ಚಲಿಸುತ್ತಿದ್ದ ಲಾರಿಯೊಂದು ಏಕಾಏಕಿ ಬೆಂಕಿಗೆ ಆಹುತಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಲಾರಿ ಬೆಂಕಿಗೆ ಅಹುತಿಯಾಗಿದೆ, ಜಾವಗಲ್ ನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಲಾರಿಯಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಭಸ್ಮವಾಗಿದೆ. ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳವೂ ಬೆಂಕಿಗೆ ಆಹುತಿಯಾಗಿದೆ.
ಇದನ್ನೂ ಓದಿದ್ದೀರಾ?ಕಡೂರು | ಕರ್ನಾಟಕ ಗ್ರಾಮೀಣ ಬ್ಯಾಂಕ್ : ನಕಲಿ ಚಿನ್ನಾಭರಣ ಪತ್ತೆ; ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಮತ್ತು ಕ್ಲೀನರ್ ಲಾರಿಯಿಂದ ಜಿಗಿದು ಒಟ್ಟು ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಲಾರಿಯಿಂದ ಹರಡಿದ ಬೆಂಕಿ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶಕ್ಕೂ ತಗುಲಿದ್ದು, ಕೆಲಕಾಲ ಆತಂಕದ ಸೃಷ್ಟಿಯಾಗಿತ್ತು ಎನ್ನಲಾಗಿದೆ. ಈ ಕುರಿತು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ, ಈ ಘಟನೆಯಿಂದ ಚಿಕ್ಕಮಗಳೂರು–ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು ಎನ್ನಲಾಗಿದೆ.





