ರಾಜ್ಯಾದ್ಯಂತ ಜೆಡಿಎಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟನೆ ಮಾಡಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಸಲುವಾಗಿ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಿಂತಾಮಣಿ ತಾಲೂಕಿಗೆ ಜುಲೈ 11ರಂದು ಆಗಮಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಬೇಕೆಂದು ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಜೆಕೆ ಕೃಷ್ಣಾರೆಡ್ಡಿ ಮನವಿ ಮಾಡಿದರು.
ಇಂದು ಚಿಂತಾಮಣಿ ತಾಲೂಕಿನ ಮುನಗನಹಳ್ಳಿ ಬಳಿಯ ಕಡಪ ಹೈವೇ ರಸ್ತೆಯಲ್ಲಿರುವ ಜೆಕೆ ಭವನದಲ್ಲಿ ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದಲ್ಲಿ ಜೆಡಿಎಸ್ ಸೊರಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೇರು ಮಟ್ಟದಿಂದ ಸಂಘಟನೆ ಮಾಡಲು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯದಲ್ಲಿ ಜನರೊಂದಿಗೆ ಜನತಾದಳ ಯಾತ್ರೆ ನಡೆಸುತ್ತಿದ್ದಾರೆ ಎಂದು ವಿವರಿಸಿದರು.
ಜುಲೈ 11ಕ್ಕೆ ತಾಲೂಕಿನ ಸಂತೇಕಲಹಳ್ಳಿಯಿಂದ ಕೈವಾರದ ಶ್ರೀ ಯೋಗಿ ನಾರಾಯಣ ಮಠಕ್ಕೆ ನಿಖಿಲ್ ಕುಮಾರಸ್ವಾಮಿ ರವರು ಭೇಟಿ ನೀಡಿ ತದನಂತರ ಚಿನ್ನಸಂದ್ರದಿಂದ ಜೆಕೆ ಭವನಕ್ಕೆ ಬಂದು ಸಭೆ ನಡೆಸಲಾಗುವುದು ಎಂದು ಹೇಳಿದರು.
ಇದನ್ನು ಓದಿದ್ದೀರಾ? ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ಸಾಗಣೆ: ಕ್ರಮಕ್ಕೆ ಒತ್ತಾಯ
ಈ ವರ್ಷದ ಕೊನೆಯಲ್ಲಿ ಬರುವ ಗ್ರಾಮ ಪಂಚಾಯಿತಿ, ತಾಲೂಕು ಜಿಲ್ಲಾ ಮತ್ತು ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರನ್ನು ಮಾನಸಿಕವಾಗಿ ಸಜ್ಜುಗೊಳಿಸುವ ನಿಟ್ಟಿನಲ್ಲಿ ಜನರೊಂದಿಗೆ ಜನತಾದಳ ಯಾತ್ರೆ ಪೂರಕವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ಬೈರೆಡ್ಡಿ,ನಗರಸಭಾ ಸದಸ್ಯರಾದ ಮುರಳಿ,ಮುಖಂಡರಾದ ಮಧು,ಸೇರಿದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.





