತರನ್ನು, ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಂತ್ವನ ಹೇಳಬೇಕು. ಜಾನುವಾರುಗಳ ರಕ್ಷಣೆಗೆ ಶೀಘ್ರ ಸ್ಪಂದಿಸಿ ಮಾಹಿತಿ ತಿಳಿವಳಿಕೆ ನೀಡಬೇಕಿದೆ ಎಂದರು.

ಮಲೈ ಮಹದೇಶ್ವರ ವನ್ಯಜೀವಿ ವಿಭಾಗದ ಹೊರಗುತ್ತಿಗೆ ವಾಚರ್ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿಸುವುದು ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳ ಮುಖ್ಯ ಜವಾಬ್ದಾರಿಯಾಗಿದೆ. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸದೆ ಉನ್ನತ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಬೇಕು. ಅರಣ್ಯ ಇಲಾಖೆ ವಿಶೇಷವಾಗಿ ಕಾಡಂಚಿನ ಭಾಗಗಳ ಪ್ರಾಣಿಗಳು, ಜನ ಜಾನುವಾರುಗಳಿಗೆ ಸೂಕ್ತ ರಕ್ಷಣೆ, ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಅಗತ್ಯವಿರುವ ಅನುದಾನದ ನೆರವು ಮಂಜೂರು ಮಾಡಿಸಲು ಕ್ರಮ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.
ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು | ಉತ್ತಮ ಆರೋಗ್ಯಕ್ಕೆ ಉಳಿದಿರುವ ದಾರಿ ಒಂದೇ; ಅದುವೇ ರಾಸಾಯನಿಕ ಮುಕ್ತ ಕೃಷಿ
ಶಾಸಕ ಎಂ.ಆರ್. ಮಂಜುನಾಥ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಮಾಜಿ ಶಾಸಕ ಆರ್. ನರೇಂದ್ರ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೆಚ್ಚುವರಿ ಪ್ರಭಾರದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೊಷ್ ಕುಮಾರ್, ಬಂಡೀಪುರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ್, ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಂದ್ರ, ಹನೂರು ವಲಯದ ಪ್ರೊಬೆಷನರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಮಾಪತಿ, ಹೆಚ್ಚುವರಿ ಪ್ರಭಾರದಲ್ಲಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್, ತಹಶೀಲ್ದಾರ್ ಗುರುಪ್ರಸಾದ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.





