ಸರ್ಕಾರದ ಮಹಾತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19ರಿಂದ ತಾಲೂಕಿನಾದ್ಯಂತ ಪ್ರಾರಂಭವಾಗಿದ್ದು, ಈ ಸಂಬಂಧ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಹಶೀಲ್ದಾರ್ ಪ್ರಶಾಂತ್ ಕೆ ಪಾಟೀಲ್ ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹಿನ್ನೆಲೆಯಲ್ಲಿ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
“ಕಸಬಾ ಹೋಬಳಿ ನೋಡಲ್ ಅಧಿಕಾರಿಯಾಗಿ ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣಪ್ಪ, ಧರಂಪುರ ಹೋಬಳಿ- ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಉಲ್ಫೆಕ್ ಜೈಬ, ಐಮಂಗಳ ಹೋಬಳಿ – ಸಮಾಜ ಕಲ್ಯಾಣ ಅಧಿಕಾರಿ ದಿನೇಶ್, ಜೆಜೆ ಹಳ್ಳಿ ಹೋಬಳಿಗೆ ಹಿಂದುಳಿದ ಅಧಿಕಾರಿ ಚಿತ್ರ ಲಿಂಗಪ್ಪ ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಒಂದು ಸಾವಿರ ಫಲಾನುಭವಿಗಳಿಗೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ಒಂದು ಕೇಂದ್ರದಲ್ಲಿ ದಿನಕ್ಕೆ 50 ಮಂದಿ ಮಾತ್ರ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಇರುತ್ತದೆ” ಎಂದು ತಿಳಿಸಿದರು.
“ಹಿರಿಯೂರು ತಾಲೂಕಿನಲ್ಲಿ ಒಟ್ಟು 72 ಪ್ರಜಾ ಪ್ರತಿನಿಧಿಗಳ ನೇಮಕ ಕೇಂದ್ರಗಳಿದ್ದು, ಇದರ ಪೈಕಿ ಗ್ರಾಮ ಒನ್ 38 ಕೇಂದ್ರಗಳು ಮತ್ತು ಬಾಪೂಜಿ ಕೇಂದ್ರ 33 ಹಾಗೂ ನಗರದಲ್ಲಿ ಕರ್ನಾಟಕ ಒನ್ 01 ಕೇಂದ್ರದಲ್ಲಿ ಈ ಸೇವೆಯನ್ನು ಈಗಾಗಲೇ ಪ್ರಾರಂಭಿಸಿದೆ” ಎಂದು ಮಾಹಿತಿ ನೀಡಿದರು.
ತಾಲೂಕಿನ ಮಹಿಳಾ ಮತ್ತು ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ರಾಘವೇಂದ್ರ ಮಾತನಾಡಿ, “ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕುಟುಂಬದ ಯಜಮಾನಿ ಎಂದು ಹೆಸರು ನಮೂದಿಸಿರುವ ಮಹಿಳೆ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಅಂಥವರು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರದ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ ಉಚಿತವಾಗಿ ತಮ್ಮ ಹೆಸರು ನೊಂದಾಯಿಸಬೇಕು. ಕುಟುಂಬದ ಯಜಮಾನಿ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಗ್ಯಾರಂಟಿ ಯೋಜನೆಗಳಿಂದ 5 ರಿಂದ 6 ಸಾವಿರ ರೂ. ವರೆಗೂ ಪ್ರತಿ ತಿಂಗಳು ಉಳಿತಾಯ: ಕೃಷ್ಣಭೈರೇಗೌಡ
“ಜಿಎಸ್ಟಿ ರಿಟರ್ನ್ಸ್ ಸಲ್ಲಿಸುವವರಿಗೆ ಅವಕಾಶ ಇರುವುದಿಲ್ಲ. ಫಲಾನುಭವಿಯು ಆಧಾರ್ ಚೀಟಿಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಿಸಿರಬೇಕು” ಎಂದು ವಿವರಿಸಿದರು.
ಈ ವೇಳೆ ಹಲವು ಇಲಾಖೆಗಳ ಅಧಿಕಾರಿ ವರ್ಗದವರು ಸಭೆಯಲ್ಲಿ ಇದ್ದರು.





