ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಜನಶಕ್ತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಲ್ ಅಶೋಕ್ ಅವರು ಅರಣ್ಯ ಇಲಾಖೆ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಇವರು, “ಮಲೆನಾಡಿನಲ್ಲಿ ಕಾಡಾನೆ ದಾಳಿಯಿಂದ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಮೊದಲೆಲ್ಲ ಮಲೆನಾಡಿನ ಭಾಗದಲ್ಲಿ ಕಾಡಾನೆ ಎನ್ನುವುದೇ ಇರಲಿಲ್ಲ. ಇತ್ತೀಚಿಗೆ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಇದರಿಂದ ಸುತ್ತಮುತ್ತಲಿನ ಜನರು ಓಡಾಡಲು ಭಯ ಪಡುತ್ತಿದ್ದಾರೆ” ಎಂದು ಹೇಳಿದರು.
“ಕಾಡಾನೆ ಹಾವಳಿ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದರೂ ಕೂಡ ಕಾಡಾನೆ ಹಿಡಿದು ಮತ್ತೆ ಈ ಭಾಗಕ್ಕೇ ಬಿಡುತ್ತಿರುವುದರಿಂದ ಮತ್ತಷ್ಟು ಸಾವುಗಳು ಸಂಭವಿಸುತ್ತಿವೆ. ಹಾಗೆಯೇ, ಇಂದು ಬೆಳಿಗ್ಗೆ ಎರಡು ಸಾವು ಸಂಭವಿಸಿದ್ದು, ಅರಣ್ಯ ಇಲಾಖೆ ಮತ್ತು ಅರಣ್ಯ ಸಚಿವರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಕಾಡಾನೆ ದಾಳಿಗೆ ಇಬ್ಬರು ಸಾವು
“ಮಲೆನಾಡಿನಲ್ಲಿ ಕಾಡಾನೆ ದಾಳಿಯಿಂದ ಹೆಚ್ಚು ಸಾವು ಸಂಭವಿಸುತ್ತಿವೆ. ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಕುಟುಂಬದವರಿಗೆ ಪರಿಹಾರ ಕೊಟ್ಟು ಕೈ ತೊಳೆದುಕೊಳ್ಳುವ ಅರಣ್ಯ ಇಲಾಖೆ, ಇಂತಹ ಘಟನೆ ಬಗ್ಗೆ ಮುಂಜಾಗರುಕತೆ ವಹಿಸಿ ಕಾಡಾನೆ ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸಬೇಕು. ಹಾಗೆಯೇ, ಅರಣ್ಯ ಇಲಾಖೆ ಹಾಗೂ ಅರಣ್ಯ ಸಚಿವರು ಕೂಡಲೇ ಗಮನ ವಹಿಸಿ ಕ್ರಮಕೈಗೊಳ್ಳಬೇಕು” ಎಂದು ಮಹಿಳಾ ಮುನ್ನಡೆ ರಾಧಾ ಹಾಗಲಗಂಚಿ ಈ ದಿನ.ಕಾಮ್ಗೆ ತಿಳಿಸಿದ್ದಾರೆ.





