ದೇಶಕ್ಕೆ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿ 50 ವರ್ಷ ತುಂಬಿದ್ದು, ಕಾಂಗ್ರೆಸ್ ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಇಂದಿರಾ ಗಾಂಧಿ ಮಾಧ್ಯಮದವರಿಗೆ ನಿರ್ಬಂಧ ಹೇರಿ ಪ್ರಜಾಪ್ರಭುತ್ವವನ್ನು ದಮನ ಮಾಡಿದ್ದಾರೆ ಎಂದು ಆರೋಪಿಸಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸೋಮವಾರ ಕಾಂಗ್ರೆಸ್ ಕಚೇರಿಗೆ ಭಿತ್ತಿಪತ್ರ ಅಂಟಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ಜಿಲ್ಲಾ ಬಿಜೆಪಿ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗುತ್ತ ತುರ್ತು ಪರಿಸ್ಥಿತಿ ಹೇರಿಕೆ ಘಟನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
“ಇಂದಿರಾ ಗಾಂಧಿ ಅಧಿಕಾರದಲ್ಲಿದ್ದಾಗ ದೇಶಕ್ಕೆ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ದೇಶದ ದಿಕ್ಕು ತಪ್ಪಿಸಿದ್ದಾರೆ. ಅಲ್ಲದೆ, ಇದು ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಅಲ್ಲದೆ ಇಂದಿರಾ ಗಾಂಧಿ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಮನಬಂದಂತೆ ಅಧಿಕಾರ ಚಲಾಯಿಸಿ ಜನರನ್ನು ದಯನೀಯ ಪರಿಸ್ಥಿತಿಗೆ ತಂದಿದ್ದರು” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಆರಕ್ಷಣಾ ಇಲಾಖೆ ಒನಕೆ ಓಬವ್ವ ವೃತ್ತದಲ್ಲಿನ ಕಾಂಗ್ರೆಸ್ ಕಚೇರಿಗೆ ಬಿಗಿಭದ್ರತೆಯನ್ನು ಒದಗಿಸಲಾಗಿತ್ತು. ಪೊಲೀಸರು ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿ ತಲುಪುವುದಕ್ಕೆ ಬಿಡದೆ ಅಡ್ಡಗಟ್ಟಿ, ಸುಮಾರು 15ಕ್ಕಿಂತ ಹೆಚ್ಚು ಜನರನ್ನು ಬಂಧಿಸಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಸ್ಲಂ ನಿವಾಸಿಗಳ ಕುಂದುಕೊರತೆ ಸಭೆ ನಿಗದಿಗೆ ಒತ್ತಾಯ
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರುಳಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಜಿ ಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾರೆಡ್ಡಿ, ಅರುಣಕುಮಾರಿ, ಮಿನಾಕ್ಷಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುರೇಶ್, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ ಶಂಭು, ಮಂಜುಳಾ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.





