ನಾಲ್ಕು ಎಕರೆ ಜಮೀನಿನಲ್ಲಿ 8 ಕೋಟಿ ರೂಪಾಯಿ ವೆಚ್ಚದಲ್ಲಿ ಚನ್ನಗಿರಿ ತಾಲೂಕು ಬಸ್ ಘಟಕ ನಿರ್ಮಾಣ ಮಾಡಲಾಗಿದ್ದು, ಈಗಾಗಲೇ ಸಿಬ್ಬಂದಿ ಮತ್ತು ಬಸ್ಗಳನ್ನು ನಿಯೋಜಿಸಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ದಾವಣಗೆರೆ ವ್ಯಾಪ್ತಿಯ ಚನ್ನಗಿರಿ(ಅಜ್ಜಿಹಳ್ಳಿ) ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬಸ್ ಘಟಕವನ್ನು ಉದ್ಘಾಟನೆ ಮಾಡಿ, ಹೊಳಲ್ಕೆರೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದರು.
ಚನ್ನಗಿರಿಯಲ್ಲಿ ಬಸ್ ಘಟಕ ಆರಂಭದಿಂದ ಜನರ ಬೇಡಿಕೆ ಈಡೇರಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ತಿಳಿಸಿದರು.
ಶಾಸಕ ಬಸವರಾಜ ವಿ ಶಿವಗಂಗಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಬಸ್ ಘಟಕ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ಇತ್ತು, ಅದನ್ನು ಬಗೆಹರಿಸಲಾಗಿದೆ. ಹೊಸ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವರಲ್ಲಿ ಬೇಡಿಕೆ ಇಟ್ಟು, ಎರಡು ಎಕರೆ ನಿವೇಶನ ಗುರುತಿಸಲಾಗಿದೆ” ಎಂದು ತಿಳಿಸಿದರು. ಇದೇ ವೇಳೆ ಶಾಸಕರು, ಸಾರಿಗೆ ಸಚಿವರು ಶೀಘ್ರದಲ್ಲಿಯೇ ಅನುಮತಿ ನೀಡುವುದಾಗಿ ತಿಳಿಸಿದರು.
ಅದೇ ರೀತಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಎಸ್ ಬಸವಂತಪ್ಪನವರೂ ಕೂಡ ಬಸ್ ನಿಲ್ದಾಣಕ್ಕೆ ಬೇಡಿಕೆ ಇಟ್ಟರು. ಜಾಗ ಒದಗಿಸಿದ್ದಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಸಾರಿಗೆ ಸಚಿವರು ಒಪ್ಪಿಗೆ ಸೂಚಿಸಿದರು.
ಇದೇ ಸಂಧರ್ಭದಲ್ಲಿ ಹೊಳಲ್ಕೆರೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ, ತರಬೇತಿ ಕೇಂದ್ರವನ್ನು ಸರ್ಕಾರದ ಕೌಶಲ್ಯಾಭಿವೃದ್ಧಿ ಇಲಾಖೆಯೊಡನೆ ಮಾತುಕತೆ ನಡೆಸಿ ಮತ್ತಷ್ಟು ಸಾರ್ವಜನಿಕರಿಗೆ ಸದುಪಯೋಗವಾಗುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸಭೆ ನಡೆಸುವ ಬಗ್ಗೆ ಮಾತುತೆ ನಡೆಸಲು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಕುಮಟಾ | ಸಿನಿಮೀಯ ರೀತಿ ದರೋಡೆ ಯತ್ನ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಜೀವ ವೈವಿಧ್ಯ ನಿಗಮ ಮಂಡಳಿ ಅಧ್ಯಕ್ಷ ಶ್ರೀವಡ್ನಾಳ್ ಜಗದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್, ಅಜ್ಜಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಗೋವಿಂದರಾಜ್, ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಶ, ಜಿಲ್ಲಾಧಿಕಾರಿ ಜಿ ಎಂ ಗಂಗಾಧರ ಸ್ವಾಮಿ ಸೇರಿದಂತೆ ಇತರರು ಇದ್ದರು.





